Thursday, July 30, 2026

BDA Apartments

Home Front Page ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಸೆಪ್ಟಂಬರ್, 23,2024 (www.justkannada.in): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು.

ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ” ಮಾಡಿದರು.

ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ ಎಂದರು.

ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ‌ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ‌ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು.

ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.

ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದು

ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.

ಆರೋಗ್ಯ ಸಚಿವ  ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ.ರೇವಣ್ಣ ಸೇರಿ ಹಲವು ಮುಖಂಡರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: CM Siddaramaiah, 65 ambulances, inaugurated