ಕರ್ನಾಟಕದಲ್ಲಿ 12 ಲಕ್ಷ  ಪ್ರಥಮ ಪಿಯುಸಿ ಸೀಟುಗಳ ಲಭ್ಯ.

ಬೆಂಗಳೂರು, ಜುಲೈ 23, 2021 (www.justkannada.in): ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ  ಪ್ರಥಮ ಪಿಯುಸಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಮಾಣದ ಸೀಟುಗಳನ್ನು ಒದಗಿಸಲು ರಾಜ್ಯ ಸರ್ಕಾರ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.jk

“ರಾಜ್ಯದಲ್ಲಿ 12 ಲಕ್ಷ 1ನೇ ಪಿಯುಸಿ ಸೀಟುಗಳು ಲಭ್ಯವಿದೆ. ಪ್ರವೇಶಾತಿಗೆ ಸಂಬಂಧಪಟ್ಟಂತೆ ನಾವು ಜಿಲ್ಲಾವಾರು ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ. ಸೀಟುಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಬೇಡಿಕೆ ಬಂದರೆ ಅದನ್ನು ಪರಿಗಣಿಸಲಾಗುವುದು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್ 10ರ ವೇಳೆಗೆ ಪ್ರಕಟಗೊಳ್ಳಲಿದೆ,” ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

ಗುರುವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪೂರ್ಣಗೊಂಡವು. ಬೆಂಗಳೂರಿನಲ್ಲಿ ಜಾಂಡಿಸ್ ಖಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವಂತಹ ಓರ್ವ ವಿದ್ಯಾರ್ಥಿ ಮಲ್ಲೇಶ್ವರಂನಲ್ಲಿರುವ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಾಗಿತ್ತು.

ಶಿವಮೊಗ್ಗದಲ್ಲಿ ಮತ್ತೋರ್ವ ವಿದ್ಯಾರ್ಥಿ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ ಎಂಬ ಕಾರಣದಿಂದಾಗಿ ನಿದ್ದೆ ಗುಳಿಗೆಗಳನ್ನು ನುಂಗಿದ್ದ. ಚೇತರಿಸಿಕೊಂಡ ನಂತರ ಆತನೂ ಸಹ ಪರೀಕ್ಷೆ ಬರೆದಿರುವುದಾಗಿ ಸಚಿವರ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಳೆಯಿಂದಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಕಷ್ಟ ಎದುರಿಸುತ್ತಿದ್ದಂತಹ ಆರು ವಿದ್ಯಾರ್ಥಿಗಳಿಗೆ ಇಲಾಖೆಯ ಅಧಿಕಾರಿಗಳು ಆಟೊ ವ್ಯವಸ್ಥೆ ಮಾಡಿ ಪರೀಕ್ಷೆಗೆ ಹಾಜರಾಗಲು ಅನುವು ಮಾಡಿಕೊಟ್ಟಿದ್ದಾರೆ.

ಸಿರ್ಸಿ ತಾಲ್ಲೂಕಿನಲ್ಲಿ ಸ್ಥಳೀಯ ಆಟೊ ಸಂಘಟನೆಗಳು ಗ್ರಾಮಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಂದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹೋಗಲು ಉಚಿತ ಸೇವೆಯನ್ನು ಕಲ್ಪಿಸಿದವು. ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದಾಗ ನಡೆದಂತಹ ವಾಹನ ಅಪಘಾತದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದು ಸಾಧ್ಯವಾಗಿಲ್ಲ ಎಂದು ಮಾಹಿತಿ ಲಭ್ಯವಾಗಿದೆ.

ಸುದ್ದಿ ಮೂಲ: ಬೆಂಗಳೂರು ಮಿರರ್

Key words: 12 lakh- first PUC- seats -available – Karnataka.