ಜೆಡಿಎಸ್ – ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿದೆ ಎಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಸೆಪ್ಟಂಬರ್,9,2023(www.justkannada.in):  ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ  ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು,  ಎಲ್ಲಾ ವಿಚಾರಗಳು ಪ್ರಾರಂಭಿಕ ಹಂತದಲ್ಲಿ ಇದ್ದು, ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ, ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ  ಹೆಚ್.ಡಿ ಕುಮಾರಸ್ವಾಮಿ, ಮೈತ್ರಿಗೆ ಮಾಜಿ ಪ್ರಧಾನಿ ದೇವೇಗೌಡರು ಒಪ್ಪಿಗೆ ಸೂಚಿದ್ದಾರಾ ಎನ್ನುವ ಪ್ರಶ್ನೆಗೂ, ಕಾದು ನೋಡಿ ಎಂದಷ್ಟೇ ಉತ್ತರಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ಅವರು ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ನಾನು ಅಭಾರಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿಕೂಟದ ಬಗ್ಗೆ ಅವರು ಹೇಳಿದ್ದಾರೆ. ರಾಜ್ಯದ ಜನರನ್ನು ಲೂಟಿ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕಿದೆ. 2006ರಲ್ಲಿಯೂ ನಾನು ಬಿಜೆಪಿ ಜತೆ ಸೇರಿ ಸರಕಾರ ಮಾಡಿದ್ದೆ ಎಂದರು

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಮೂರೇ ತಿಂಗಳಿಗೆ ಜನರು ರೋಸಿ ಹೋಗಿದ್ದಾರೆ. ಯಾವುದೇ ಸರಕಾರಕ್ಕೆ ನಾಲ್ಕು ವರ್ಷ ಕಳೆದ ಮೇಲೆ ಆಡಳಿತ ವಿರೋಧಿ ಅಲೆ ಎದುರಾಗುತ್ತದೆ. ಆದರೆ, ಈ ಸರಕಾರ ಮೂರೇ ತಿಂಗಳಿಗೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಇಂಥ ಸರಕಾರದ ವಿರುದ್ಧ ಸಂಘಟಿವಾಗಿ ಹೋರಾಟ ನಡೆಸಬೇಕಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಮೈತ್ರಿಯ ಮಾತುಕತೆ ಪ್ರಾಥಮಿಕ ಹಂತದಲ್ಲಿದೆ. ರಾಜ್ಯದ ಹಿತದೃಷ್ಟಿಯಿಂದ ಈ ರೀತಿಯ ಕೆಲವು ತೀರ್ಮಾನವಾಗುತ್ತದೆ. ಕೆಲದಿನ ಕಾದು ನೋಡಿ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಕೆಲವರು ಸಿದ್ದಾಂತಗಳ ಬಗ್ಗೆ ಮಾತನಾಡುತ್ತಾರೆ. ಅದರ ಬಗ್ಗೆ ಮುಂದೆ ಮಾತಡೋಣ. ಇನ್ನು ಮೈತ್ರಿ ವಿಷಯಕ್ಕೆ ಬಂದರೆ, ಅದಕ್ಕೆ ಇನ್ನೂ ಸಮಯ ಇದೆ. ಇನ್ನು ಹಲವಾರು ವಿಚಾರಗಳ ಬಗ್ಗೆ ಚರ್ಚೆ ಆಗಬೇಕಿದೆ. ಇಲ್ಲಿ ಪರಸ್ಪರ ಕೊಟ್ಟು ತೆಗೆದುಕೊಳ್ಳುವುದಲ್ಲ.. ವಿಶ್ವಾಸ, ಗೌರವ ಮುಖ್ಯ ಎಂದು ಅವರು ಹೇಳಿದರು.

ದಿನೇಶ್ ಗುಂಡೂರಾವ್ ವಿರುದ್ಧ ಕಿಡಿ.

ಕಾಂಗ್ರೆಸ್ ಪಕ್ಷದ ಯಾರೋ ಒಬ್ಬರು ನಾಯಕರು, ನಾಯಿ ಹಸಿದಿತ್ತು, ಅನ್ನ ಹಳಸಿತ್ತು ಅಂತ ಹೇಳಿದ್ದಾರೆ. 2018ರಲ್ಲಿ  ಅವತ್ತು ಯಾವ ಅನ್ನ ಹಳಸಿತ್ತು? ಯಾವ ನಾಯಿ ಹಸಿದಿತ್ತು ಎನ್ನುವುದನ್ನು ನೆನಪು ಮಾಡಿಕೊಳ್ಳಬೇಕು. ಅವತ್ತು ನಮ್ಮ ಮನೆಗೆ ಬಂದಿದ್ದವರು ಯಾರು? ಎಂದು ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕುಮಾರಸ್ವಾಮಿ ತಿರುಗೇಟು ಕೊಟ್ಟರು.

ರಾಜ್ಯದ ಪರಿಸ್ಥಿತಿಯನ್ನು ನೋಡುತ್ತಿದ್ದೇನೆ. ಅಮಲಿನಲ್ಲಿ ನಾವು ಏನೋ ಮಾಡಿಬಿಟ್ಟಿದ್ದೇವೆ, ಜೆಡಿಎಸ್ ಪಕ್ಷವನ್ನು ಮುಗಿಸಿಬಿಟ್ಟಿದ್ದೇವೆ, ಅಲ್ಲಿಂದ ಇಲ್ಲಿಂದ ಕರೆದುಕೊಂಡು ಬರುತ್ತಿದ್ದೇವೆ ಎಂದು ಬೀಗುತ್ತಿದ್ದಾರೆ. ಅದಕ್ಕೆಲ್ಲಾ ಉತ್ತರ ಕೊಡುತ್ತೇವೆ ಎಂದು ಅವರು ತಿಳಿಸಿದರು.

ನಾಳೆ ಸಭೆಗೆ 10,000 ಕಾರ್ಯಕರ್ತರು..

ಈ ಎಲ್ಲಾ ಬೆಳವಣಿಗೆಗಳ ನಡುವೆ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟಿದ್ದೇವೆ. ಈಗಾಗಲೇ ಮುಖಂಡರ ಸಭೆ ನಡೆಸಿದ್ದೇವೆ. ಭಾನುವಾರ ಕೂಡ ಮಹತ್ವದ ಸಭೆ ಕರೆಯಲಾಗಿದೆ. ಲೋಕಸಭೆ ಚುನಾವಣೆಗೆ ಮುನ್ನ ಇಂತಹ ಸಭೆ ನಡೆಯಬೇಕು ಎಂದು ದೇವೇಗೌಡರು ಬಯಸಿದ್ದರು. ಅದರಂತೆ ಸಭೆ ನಡೆಯುತ್ತಿದೆ. 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುತ್ತಾರೆ. ಆ ಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಸುತ್ತೇವೆ. ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೆಚ್.ಡಿಕೆ ಮಾಹಿತಿ ನೀಡಿದರು.

ಕಾಂಗ್ರೆಸ್ ಗೆ ಈಗ ಡೆಸ್ಪರೇಟ್‌ ಆಗಿದೆ:

ರಾಜಕಾರಣದಲ್ಲಿ ನಿರಾಶೆ, ಹತಾಶೆ ಎನ್ನುವುದು ಬರಲ್ಲ. ಡೆಸ್ಪರೇಟ್‌ ಅನ್ನುವ ಪದ ರಾಜಕಾರಣದಲ್ಲಿ ಬರಲ್ಲ. ರಾಜಕಾರಣದ ಡಿಕ್ಷನರಿಯಲ್ಲೇ ಆ ಪದ ಇಲ್ಲ. ಈಗ ಕಾಂಗ್ರೆಸ್ ಪಕ್ಷಕ್ಕೆ ಡೆಸ್ಪರೇಟ್‌ ಆಗುತ್ತದೆ. ಹೊರನೋಟಕ್ಕೆ ಅವರು ಏನು ಬೇಕಾದರೂ ಹೇಳಬಹುದು. ಆದರೆ ಒಳಗಡೆ ಏನಿದೆ ಅನ್ನುವುದು ನನಗೂ ಗೊತ್ತಿದೆ. ಅವರ ಶಕ್ತಿ ಏನಿದೆ ಅನ್ನುವುದು ನನಗೂ ಗೊತ್ತಿದೆ. ರಾಜಕಾರಣದಲ್ಲಿ ಸದಾಕಾಲ ಒಂದೇ ರೀತಿ ಇರಲ್ಲ. ರಾಜಕಾರಣದ ಚಕ್ರ ಉರುಳುತ್ತಿರುತ್ತದೆ.  ಅವರು ಏನು ಸಾಧನೆ ಮಾಡಿದ್ದಾರೆ ಅಂತ ಜನ ಸೀಟು ಕೊಡುತ್ತಾರೆ. ಲೂಟಿ ಮಾಡಿದ್ದಾರೆ, ಆ ಹಣದಲ್ಲಿ ಜನರನ್ನು ಕೊಂಡುಕೊಳ್ಳಬಹುದು ಅಂದುಕೊಂಡಿದ್ದಾರೆ, ಅದು ಸಾಧ್ಯ ಆಗಲ್ಲ ಎಂದು ಹೆಚ್.ಡಿಕೆ ಕಿಡಿಕಾರಿದರು.

Key words: Former CM -HD Kumaraswamy – JDS-BJP- alliance – initial stage