ಸಂವಿಧಾನದ ಮುಟಿದ್ರೆ ನೀವ್ ನಾಶವಾಗ್ತಿರ: ಸಿದ್ದು ಖಡಕ್ ವಾರ್ನಿಂಗ್.!

ಮೈಸೂರು,ಏಪ್ರಿಲ್,2,2024 (www.justkannada.in): ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ. ಬಿಜೆಪಿಯವರಿಗೆ ಎಚ್ಚರಿಕೆ ಕೊಡುತ್ತೇನೆ. ಸಂವಿಧಾನ ಮುಟ್ಟಿದ್ರೆ ನೀವು ನಾಶವಾಗ್ತೀರಾ ಎಂದು ಸಿಎಂ ಸಿದ್ದರಾಮಯ್ಯ ನೇರಾನೇರ ಎಚ್ಚರಿಕೆ ಕೊಟ್ಟರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 45ಕ್ಕೂ ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರುಗಳನ್ನು ಹಾಗೂ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದರು.

ನಾನು ಮುಖ್ಯಮಂತ್ರಿ ಆಗಿರುವುದಕ್ಕೆ, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದಿಸಿದರು.

ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ನಾವೆಲ್ಲಾ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕು ಎಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು.

ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ? ಮತ್ತೇಕೆ ಬಿಜೆಪಿ ಕಡೆ ಮುಖ ಮಾಡಬೇಕು ಎಂದು ಪ್ರಶ್ನಿಸಿದರು.

ಶೂದ್ರರಿಗೆ BJP-RSS ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ: ಸಿ.ಎಂ.ಎಚ್ಚರಿಕೆ

ಶೂದ್ರರಿಗೆ BJP-RSS ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ. ಶೂದ್ರರು, ದಲಿತರನ್ನು ಕೇವಲ ಬಳಸಿಕೊಳ್ಳುತ್ತಾರೆ.  ಆದರೆ RSSನ ಒಳಗೆ ಪ್ರವೇಶ ಕೊಡುವುದಿಲ್ಲ. ಆದ್ದರಿಂದ RSS ಕಡೆಗೆ ತಲೆ ಕೂಡ ಹಾಕಬೇಡಿ ಎಂದು ಕರೆ ನೀಡಿದರು.

ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು ಇವರೇ ತಾನೇ?

ದಲಿತರು, ಶೂದ್ರರು, ಹಿಂದುಳಿದವರ ವಿರೋಧಿಯಾದ BJP-RSS ಮೀಸಲಾತಿಯನ್ನೂ ವಿರೋಧಿಸುತ್ತದೆ. ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು, ನಮ್ಮವರು ಬೆಂಕಿ ಹಚ್ಚಿಕೊಂಡು ಸಾಯುವಂತೆ ಮಾಡಿದವರು ಇವರೇ ತಾನೇ? ನಮ್ಮ ಶತ್ರುಗಳ ಜತೆಗೆ ಈ ದೇಶದ ಶೂದ್ರರು, ದಲಿತರು, ಹಿಂದುಳಿದವರು ಏಕೆ ಹೋಗಬೇಕು ಎಂದು ಪ್ರಶ್ನಿಸಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್  ಅವರು ನಾನು ಹಿಂದುವಾಗಿ ಸಾಯುವುದಿಲ್ಲ ಎಂದು ಹೇಳಿ ಬೌದ್ದ ಧರ್ಮಕ್ಕೆ ಹೋಗಿದ್ದಕ್ಕೆ ಮುಖ್ಯ ಕಾರಣ ಜಾತಿ ಅಸಮಾನತೆ, ಮತ್ತು ಸಾಮಾಜಿಕ ಅಸಮಾನತೆಯೇ ಕಾರಣ ಎಂದರು.

ರಾಷ್ಟ್ರಮಟ್ಟದಲ್ಲೂ ನಮ್ಮ ಕಾರ್ಯಕ್ರಮ ಜಾರಿ

ಕೇಂದ್ರದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಕಡಿಮೆ ಇದೆ. ನಾವು ಅಧಿಕಾರಕ್ಕೆ ಬಂದರೆ ನಾವು ರಾಜ್ಯದಲ್ಲಿ ತಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ಪರವಾದ ಕಾನೂನುಗಳನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೆ ತರಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಅವರ ಜತೆಗೂ ಮಾತಾಡಿ ಪ್ರಣಾಳಿಕೆಯಲ್ಲಿ ಸೇರಿಸಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Constitution, CM Siddaramaiah, Warning