ಗಾಯಾಳುಗಳಿಗೆ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಚಿತ್ರದುರ್ಗ: ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ.

ಕಾರು ಹಾಗೂ ದ್ವಿಚಕ್ರ ವಾಹನಗಳ ಮಧ್ಯೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಿರಿಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಒರ್ವ ಬಾಲಕ ಸೇರಿದಂತೆ ದಂಪತಿಯನ್ನು ಕೂಡಲೇ ಅಸ್ಪತ್ರೆಗೆ ಸಾಗಿಸಿ ಅವರ ಜೀವ ಉಳಿಸುವಲ್ಲಿ ನೆರವಾದ ಕರ್ನಾಟಕ ವಿಧಾನಪರಿಷತ್ ಸಭಾಪತಿ ಮಾನ್ಯ ಶ್ರೀ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ.

ಕಚೇರಿ ಕಾರ್ಯ ಕಲಾಪ ಮುಗಿಸಿ ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಬೆಳಿಗ್ಗೆ ಬೆಂಗಳೂರಿನಿಂದ ತೆರಳುತ್ತಿದ್ದ ಸಭಾಪತಿ ಶ್ರೀ ಬಸವರಾಜ ಹೊರಟ್ಟಿಯವರು ಮಾರ್ಗಮಧ್ಯದಲ್ಲಿ ಸಿರೆಗೆರೆ ಬಳಿ ತಮ್ಮ ಕಣ್ಣೆದುರಿಗೆ ಸಂಭವಿಸಿದ ಅಪಘಾತ ಗಮನಿಸಿ ಕೂಡಲೇ ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿದರು. ಅಲ್ಲದೇ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಬೇಗನೆ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಿದರು ಹಾಗೂ ಆಂಬುಲೆನ್ಸ್‍ಗೆ ಕರೆಮಾಡಿ ಮೂವರು ಗಾಯಾಳುಗಳನ್ನು ಶೀಘ್ರದಲ್ಲಿಯೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಲ್ಲಿ ನೆರವಾದರು.

ಸುಮಾರು ಅರ್ಧ ಗಂಟೆಗಿಂತಲೂ ಹೆಚ್ಚು ಕಾಲ ಅಪಘಾತ ಸ್ಥಳದಲ್ಲಿಯೇ ಇದ್ದು ಗಾಯಾಳುಗಳಿಗೆ ಧೈರ್ಯ ಹೇಳಿ ಅವರಿಗೆ ತುರ್ತು ಚಿಕಿತ್ಸೆ ದೊರಕಿಸುವಲ್ಲಿ ಶ್ರಮಿಸಿದರು. ಸಭಾಪತಿ ಬಸವರಾಜ ಹೊರಟ್ಟಿಯವರು ಸಂವಿಧಾನಿಕ ದೊಡ್ಡ ಹುದ್ದೆಯಲ್ಲಿದ್ದರೂ ಜನಸಾಮಾನ್ಯರ ಕಷ್ಟಗಳಿಗೆ ಕೂಡಲೇ ಪ್ರತಿಸ್ಪಂದಿಸಿ ನೆರವಾಗುವ ಮಾನವೀಯ ಗುಣ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದ್ದು ಇಂದಿನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ.