ಮತದಾರರಿಗೆ ಬೆದರಿಕೆ, ಆಮಿಷ ಆರೋಪ: FIR ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಏಪ್ರಿಲ್ 23,2024 (www.justkannada.in):  ಮತದಾರರಿಗೆ ಆಮಿಷ ಮತ್ತು ಬೆದರಿಕೆ ಹಾಕಿರುವ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಪ್ರಶ್ನಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ರಾಜರಾಜೇಶ್ವರಿ ನಗರದ ಅಪಾರ್ಟ್​ಮೆಂಟೊಂದರಲ್ಲಿ ಮತಯಾಚನೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕಿ ಅವರನ್ನು ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿತ್ತು. ನಂತರ ಆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ಸಂಬಂಧ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಡಿಕೆ ಶಿವಕುಮಾರ್ ವಿರುದ್ಧ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು.

ತಮ್ಮ ವಿರುದ್ದ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ಡಿಸಿಎಂ ಡಿಕೆ ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜರಾಜೇಶ್ವರಿ ನಗರದ ಅಪಾರ್ಟ್​ಮೆಂಟೊಂದರಲ್ಲಿ ಮತಯಾಚನೆ ಮಾಡಲು ತೆರಳಿದ್ದ ಡಿಕೆ ಶಿವಕುಮಾರ್, ನಾನು ಇಲ್ಲಿಗೆ ಬ್ಯುಸಿನೆಸ್ ಡೀಲ್​ ಮಾಡಲು ಬಂದಿದ್ದೇನೆ. ನಿಮಗೆ ಅಪಾರ್ಟ್​​ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ನಿಮಗೆ ಹಸ್ತಾಂತರಿಸುವ ವ್ಯವಸ್ಥೆ ಮಾಡುತ್ತೇನೆ ಎಂದು ಆಮಿಷವೊಡ್ಡಿದ್ದರು ಎಂದು ಬಿಜೆಪಿ ಆರೋಪಿಸಿತ್ತು.

Key words: DCM, DK Shivakumar, High Court, FIR