ಕೊರೋನಾ ಸಾವಿನ ಸಂಖ್ಯೆಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಚ್ಚಿಡುತ್ತಿವೆ-ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ.

ಮೈಸೂರು,ಜೂನ್ ,24,2021(www.justkannada.in): ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಚ್ಚಿಡುತ್ತಿವೆ ಎಂದು  ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಆರೋಪ ಮಾಡಿದ್ದಾರೆ.jk

ಮೈಸೂರಿನಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ದೇಶಾದ್ಯಂತ ಕೊರೊನಾ ಸೋಂಕಿನಿಂದ 42 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲೇ ಏಳು ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾದಿಂದ ಸಾವಿಗೀಡಾಗಿದ್ದಾರೆ. ಆದರೂ ಕೇಂದ್ರ ರಾಜ್ಯ ಸರ್ಕಾರಗಳು ಕೊರೊನಾ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿವೆ. ಕೂಡಲೇ ನಿಖರ ಮಾಹಿತಿ ವಾಸ್ತವಾಂಶವನ್ನು ಕೇಂದ್ರ ರಾಜ್ಯ ಸರ್ಕಾರಗಳು ತಿಳಿಸಬೇಕು ಎಂದು ಆಗ್ರಹಿಸಿದರು.

ಮೈಸೂರು ಜಿಲ್ಲೆಯ ವಿಚಾರದಲ್ಲೂ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ. ಮೈಸೂರು ಜಿಲ್ಲೆಯ ಜನರನ್ನು ಮನೆಯಲ್ಲೇ ಹಾಕಲಾಗಿದೆ. ಕೂಡಲೇ ಮೈಸೂರು ಜಿಲ್ಲೆಯನ್ನು ಅನ್ ಲಾಕ್ ಮಾಡಬೇಕು ಎಂದು  ಎಂ.ಲಕ್ಷ್ಮಣ್ ಆಗ್ರಹಿಸಿದರು.

ಕೊರೊನಾ ವಿಚಾರದಲ್ಲಿ ನೂತನ ಜಿಲ್ಲಾಧಿಕಾರಿ ಬಗಾದಿ ಗೌತಮ್ ಕೂಡ ಸುಳ್ಳು ಹೇಳಿಕೆ.

ಕೊರೊನಾ ವಿಚಾರದಲ್ಲಿ ನೂತನ ಜಿಲ್ಲಾಧಿಕಾರಿ ಬಗಾದಿ ಗೌತಮ್ ಕೂಡ ಸುಳ್ಳು ಹೇಳುತ್ತಿದ್ದಾರೆ. ಕೊರೋನಾ ಡೆಲ್ಟಾ ಪ್ಲಸ್ ವಿಚಾರದಲ್ಲಿ ಮೈಸೂರು ಜಿಲ್ಲಾಧಿಕಾರಿ ಗೊಂದಲಕಾರಿ ಹೇಳಿಕೆ ನೀಡಿದ್ದಾರೆ. ಆರೋಗ್ಯ ಸಚಿವ ಡಾ ಸುಧಾಕರ್ ಕೊರೊನಾ ಡೆಲ್ಟಾ ಪ್ಲಸ್ ಪ್ರಕರಣವೊಂದು ಮೈಸೂರಿನಲ್ಲಿ ವರದಿಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ‌. ಆದರೆ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಯಾವುದೇ ಡೆಲ್ಟಾ ಪ್ಲಸ್ ಪ್ರಕರಣ ವರದಿಯಾಗಿಲ್ಲ ಎಂದು ಹೇಳಿದ್ದಾರೆ. ಇದೇ ರೀತಿ ಸುಳ್ಳು ಹೇಳುತ್ತಾ ಹೋದರೆ ಮುಂದೆ ಬಗಾದಿ ಗೌತಮ್ ಕೂಡ ಸಿಕ್ಕಿ ಬೀಳಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಎಚ್ಚರಿಕೆ ನೀಡಿದರು.

Key words:  Center – State Government -number -Corona -deaths-mysore-KPCC spokesperson- M Laxman