ಮೇ 15ರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ: ಜೂನ್1 ರಿಂದ ನೀವು ಕರೆಂಟ್ ಬಿಲ್ ಕಟ್ಟಬೇಡಿ-ಡಿ.ಕೆ ಶಿವಕುಮಾರ್.

ಮಂಡ್ಯ, ಏಪ್ರಿಲ್,29,2023(www.justkannada.in):  ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಮೇ 15ರಿಂದ ನಮ್ಮ ಕಾಂಗ್ರೆಸ್ ಸರ್ಕಾರ ಬರಲಿದ್ದು ಜೂನ್ 1 ರಿಂದ ನೀವು ಕರೆಂಟ್ ಬಿಲ್ ಕಟ್ಟಬೇಡಿ ಎಂದು ರಾಜ್ಯದ ಜನರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಮಳವಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್,  ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ನೀಡಿದೆ.  ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಅಭಿವೃದ್ಧಿಯಾಗಲಿದೆ. ಮಂಡ್ಯದಲ್ಲಿ ಕಳೆದ ಬಾರಿ ಒಂದು ಸೀಟು ಗೆಲ್ಲಲು ಆಗಿಲ್ಲ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿ  ಗೆಲ್ಲಿಸಿ ಎಂದು ಮನವಿ ಮಾಡಿದರು.

ಮೇ 15ರಿಂದ ಹೊಸ ಸರ್ಕಾರ ಬರುತ್ತದೆ. ಜೂನ್ 1ರಿಂದ ಕರೆಂಟ್ ಬಿಲ್​ ಕಟ್ಟಬೇಡಿ. ವರ್ಷಕ್ಕೆ ಪ್ರತಿ ಕುಟುಂಬಕ್ಕೆ 24 ಸಾವಿರ ರೂಪಾಯಿ ಬರುತ್ತದೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ಕೊಡುತ್ತೇವೆ. ಬಡವರು ಹಸಿವಿನಿಂದ ಬಳಲಬಾರದು ಎಂದು 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಯುವಕರಿಗೆ ಕೆಲಸ ಕೊಡುತ್ತೇವೆ ಎಂದು ಬಿಜೆಪಿ ಹೇಳಿತ್ತು. ಆದರೆ ಆಮೇಲೆ ಪಕೋಡ ಮಾರಿ ಅಂತ ಮೋದಿಯವರು ಹೇಳಿದರು. ಹೀಗಾಗಿ ಪದವಿ ಮಾಡಿರುವವರಿಗೆ ಪ್ರೋತ್ಸಾಹ ಧನ ನೀಡುತ್ತೇವೆ. ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Congress-government – state-May 15-DK Shivakumar.