ಅಂತರ್ಜಲ ಮಟ್ಟವನ್ನು ಅಭಿವೃದ್ಧಿ ಪಡಿಸಿ, ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮವಹಿಸಿ-ಸಚಿವ ಪ್ರಿಯಾಂಕ ಖರ್ಗೆ ಸೂಚನೆ.

ಮೈಸೂರು ನವೆಂಬರ್,3,2023(www.justkannada.in): ಮೈಸೂರು ಜಿಲ್ಲೆಯಲ್ಲಿ ಕಾವೇರಿ, ಕಪಿಲಾ ನದಿಗಳು ಹರಿಯುವ ಜಿಲ್ಲೆಯಾಗಿದ್ದು ಇಲ್ಲಿ ನೀರಿನ ಲಭ್ಯತೆ ಹೆಚ್ಚಿದೆ. ಸಿಗುವ ನೀರನ್ನು ಇಂಗಿಸುವ ಮೂಲಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ಅಭಿವೃದ್ಧಿ ಪಡಿಸಿ, ಇದರಿಂದ ಕುಡಿಯುವ ನೀರಿನ ಕೊರತೆ ಆಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ  ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬರ ಇದೆ. ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು.  ಮುಂದಿನ 6 ತಿಂಗಳುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸಿ, ಕುಡಿಯುವ ನೀರು ಪೂರೈಸುವ ಕ್ರಮಗಳನ್ನು ಗುರುತಿಸಿಕೊಳ್ಳಿ. ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸುವ ಮುನ್ನ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ  ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನರೇಗಾ ಅಡಿ ಮಾನವ ದಿನಗಳ ಸೃಜನೆಯಲ್ಲಿ ಟಿ ನರಸೀಪುರ ನಂಜನಗೂಡು ಹಾಗೂ ಪಿರಿಯಾಪಟ್ಟಣ ತಾಲ್ಲೂಕುಗಳು 50% ಗಿಂತ ಕಡಿಮೆ ಇದೆ. ಈ ಬಾರಿ ಎಲ್ಲಾ ಕಡೆ ಬರ ಇದೆ. ಬರ ಇರುವುದರಿಂದ ನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನಗಳ ಕೆಲಸ ಆಗಬೇಕಿತ್ತು. ರಾಜ್ಯದಲ್ಲಿ 13 ಕೋಟಿ ಮಾನವ ದಿನಗಳ ಗುರಿ ಇತ್ತು ಇದರಲ್ಲಿ 10 ಕೋಟಿ ಮಾನವ ದಿನಗಳ ಗುರಿ ಸಾಧಿಸಿದ್ದೇವೆ. ಆದರೆ ಜಿಲ್ಲೆಯಲ್ಲಿ ಪ್ರಗತಿ ಉತ್ತಮವಾಗಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಮೈಸೂರು ಜಿಲ್ಲೆಯಲ್ಲಿ 34 ಲಕ್ಷ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿದೆ. ಆರ್ಥಿಕ ವರ್ಷದ ಅಂತ್ಯದೊಳಗೆ ಈ ಗುರಿ ಸಾಧಿಸಬೇಕು. ನಂಜನಗೂಡು, ಚಾಮುಂಡಿ ಬೆಟ್ಟದ ವ್ಯಾಪ್ತಿ ಹಾಗೂ ಜಿಲ್ಲೆಯ ಇತರೆ ಕಡೆ ಸೈಕಲ್ ಅಗರಬತ್ತಿ ಅವರೊಂದಿಗೆ ಎನ್ಆರ್ ಎಲ್ ಎಂ ಯೋಜನೆಯಡಿ ಟೈ ಅಪ್ ಆಗಿ ಗುಡಿ ಕೈಗಾರಿಕೆಗಳನ್ನು ಉತ್ತೇಜಿಸುವ ಯೋಜನೆಗಳನ್ನು ರೂಪಿಸಲಾಗುವುದು. ಮೈಸೂರು ಜಿಲ್ಲೆ ಪ್ರವಾಸಿ ತಾಣಗಳನ್ನು ಹೆಚ್ಚು ಹೊಂದಿದ್ದು, ಇಲ್ಲಿ ಇರುವ ಪುರಾತನ ಕಲ್ಯಾಣಿಗಳನ್ನು ನರೇಗಾ ಯೋಜನೆಯಡಿ ಸ್ವಚ್ಛಗೊಳಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಗಳಲ್ಲಿ ಅಕ್ರಮಗಳು ಆಗಿರುವ ಕುರಿತು ಸೋಷಿಯಲ್ ಆಡಿಟ್ ನಲ್ಲಿ ರಿಕವರಿಗೆ ಬರೆದಿರುವ ಮೊತ್ತವನ್ನು ಸಂಬಂಧಿಸಿದ ಅಧಿಕಾರಿಗಳಿಂದ ವಸೂಲಿ ಮಾಡಬೇಕು. ಬ್ಯಾಂಬೋ ಕಲ್ಟಿವೇಶನ್ ಅನ್ನು ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ, ಹುಣಸೂರು, ಪಿರಿಯಾಪಟ್ಟಣ ತಾಲ್ಲೂಕಿನ ಅರಣ್ಯ ಪ್ರದೇಶಗಳಲ್ಲಿ ಮಾಡಲು ಅವಕಾಶವಿದೆ. ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಶೇಕಡಾ 20ರಷ್ಟು  ಕಾಮಗಾರಿಗಳು ಬಾಕಿ ಉಳಿದಿವೆ. ಇವುಗಳನ್ನು ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಜಲಜೀವನ್ ಮಿಷನ್ ಯೋಜನೆಯಡಿ ಏಕ ಗ್ರಾಮ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಹಂತ 1 ರಿಂದ 4 ಹಂತಗಳ ಕಾಮಗಾರಿಗಳು ಬಾಕಿ ಉಳಿದಿವೆ. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಲ್ಲಿ ಕಾಮಗಾರಿಗಳನ್ನು ಮುಗಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿಯು ಸಮರ್ಪಕವಾಗಿ ಆಗಿಲ್ಲ.  ತೆರಿಗೆ ವಸೂಲಾತಿಯಲ್ಲಿ ನಿಗದಿತ ಗುರಿ ಮುಟ್ಟಿಲ್ಲ. ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಗಳ ಸಂಬಳ ನೀಡಲು ಕೊರತೆ ಉಂಟಾಗುತ್ತಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಿ ತೆರಿಗೆ ವಸೂಲಾತಿ ಹೆಚ್ಚಿಸಬೇಕು ಎಂದು ಸೂಚನೆ ನೀಡಿದರು.

ಸಾರ್ವಜನಿಕರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ದೂರು ಬಂದಾಗ ಪರಿಶೀಲನೆ ನಡೆಸಬೇಕು. ನವೆಂಬರ್ 20 ರೊಳಗೆ ಇಲಾಖಾ ವಿಚಾರಣೆ ಪ್ರಕರಣಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. 15ನೇ ಹಣಕಾಸು ಯೋಜನೆಯಡಿ ಜಿಲ್ಲೆಯಲ್ಲಿ 78 ಕೋಟಿ ಬಳಕೆಯಾಗದ ಅನುದಾನ ಬಾಕಿ ಉಳಿದಿದೆ. ಶಾಸಕರ ಗಮನಕ್ಕೆ ತಂದು ಈ ಹಣವನ್ನು ಅಗತ್ಯವಾದ ಕಾಮಗಾರಿಗಳಿಗೆ ಬಳಕೆ ಮಾಡುವಂತೆ ಸೂಚನೆ ನೀಡಿದರು. ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಇ ಅಟೆಂಡೆನ್ಸ್ ಹಾಕಬೇಕು ಎಂದು ಸೂಚನೆ ನೀಡಿದರು.

ಹೆಚ್ ಡಿ ಕೋಟೆ ತಾಲ್ಲೂಕಿನ ಶಾಸಕರಾದ ಅನಿಲ್ ಕುಮಾರ್ ಅವರು ಮಾತನಾಡಿ ತಾಲ್ಲೂಕಿನಲ್ಲಿ ಹೆಚ್ಚಿನ ಅರಣ್ಯ ಪ್ರದೇಶ ಇದ್ದು ಇಲ್ಲಿ ಹಾಡಿ ಜನರು ಹೆಚ್ಚಾಗಿ ವಾಸಿಸುತ್ತಾರೆ. ಇಲ್ಲಿ ಜೇನು ಉತ್ಪಾದನೆ ಹೆಚ್ಚು ಇದ್ದು ಇವರು ಉತ್ಪಾದಿಸುವ ಜೇನು ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ವಿವಿಧ ಸಮುದಾಯಗಳ ಭವನಗಳು ಹೆಚ್ಚಿನ ಉಪಯೋಗಕ್ಕೆ ಆಗುತ್ತಿಲ್ಲ. ಇವುಗಳನ್ನು ಪಂಚಾಯತ್ ಗಳಿಗೆ ತೆಗೆದುಕೊಂಡು ಇಲ್ಲಿ ಗ್ರಂಥಾಲಯಗಳನ್ನು ತೆರೆಯಬಹುದಾಗಿದೆ ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ ಅವರು ಮಾತನಾಡಿ ನರೇಗಾ ಯೋಜನೆಯಲ್ಲಿ ರಾಯಲ್ಟಿ ಮೊತ್ತವನ್ನು ಕಾಮಗಾರಿ ಮುಗಿದ ಮೇಲೆ ಗುತ್ತಿಗೆದಾರರು ಪಾವತಿ ಮಾಡಬೇಕು. ಆದರೆ ಕೆಲವರು ಪಾವತಿ ಮಾಡದೇ ಬಾಕಿ ಉಳಿದಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕರಾದ ಜಿ.ಡಿ ಹರೀಶ್ ಗೌಡ, ರವಿಶಂಕರ್, ದರ್ಶನ್ ಧ್ರುವನಾರಾಯಣ್, ಹರೀಶ್ ಗೌಡ ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ, ಮಂಜೇಗೌಡ ಅವರು ಉಪಸ್ಥಿತರಿದ್ದರು.

Key words: Develop -ground water- level-avoid -shortage –drinking- water- Minister Priyanka Kharge.