Wednesday, August 19, 2026

BDA Apartments

Home Front Page KPS ಶಾಲೆಗಳ ಆರಂಭ, ಶಿಕ್ಷಕರ ನೇಮಕಾತಿ: ಮಹತ್ವದ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

KPS ಶಾಲೆಗಳ ಆರಂಭ, ಶಿಕ್ಷಕರ ನೇಮಕಾತಿ: ಮಹತ್ವದ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,20,2026 (www.justkannada.in): ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು, 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.  ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು. ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದ್ದು, ಎಲ್ ಕೆ.ಜಿಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 ಶಾಲೆಗಳು  ಸಂಪೂರ್ಣವಾಗಿ ಸಿದ್ಧವಾಗಬೇಕು. ಈ ವರ್ಷ 800 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆರಂಭಿಸಲು ಟೆಂಡರ್ ಪ್ರಕ್ರಿಯೆ ಆದಷ್ಟು ಬೇಗನೆ ಪ್ರಾರಂಭಿಸಿ, ಕೆಪಿಎಸ್ ಶಾಲೆಗಳಿಗೆ ಶಾಲಾ ಬಸ್ ವ್ಯವಸ್ಥೆ ಸೌಲಭ್ಯವನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

15 ಸಾವಿರ ಶಿಕ್ಷಕರನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ತಕ್ಷಣ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಫಲಿತಾಂಶ ಸುಧಾರಣೆ.

ಈ ಬಾರಿ ಎಸ್ಎಸ್ಎಲ್ಸಿಯಲ್ಲಿ ಶೇ. 94.10ರಷ್ಟು ಫಲಿತಾಂಶ ದಾಖಲಾಗಿದ್ದು, ಕಳೆದ ವರ್ಷಕ್ಕಿಂತ ಶೇ.14.06 ಹೆಚ್ಚಾಗಿದೆ. ಪಿಯುಸಿಯಲ್ಲಿ ಈ ಬಾರಿ ಶೇ.86.48ರಷ್ಟು ಹೆಚ್ಚಳವಾಗಿದ್ದು, ಕಳೆದ ವರ್ಷಕ್ಕಿಂತ ಶೇ. 13 ಹೆಚ್ಚಳವಾಗಿದೆ. ಎಸ್ಎಸ್ಎಲ್ ಸಿಯಲ್ಲಿ ಈ ವರ್ಷ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 2393  ಇದ್ದು ಕಳೆದ ವರ್ಷ 766 ಶಾಲೆಗಳು ಶೇ.100ರಷ್ಟು ಫಲಿತಾಂಶ ದಾಖಲಿಸಿದ್ದವು.

ಈ ಬಾರಿ ಎಸ್ ಎಸ್ ಎಲ್ಸಿಯಲ್ಲಿ ಎಸ್ ಮತ್ತು ಎಸ್ಟಿ ವಿದ್ಯಾರ್ಥಿಗಳ ಫಲಿತಾಂಶ ಶೇ.18 ರಷ್ಟು ಹೆಚ್ಚಳವಾಗಿದೆ. ಇದೇ ರೀತಿ ಎಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಫಲಿತಾಂಶ ಗಣನೀಯವಾಗಿ ಸುಧಾರಣೆಯಾಗಿದೆ. ಕೆಟಗರಿ-1 ಶೇ.16.6, 2ಎ-ಶೇ. 11.5, 2 ಬಿ- ಶೇ.18, 2ಬಿ-ಶೇ.18, 3ಎ- ಶೇ. 8.12, 3ಬಿ- ಶೇ.10 ಫಲಿತಾಂಶ ಸುಧಾರಣೆಯಾಗಿದೆ.

ಕಲ್ಯಾಣ ಕರ್ನಾಟಕದಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ ಸುಧಾರಣೆ ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಶೇ.2ರಷ್ಟು ಹೆಚ್ಚಾಗಿದೆ. ಈ ಬಾರಿ ಯಾವುದೇ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಿಲ್ಲ. ಈ ಬಾರಿ ಎಸ್ಎಸ್ಎಲ್ ಸಿ ಮೂರನೇ ಅಂತಿಮ ಪರೀಕ್ಷೆ ಇರುವುದಿಲ್ಲ. 2026ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣ  ಪ್ರಮಾಣ ಶೇಕಡ 86.48 . 2025ರಲ್ಲಿ  ಶೇಕಡ 73.45 ಉತ್ತೀರ್ಣ ಪ್ರಮಾಣ ಇದ್ದು ಶೇಕಡ 13.03 ಹೆಚ್ಚಳವಾಗಿದೆ

ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು ಪ್ರಸಕ್ತ ಸಾಲಿನಲ್ಲಿ SSLC ಉತ್ತೀರ್ಣ ಪ್ರಮಾಣ ಗ್ರಾಮೀಣ ಪ್ರದೇಶದಲ್ಲಿ ಶೇಕಡ 94.80  ದಾಖಲಾಗಿದೆ. ನಗರ ಪ್ರದೇಶದಲ್ಲಿ ಶೇಕಡ 93.20 ದಾಖಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಾಧನೆ ಪ್ರಸಕ್ತ ಸಾಲಿನಲ್ಲಿ ಶೇಕಡ 87.62, ನಗರ ಪ್ರದೇಶದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇಕಡ 85.95 ದಾಖಲಾಗಿದೆ. ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳೊಂದಿಗೆ ಉಚಿತ ನೋಟ್ ಬುಕ್ ವಿತರಿಸುವ ಬೇಡಿಕೆ ಪರಿಶೀಲನೆ ಮಾಡಲಾಗುತ್ತದೆ.

ಉತ್ತಮ ಫಲಿತಾಂಶದ ಹಿಂದಿನ ಪ್ರಯತ್ನವನ್ನು ಅವಲೋಕಿಸಿದರೆ ಮುಖ್ಯಮಂತ್ರಿಗಳ ಸ್ಪಷ್ಟ ನಿರ್ದೇಶನದೊಂದಿಗೆ ರಾಜ್ಯದಾದ್ಯಂತ ಪೋಷಕರು ಹಾಗೂ ಶಿಕ್ಷಕರ ಸಭೆ ನಡೆಸಲಾಗಿತ್ತು.  ಫಲಿತಾಂಶ ಉತ್ತಮಪಡಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿತ್ತು. ಪಠ್ಯ ಆಧಾರಿತ ಅಧ್ಯಯನ ಕ್ರಮ ರೂಪಿಸಲಾಗಿತ್ತು. ರಾಜ್ಯಮಟ್ಟದಲ್ಲಿ ಪೂರ್ವ ಭಾವಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಕಾಲ ಕಾಲಕ್ಕೆ ಶಿಕ್ಷಕರಿಗೆ ತರಬೇತಿ ನೀಡುವ ಮೂಲಕ ಮೇಲ್ವಿಚಾರಣೆ ಕೈಗೊಳ್ಳಲಾಗಿತ್ತು.   ಕಲ್ಯಾಣ ಕರ್ನಾಟಕ ಭಾಗದಲ್ಲಿ ಫಲಿತಾಂಶ ಉತ್ತಮಗೊಳ್ಳಲು ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು  ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದರು.

Key words: CM Siddaramaiah, Meeting, Education Department