ರಾಜಕೀಯ ಕಾರಣಕ್ಕಾಗಿ ನನ್ನ ವಿರುದ್ಧ ದೂರು- ಮಾಜಿ ಸಚಿವ ಅರಗ ಜ್ಞಾನೇಂದ್ರ.

ಶಿವಮೊಗ್ಗ, ಆಗಸ್ಟ್ 4,2023(www.justkannada.in) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ತಮ್ಮ ವಿರುದ್ಧ ದೂರು ದಾಖಲಾದ ವಿಚಾರ ಕುರಿತು ಮಾಜಿ ಗೃಹಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ನನ್ನ ವಿರುದ್ಧ ರಾಜಕೀಯ ಕಾರಣಕ್ಕಾಗಿ ದೂರು ನೀಡಿದ್ದಾರೆ. ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಆಡದೇ ಇರುವ ಮಾತು ಬಂದಿದೆ. ಪ್ರತಿಭಟನೆ ವೇಳೆ ಮಾತನಾಡುವಾಗ ಖಂಡ್ರೆ ಬದಲು ಖರ್ಗೆ ಅಂತಾ ಹೇಳಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅಂತಾ ಹೇಳಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ವೈಯಕ್ತಿಕವಾಗಿ ಎಲ್ಲಿಯೂ ಹೇಳಿಲ್ಲ. ಯಾರ ಮನಸ್ಸಿಗಾದರೂ ಕಸಿವಿಸಿ ಆದರೆ ಕ್ಷಮೆ ಯಾಚನೆ ಮಾಡಿದ್ದೇನೆ ಎಂದು ತಿಳಿಸಿದರು.

ಬಣ್ಣದ ಬಗ್ಗೆ ವೈಯಕ್ತಿಕವಾಗಿ ನಿಂದನೆ ಮಾಡಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ‌ ನಾನಲ್ಲ. ಅವರ ಜೊತೆ ಕೆಲಸ ಮಾಡಿದ್ದೇನೆ ಗೌರವದಿಂದ ನೋಡುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅಂದಿಲ್ಲ, ಕಾಂಗ್ರೆಸ್​ನವರು ಈ ವಿಚಾರವನ್ನು ದೊಡ್ಡದು ಮಾಡುತ್ತಿದ್ದಾರೆ. ಕೆಲವು ಕಡೆ ನನ್ನ ಹೇಳಿಕೆ ಬಗ್ಗೆ ದೂರು ಕೊಟ್ಟಿದ್ದಾರೆ. ನ್ಯಾಯಾಂಗದ ಮೇಲೆ ನನಗೆ ಗೌರವ ಇದೆ. ಉತ್ತರ ಕರ್ನಾಟಕದ ಜನರ ಬಗ್ಗೆ ದ್ವೇಷದ ಭಾವನೆಯಿಂದ ಏನು ಹೇಳಿಲ್ಲ ಎಂದು ಅರಗ ಜ್ಞಾನೇಂದ್ರ ತಿಳಿಸಿದರು.

Key words: Complaint -against -me – political- reasons-Former Minister -Araga Gyanendra