ಅಂಗೈಯಲ್ಲಿ ಆಕಾಶ ತೋರಿಸುವ ವಿಚಾರದಲ್ಲಿ ನೀವು ಪ್ರವೀಣರಲ್ಲವೇ ಸಿದ್ಧರಾಮಯ್ಯ..? – ರಾಜ್ಯ ಬಿಜೆಪಿ ಟೀಕೆ.

ಬೆಂಗಳೂರು,ಅಕ್ಟೋಬರ್,23,2021(www.justkannada.in): ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ಸಂದರ್ಭದಲ್ಲಿ ಕೃಷ್ಣಾ ಕಣಿವೆ ನೀರಾವರಿ ಯೋಜನೆಗೆ ವಾರ್ಷಿಕ 10 ಸಾವಿರ ಕೋಟಿ ಅನುದಾನ ನೀಡುತ್ತೇನೆಂದು ಘೋಷಣೆ ಮಾಡಿದ್ದಿರಿ. ಆದರೆ ಕೊಟ್ಟಿದ್ದು ಬಿಡಿಗಾಸು. ಅಂಗೈಯಲ್ಲಿ ಆಕಾಶ ತೋರಿಸುವ ವಿಚಾರದಲ್ಲಿ ನೀವು ಪ್ರವೀಣರಲ್ಲವೇ ಸಿದ್ಧರಾಮಯ್ಯ? ಎಂದು ರಾಜ್ಯ ಬಿಜೆಪಿ ಟೀಕಿಸಿದೆ.

ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ  ಸರಣಿ ಟ್ವೀಟ್ ಮಾಡಿ ಟಾಂಗ್ ನೀಡಿರುವ ರಾಜ್ಯ ಬಿಜೆಪಿ ಘಟಕ, ಅಧಿಕಾರಾವಧಿಯ ಕೊನೆಯಲ್ಲಿ ‘ಮುಖ್ಯಮಂತ್ರಿ 1 ಲಕ್ಷ ಮನೆ’ ಯೋಜನೆಯನ್ನು ಬೆಂಗಳೂರು ನಗರದ  ಬಡವರಿಗೆ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಆದರೆ ಬಜೆಟ್‌ನಲ್ಲಿ ಸೂಕ್ತ ಅನುದಾನ ಕಾಯ್ದಿರಿಸಲಿಲ್ಲ. ಮನೆಕಟ್ಟುವುದಕ್ಕೆ ಆಯ್ದುಕೊಂಡ ಜಾಗವೇ ವಿವಾದಗ್ರಸ್ಥವಾಗಿತ್ತು. ಸುಳ್ಳು ಹೇಳುವುದರಲ್ಲಿ ಸಿದ್ಧರಾಮಯ್ಯಗೆ ಪಿಎಚ್‌ಡಿ ನೀಡಬಹುದು ವಾಗ್ದಾಳಿ ನಡೆಸಿದೆ.

ಇನ್ನೆಷ್ಟು ದಿನ ಸಂತೆ ಭಾಷಣ ಹೊಡೆಯುತ್ತೀರಿ ಸಿದ್ಧರಾಮಯ್ಯ? ನೀವು ಘೋಷಣೆ ಮಾಡಿದ 15 ಲಕ್ಷ ಮನೆ ಎಲ್ಲಿದೆ? ಭೂಮಿಯ ಮೇಲಿದೆಯೋ, ಮಂಗಳ ಗ್ರಹದಲ್ಲಿದೆಯೋ? ಕೇವಲ ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣವಾಗುತ್ತದೆಯೇ? ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೇ? ಎಂದು ಬಿಜೆಪಿ ಲೇವಡಿ ಮಾಡಿದೆ.

Key words: bjp-tweet-former CM-siddaramaiah