ಮೈಸೂರು,ಆಗಸ್ಟ್,19,2026 (www.justkannada.in): ಚಿನ್ನತಂಬಿ @ ಸೌಂದರ್ಯರಾಜು ವಿರುದ್ಧ ಮತ್ತೊಂದು ಗಂಭೀರ ಪ್ರಕರಣ ದಾಖಲಾಗಿದೆ. ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಬೆಂಗಳೂರಿನ ರಾಜಾಜಿನಗರ ಮೂಲದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಡಾ. ಯತೀಂದ್ರ ಅವರ ಸೂಚನೆಯ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಹಿಳೆಗೆ ಲೈಂಗಿಕ ಕಿರುಕುಳ ನೀಡುವುದು, ಕೊಲೆ ಬೆದರಿಕೆ ಹಾಕುವುದು, ಆಕೆಯ ಚಿನ್ನವನ್ನು ಕರಗಿಸಿ ಅಕ್ರಮವಾಗಿ ವಶಪಡಿಸಿಕೊಳ್ಳುವುದು ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಮಾಡಲಾಗಿದೆ. ಮಹಿಳೆ ಹಾಗೂ ಆಕೆಯ ಅಣ್ಣನನ್ನು ಕೂಡಿಹಾಕಿ ಚಿತ್ರಹಿಂಸೆ ನೀಡಲಾಗಿದೆ ಎಂಬ ಆರೋಪವೂ ದೂರಿನಲ್ಲಿದೆ.
ರೌಡಿಗಳ ಮೂಲಕ ಹಲ್ಲೆ ನಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಅಲ್ಲದೆ, ಮಹಿಳೆಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಲಾಗಿದೆ ಹಾಗೂ ಒಂದು ರಾತ್ರಿ ಆರೋಪಿಗಳು ಸೂಚಿಸಿದ ವ್ಯಕ್ತಿಗಳೊಂದಿಗೆ ಕಳೆಯುವಂತೆ ಧಮ್ಕಿ ಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಆರೋಪಗಳ ಹಿನ್ನೆಲೆಯಲ್ಲಿ ನೊಂದ ಮಹಿಳೆ ನಜರ್ಬಾದ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಆರೋಪಗಳು ಗಂಭೀರವಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ, ಮತ್ತಷ್ಟು ಆರೋಪಗಳು ಬೆಳಕಿಗೆ ಬರಲಿವೆಯೇ ಎಂಬುದು ಇದೀಗ ಕುತೂಹಲ ಮೂಡಿಸಿದೆ.
Key words: Fraud case, Another, FIR, against, Chinnathambi






