ಮೈಸೂರು ಅರಮನೆಯಲ್ಲಿ ಖಾಸಗಿ ದಸರಾ ಸಡಗರ: ಇಂದು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಮೈಸೂರು, ಅಕ್ಟೋಬರ್ 15, 2023(www.justkannada.in): ಮೈಸೂರು ಅರಮನೆಯಲ್ಲಿ ಖಾಸಗಿ ದಸರಾ ಸಡಗರ ಆರಂಭವಾಗಿದೆ. ಬೆಳಗ್ಗೆ 5.30 ಗಂಟೆಯಿಂದ ಅರಮನೆಯಲ್ಲಿ ಪೂಜಾ ವಿಧಾನಗಳು ಆರಂಭವಾಗಿವೆ.

ಬೆಳಗ್ಗೆ 6 ಗಂಟೆಯಿಂದ 6.25ರ ಶುಭ ಮುಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆ ನಡೆದಿದ್ದು, ಬೆಳಗ್ಗೆ 07.05 ರಿಂದ 7.45ರ ಶುಭ ಲಗ್ನದಲ್ಲಿ ಕಂಕಣಧಾರಣೆ ನಡೆದಿದೆ.
ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಕಂಕಣಧಾರಣೆ ನೆರವೇರಿದೆ.
ಅರಮನೆ ವಾಣಿವಿಲಾಸ ಅರಮನೆಯಲ್ಲಿ ಕಂಕಣಧಾರಣೆ ನೆರವೇರಿದೆ.

ಇನ್ನು ಬೆಳಗ್ಗೆ 9.45ಕ್ಕೆ ಅರಮನೆ ಸವಾರಿ ತೊಟ್ಟಿಗೆ ಗೋಶಾಲೆಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಆನೆ, ಪಟ್ಟದ ಹಸು ಆಗಮನವಾಗಲಿದೆ. ಬೆಳಗ್ಗೆ 10.15ಕ್ಕೆ ಕಳಸ‌ ಪೂಜೆ, ಸಿಂಹಾಸನ‌ ಪೂಜೆ ನಡೆಯಲಿದೆ. ಬೆಳಗ್ಗೆ 11.30ರಿಂದ 11.50ಕ್ಕೆ ಖಾಸಗಿ ದರ್ಬಾರ್ ನಡೆಯಲಿದ್ದು,
ಯದುವೀರ್ ಒಡೆಯರ್ ಅವರು ಸಿಂಹಾಸನವೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ಮಧ್ಯಾಹ್ನ 1.45 ರಿಂದ 02.05 ತಾಯಿ ಚಾಮುಂಡೇಶ್ವರಿ ಫೋಟೋ ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ರವಾನೆಯಾಗಲಿದೆ. ಅರಮನೆಯಲ್ಲಿ ದಸರಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಇಂದು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.