ದೆಹಲಿಯಲ್ಲಿ ಹಿಂಸಾಚಾರ:  ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆ…

ನವದೆಹಲಿ,ಫೆ,26,2020(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ  ಪರ-ವಿರೋಧವಾಗಿ ದೆಹಲಿಯಲ್ಲಿ ಉಂಟಾಗಿರುವ  ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಭಾನುವಾರ-ಸೋಮವಾರಗಳಂದು ಹಿಂಸಾಚಾರ ರೂಪ ಪಡೆದುಕೊಂಡಿದ್ದ ಪ್ರತಿಭಟನೆ ತೀವ್ರಗೊಂಡಿದ್ದು , 20 ಮಂದಿ ಸಾವನ್ನಪ್ಪಿದ್ದಾರೆ.  ಘಟನೆಯಲ್ಲಿ 50 ಪೊಲೀಸರು ಸೇರಿದಂತೆ 180 ಮಂದಿ ಗಾಯಗೊಂಡಿದ್ದು, ಅವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. 10 ಕಡೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇನ್ನು ಇಂದು ಸಹ ದೆಹಲಿಯ ಗೋಕುಲ್ ಪುರಿ ಬಳಿ ಅಂಗಡಿ ಮೇಲೆ  ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಇನ್ನು ಈಶಾನ್ಯದೆಹಲಿಯಲ್ಲಿ ಆಗುತ್ತಿರುವ ಗಲಭೆಯಿಂದಾಗಿ ಅಲ್ಲಿನ ಕಾರ್ಮಿಕರು ಊರು ಬಿಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ನಡುವೆ ಪ್ರತಿಭಟನಾ ಸ್ಥಳಕ್ಕೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಭೇಟಿ ನೀಡಿದ್ದು, ಭದ್ರತೆಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಮಧ್ಯೆ  ದೆಹಲಿ ಹಿಂಸಾಚಾರ ಘಟನೆ ಬಗ್ಗೆ ಪ್ರಧಾನಿ ಮೋದಿಗೆ ಹಾಗೂ ಸಚಿವ ಸಂಪುಟ ಸಭೆಗೆ ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವೆಲ್ ಮಾಹಿತಿ ನೀಡಲಿದ್ದಾರೆ.

Key words: CAA- Violence – Delhi-Death – rises 20