ಕುಡಿಯುವ ನೀರು ಮತ್ತು ವಿದ್ಯುತ್‌ ಉತ್ಪಾದನೆ, ಸರಬರಾಜಿನಲ್ಲಿ ಕೊರತೆ ಆಗದಂತೆ ಕ್ರಮ ವಹಿಸಿ- ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ.

ಚಾಮರಾಜನಗರ,ಸೆಪ್ಟಂಬರ್,27,2023(www.justkannada.in): ಜೂನ್‌ನಿಂದ ಆಗಸ್ಟ್‌ವರೆಗೂ ಅಗತ್ಯವಾದಷ್ಟು ಮಳೆ ಆಗದ ಕಾರಣದಿಂದ ಬರದ ಮತ್ತು ಸಂಕಷ್ಟದ ಪರಿಸ್ಥಿತಿ ಇದೆ. ಹೀಗಾಗಿ ಕುಡಿಯುವ ನೀರು ಮತ್ತು ವಿದ್ಯುತ್‌ ಉತ್ಪಾದನೆ, ಸರಬರಾಜಿನಲ್ಲಿ ಕೊರತೆ ಆಗದಂತೆ ಕ್ರಮ ವಹಿಸಿ ಎಂದು ಚಾಮರಾಜನಗರ ಜಿಲ್ಲೆಯ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದರು.

ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ಧರಾಮಯ್ಯ, ರಾಜ್ಯದಲ್ಲಿ ಬರದ ಮತ್ತು ಸಂಕಷ್ಟದ ಪರಿಸ್ಥಿತಿ ಇದೆ. 161 ತೀವ್ರ ಬರಗಾಲ, 34 ತಾಲ್ಲೂಕುಗಳು ಸಾಧಾರಣ ಬರಗಾಲದ ಸ್ಥಿತಿ ಇದೆ. ಇದಕ್ಕೆ ಇನ್ನಷ್ಟು ತಾಲ್ಲೂಕುಗಳು ಸೇರಬಹುದು. ಡಿಸಿ ಮತ್ತು ಸಿಇಒಗಳ ಸಭೆಯಲ್ಲಿ ಕೆಲವು ನಿರ್ದೇಶನಗಳನ್ನು ನೀಡಿದ್ದೇನೆ. ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಸ್ಪಷ್ಟ ನಿರ್ದೇಶನ ನೀಡಿದ್ದೇನೆ. ಹಣಕ್ಕೆ ಯಾವುದೇ ಕೊರತೆ ಇಲ್ಲ.  ಯಾವುದೇ ಮೂಲದಿಂದಾದರೂ ಸರಿ. ಕುಡಿಯುವ ನೀರಿಗೆ ಕೊರತೆ ಆಗಬಾರದು. ಸಾರ್ವಜನಿಕರಿಂದ ದೂರುಗಳು ಬರಬಾರದು. ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾಯದರ್ಶಿಗಳು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ತಿಳೀಸಿದರು.

ಬರಗಾಲದ ಕಾರಣದಿಂದ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದ್ಯುತ್‌ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಕೆಲಸ ಹುಡುಕಿಕೊಂಡು ವಲಸೆ ಹೋಗುವ, ಗುಳೆ ತೆರಳುವ ಸ್ಥಿತಿ ಬಾರದಂತೆ, ನರೇಗಾ ಯೋಜನೆಯನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು. 150 ದಿನ ಕೆಲಸ ಕೊಡಬೇಕು. ಉದ್ಯೋಗ ಸೃಷ್ಟಿಯ ಇತರೆ ಸಾಧ್ಯತೆಗಳನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು.

ಮುಂದಿನ ದಿನಗಳಲ್ಲಿ ಜಾನವಾರುಗಳಿಗೆ ನೀರು, ಮೇವು ಕೊರತೆ ಆಗಬಾರದು. ಹೀಗಾಗಿ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಹೊರ ರಾಜ್ಯಗಳಿಗೆ ಮೇವು ಹೋಗದಂತೆ ತಡೆಯಬೇಕು. ರಾಸುಗಳಿಗೆ ಕಾಯಿಲೆ ಬರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಅಗತ್ಯ ಎಲ್ಲಾ ಲಸಿಕೆ ಮತ್ತು ಔಷಧಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು.

ಖಾಸಗಿಯಾಗಿ ಸಾಲ ಕೊಟ್ಟವರು ರೈತರಿಗೆ ಬಲವಂತದ ವಸೂಲಿ ಮಾಡದಂತೆ ಕ್ರಮ ಕೈಗೊಳ್ಳಬೇಕು. ಬರದ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಶೋಷಣೆ ಮಾಡದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಕೃಷಿ ಇಲಾಖೆ ರೈತರಿಗೆ ಮತ್ತೆ ಮತ್ತೆ ಬೀಜ, ಗೊಬ್ಬರ, ಔಷಧಿ ಸರಬರಾಜು ಮಾಡಬೇಕು. ಒಮ್ಮೆ ಕೊಟ್ಟ ಬಳಿಕ ಕೈಕಟ್ಟಿ ಕೂರಬಾರದು. ಯಾವುದೇ ಕಾರಣಕ್ಕೆ ಬೆಳೆಹಾನಿ ಸಂಭವಿಸಿದರೆ ಮತ್ತು ಹೊಸದಾಗಿ ರೈತರಿಗೆ ಇವೆಲ್ಲವನ್ನೂ ವಿತರಿಸಬೇಕು. ಪರ್ಯಾಯ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು. ಇದುವರೆಗೂ ನಾನು ಹೇಳಿದ ಎಲ್ಲವನ್ನೂ ಕಟ್ಟು ನಿಟ್ಟಾಗಿ ಪಾಲಿಸಬೇಕು. ಇವುಗಳ ಬಗ್ಗೆ ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಖಚಿತ ಎಂದು ಅಧಿಕಾರಿಗಳಿಗೆ ಸಿಎಂ ಸಿದ‍್ಧರಾಮಯ್ಯ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳು ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಸಿದ್ಧರಾಮಯ್ಯ ಸೂಚಿಸಿದರು.

ಚುನಾವಣೆಗೆ ಮೊದಲು ನಾವು ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ನಾಲ್ಕನ್ನು ಈಗಾಗಲೇ ಜಾರಿ ಮಾಡಿಯಾಗಿದೆ. ಈ ನಾಲ್ಕೂ ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಜನರಿಗೆ, ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇದರಲ್ಲಿ ಯಾವುದೇ ಲೋಪ ಆಗಬಾರದು ಎಂದು ಸಿದ್ಧರಾಮಯ್ಯ ತಿಳಿಸಿದರು.

ಸಭೆ ಆರಂಭವಾದಾಗ ಮಾತನಾಡಿದ ಸಿಎಂ ಸಿದ್ಧರಾಮಯ್ಯ,  ಎರಡು ಲಕ್ಷ ತೊಂಬತ್ತು ಸಾವಿರ ಪಡಿತರ ಚೀಟಿಗಳಿದ್ದೂ ಇನ್ನೂ ಒಂದು ಲಕ್ಷ 24 ಸಾವಿರ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿಯ ಹಣ ಇನ್ನೂ ತಲುಪಿಲ್ಲ ಏಕೆ ? ಲೋಪಗಳನ್ನು ಸರಿಪಡಿಸಲು 3 ತಿಂಗಳಾದರೂ ಏಕೆ ಆಗಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಆಹಾರ ಇಲಾಖೆಯ ಅಧಿಕಾರಿಯನ್ನು ಖಾರವಾಗಿ ಪ್ರಶ್ನಿಸಿ, ಸರ್ಕಾರದ ಸವಲತ್ತು ಪ್ರತಿಯೊಬ್ಬರಿಗೂ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ತಕ್ಷಣ ಏನೇ ಲೋಪಗಳಿದ್ದರೂ ಬಗೆಹರಿಸಿ ಜನರಿಗೆ ಸವಲತ್ತು ತಲುಪಿಸಿ, ಇಲ್ಲದಿದ್ದರೆ ಕ್ರಮ ಎದುರಿಸಲು ಸಿದ್ದರಾಗಿ ಎಂದು ಎಚ್ಚರಿಸಿದರು.

Key words: CM Siddaramaiah- instructs -no shortage – drinking – instructions – officials.