Friday, August 14, 2026

BDA Apartments

Home Front Page ಗೃಹಲಕ್ಷ್ಮೀ ಹಣದಿಂದ ಪರೀಕ್ಷೆ ಶುಲ್ಕ ಕಟ್ಟಿದ ವಿದ್ಯಾರ್ಥಿ: ಸಂತಸ ವ್ಯಕ್ತಪಡಿಸಿ ಶುಭಹಾರೈಸಿದ ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮೀ ಹಣದಿಂದ ಪರೀಕ್ಷೆ ಶುಲ್ಕ ಕಟ್ಟಿದ ವಿದ್ಯಾರ್ಥಿ: ಸಂತಸ ವ್ಯಕ್ತಪಡಿಸಿ ಶುಭಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್,19,2024 (www.justkannada.in): ಬಿ.ಇಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ತನ್ನ ತಾಯಿಗೆ ಬಂದ ಗೃಹಲಕ್ಷ್ಮೀ ಯೋಜನೆ ಹಣದಿಂದ ಪರೀಕ್ಷಾ ಶುಲ್ಕ ಕಟ್ಟಿದ್ದು ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ವಿದ್ಯಾರ್ಥಿಯ ಪೋಸ್ಟ್ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಬಡತನದ ಕಾರಣಕ್ಕಾಗಿ ಶಿಕ್ಷಣ ವಂಚಿತರಾಗಿರುವ ಮಕ್ಕಳನ್ನು ನನ್ನ ಬಾಲ್ಯದಿಂದಲೂ ನೋಡುತ್ತಾ ಬಂದಿದ್ದೇನೆ, ಇಂದಿಗೂ ನಮ್ಮ ನಡುವೆ ಅಂತಹ ಉದಾಹರಣೆಗಳು ಸಾಕಷ್ಟು ಸಿಗಲಿವೆ. ಸ್ವತಃ ನಾನೇ ನನ್ನಿಷ್ಟದ ಕಾನೂನು ವ್ಯಾಸಂಗಕ್ಕಾಗಿ ನಡೆಸಿದ ಹೋರಾಟ ಈ ಕ್ಷಣ ನೆನಪಾಗುತ್ತಿದೆ.

ಅಂದು ಯಾವುದೋ ಕಾರಣಕ್ಕೆ ಶಿಕ್ಷಣ ಮೊಟಕುಗೊಳಿಸಿ, ಕೃಷಿಯಲ್ಲಿ ತೊಡಗಿಕೊಂಡಿದ್ದರೆ ಇಂದು ಮುಖ್ಯಮಂತ್ರಿಯಾಗಿ ಕೋಟ್ಯಂತರ ಕನ್ನಡಿಗರ ಸೇವೆ ಮಾಡುವ ಭಾಗ್ಯ ನನ್ನದಾಗುತ್ತಿರಲಿಲ್ಲ. ಬಡತನದಲ್ಲೂ ಕಲಿಕೆಯೆಡೆಗಿನ ಈ ಯುವಕನ ಹಂಬಲ ಕಂಡು ನನಗೆ ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು.

ಗೃಹಲಕ್ಷ್ಮಿ ಯೋಜನೆ ನಿಜವಾಗಿ ತಲುಪಬೇಕಿರುವುದು ಮತ್ತು ತಲುಪುತ್ತಿರುವುದು ಇಂತಹ ಜನರನ್ನೆ. ತನಗೆ ಬಂದ ಗೃಹಲಕ್ಷ್ಮಿಯ ಹಣವನ್ನು ಕಡುಬಡತನದಲ್ಲೂ ಕೂಡಿಟ್ಟು ಮಗನ ಶಿಕ್ಷಣಕ್ಕಾಗಿ ಕೊಟ್ಟ ಆ ತಾಯಿಯ ಪ್ರೀತಿ – ಕಾಳಜಿಗೆ ಧನ್ಯವಾದ. ಬಿ.ಇಡಿ ಶಿಕ್ಷಣ ಮುಗಿಸಿ ಶಿಕ್ಷಕನಾಗಿ ನೂರಾರು ಮಕ್ಕಳ ಬದುಕು ರೂಪಿಸುವಂತಾಗು. ಇಂದು ನೀನು ಧನ್ಯವಾದ ತಿಳಿಸಿದ್ದಕ್ಕಿಂತ ಹೆಚ್ಚು ಖುಷಿ ಅಂದು ನನಗಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಶುಭಹಾರೈಸಿದ್ದಾರೆ.

ಗೃಹಲಕ್ಷ್ಮೀ ಹಣದಿಂದ ಪರೀಕ್ಷಾ ಶುಲ್ಕ ಕಟ್ಟಿರುವ ಬಗ್ಗೆ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದ  ವಿದ್ಯಾರ್ಥಿ, ಗೃಹಲಕ್ಷ್ಮಿ ಹಣದಿಂದ B.Ed 4ನೇ ಸೆಮಿಸ್ಟರ್ ಪರೀಕ್ಷೆಯ ಶುಲ್ಕವನ್ನ ಕಟ್ಟಿದೆ. ಕುಟುಂಬ ಸಾಲದ ಸುಳಿಯಲ್ಲಿದೆ ತಂದೆ ಬಳಿ ಹಣ ಕೇಳೋಕೆ ಆಗದೆ ತಾಯಿ ಉಳಿಸಿಟ್ಟಿದ್ದ ಯೋಜನೆಯ ಹಣ ಸಹಾಯಕ್ಕೆ ಬಂದಿದೆ. ಸಂಕಷ್ಟದ ಸಮಯದಲ್ಲಿ ನನ್ನನ್ನ ಕಾಪಾಡಿದೆ. ಸಿದ್ದರಾಮಯ್ಯ ಅವರಿಗೆ ಎಷ್ಟ್ ಧನ್ಯವಾದ ಹೇಳಿದ್ರು ಸಾಲಲ್ಲ ಎಂದು ಬರೆದುಕೊಂಡಿದ್ದರು.

Key words: CM Siddaramaiah, student, exam fee, Grihalakshmi,  money