ವಲಯ ವರ್ಗೀಕರಣ ತಪ್ಪಿನಿಂದ ದಂಡ-ಬಡ್ಡಿ: ಆಸ್ತಿ ಮಾಲೀಕರಿಗೆ ವಿನಾಯಿತಿ ಬಗ್ಗೆ ಸಿಎಂ ಜತೆ ಚರ್ಚಿಸುವೆ -ಡಾ.ಸಿ.ಎನ್.‌ಅಶ್ವತ್ಥನಾರಾಯಣ್.

ಬೆಂಗಳೂರು,ಆಗಸ್ಟ್,16,2021(www.justkannada.in):   ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ  ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡು ದಂಡ ಮತ್ತು ದಂಡದ ಬಡ್ಡಿ ಸುಳಿಗೆ ಸಿಲುಕಿರುವ ಆಸ್ತಿ ಮಾಲೀಕರಿಗೆ ವಿನಾಯಿತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸುವುದಾಗಿ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ್ ತಿಳಿಸಿದರು.

ಈ ವಿಷಯಕ್ಕೆ ಸಂಬಂಧಿಸಿ ಸೋಮವಾರದಂದು ಬಿಬಿಎಂಪಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ನಂತರ ಸಚಿವ ಡಾಸಿ.ಎನ್ ಅಶ್ವಥ್ ನಾರಾಯಣ್ ಈ ವಿಷಯ ತಿಳಿಸಿದರು.

ಕೋವಿಡ್‌ ಮಹಾಮಾರಿ ಹಾಗೂ ಲಾಕ್‌ ಡೌನ್‌ ಕಾರಣಕ್ಕೆ ಆಸ್ತಿ ಮಾಲೀಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದು, ಇದೇ ವೇಳೆ ದಂಡ ಮತ್ತು ಬಡ್ಡಿಗೆ ಗುರಿಯಾಗಿದ್ದಾರೆ. ಹೀಗಾಗಿ ಕಷ್ಟದಲ್ಲಿರುವ  ಆಸ್ತಿ ಮಾಲೀಕರಿಗೆ ರಿಯಾಯಿತಿ ನೀಡುವ ಬಗ್ಗೆ ಪರಿಶೀಲನೆ ಮಾಡುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ಸೂಚಿಸಿದ್ದೆ. ಆ ಬಗ್ಗೆ ಮುಖ್ಯಮಂತ್ರಿಗಳ ಒಪ್ಪಿಗೆ ಅಗತ್ಯವಿದೆ ಎಂದು ಅವರು ಹೇಳಿದರು.

ಈಗಾಗಲೇ ಮಲ್ಲೇಶ್ವರ ಮಾತ್ರವಲ್ಲದೆ, ನಗರದ ವಿವಿಧ ವಲಯಗಳ ಜನರು ತಮಗೆ ಮನವಿ ಕೊಟ್ಟಿದ್ದು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕಷ್ಟದಿಂದ ತಮ್ಮನ್ನು ಪಾರು ಮಾಡಬೇಕೆಂದು ಕೋರಿದ್ದಾರೆ. ಈ ಎಲ್ಲ ಅಂಶಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಸಚಿವರು ತಿಳಿಸಿದರು.

ಬಿಬಿಎಂಪಿಯು ಆರು ವರ್ಷಗಳಿಂದ ಸಮರ್ಪಕವಾಗಿ ತೆರಿಗೆ ವಸೂಲಿ ಮಾಡದೇ ಬಿಟ್ಟಿದ್ದು ಲೋಪ ಎಂದ ಅವರು, ಈಗ ನೋಡಿದರೆ ಏಕಾಏಕಿ ದಂಡ- ಬಡ್ಡಿ ಒಟ್ಟಿಗೆ ವಿಧಿಸಿದರೆ ಜನರಿಗೆ  ಕಷ್ಟವಾಗುತ್ತದೆ ಎಂದು ಸಚಿವರು ಹೇಳಿದರು.

ಈ ಸಭೆಯಲ್ಲಿ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಬಸವರಾಜ ಹಾಗೂ ಕಂದಾಯ ವಿಭಾಗದ ಜಂಟಿ ಆಯುಕ್ತ ವೆಂಕಟಾಚಲಪತಿ ಮುಂತಾದ ಅಧಿಕಾರಿಗಳು ಇದ್ದರು.

Key words:  discuss – CM – exemption – property owners-minister-Dr. C.N. Ashwaththanarayan