ವಿಧಾನಸಭೆಯಲ್ಲಿ ಕಾಂಗ್ರೆಸ್ ಧರಣಿ: ಕಲಾಪ ಮುಂದೂಡಿಕೆ.

ಬೆಂಗಳೂರು,ಫೆಬ್ರವರಿ,17,2022(www.justkannada.in): ಕೇಸರಿ ಧ್ವಜ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿಧಾನ ಸಭೆಯಲ್ಲಿ ಇಂದು ಸಹ ಕಾಂಗ್ರೆಸ್ ಸದಸ್ಯರ ಧರಣಿ ಮುಂದುವರೆಸಿದ್ದು ಈ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನ ಮಧ್ಯಾಹ್ನ 3ಗಂಟೆಗೆ ಮುಂದೂಡಿದರು.

ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದಿದ್ದು ನಿನ್ನೆಯಿಂದಲೂ  ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಮಧ್ಯೆ ಇಂದು ಸಹ ಸದನದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದರು. ಕಾಂಗ್ರೆಸ್ ಸದಸ್ಯರ ಧರಣಿ ಗದ್ದಲದ ನಡುವೆ ಪ್ರಶ್ನೋತ್ತರ ಕಲಾಪ ಆರಂಭವಾಯಿತು.

ಆದರೆ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ಗದ್ದಲ ಜೋರಾದ ಹಿನ್ನೆಲೆ  ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನ ಮಧ್ಯಾಹ್ನ 3ಗಂಟೆಗೆ ಮುಂದೂಡಿದರು.

Key words: congress-protest-session