ಖ್ಯಾತ ಬರಹಗಾರ ಹಾಗೂ ವಿಜ್ಞಾನಿ ಡಾ. ಸುಧೀಂದ್ರ ಹಾಲ್ದೊಡ್ಡೇರಿ ಅವರ ನಿಧನಕ್ಕೆ ಸಚಿವ ಅರವಿಂದ ಲಿಂಬಾವಳಿ ಸಂತಾಪ.

ಬೆಂಗಳೂರು,ಜುಲೈ2,2021(www.justkannada.in): ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ , ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಸುಧೀಂದ್ರ ಹಾಲ್ದೊಡ್ಡೇರಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಚಿವ ಅರವಿಂದ ಲಿಂಬಾವಳಿ, ಅವರಿಗೆ ಇಂದು ಕನ್ನಡ ಪುಸ್ತಕ ಪ್ರಾಧಿಕಾರದ  ಡಾ . ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಪ್ರಶಸ್ತಿ ಘೋಷಿಸಿದ ದಿನವೇ ಅವರು ನಿಧನರಾದದ್ದು ತುಂಬಾ ದುರಾದೃಷ್ಟಕರ ಸಂಗತಿ, ಅಭಿನಂದನೆ ಹೇಳಬೇಕಾದ ಕಡೆ ಸಂತಾಪ ಹೇಳಬೇಕಾದ ಸಂಕಟ ಎಂದಿರುವ ಸಚಿವ ಅರವಿಂದ ಲಿಂಬಾವಳಿ, ಕನ್ನಡ ವಿಜ್ಞಾನ ಸಾಹಿತ್ಯಕ್ಕೆ ಸುಧೀಂದ್ರ ಹಾಲ್ದೊಡ್ಡೇರಿ ಅವರ ಕೊಡುಗೆ ಅನನ್ಯವಾದದ್ದು , ಕನ್ನಡದ ಅನೇಕ ಪತ್ರಿಕೆಗಳಲ್ಲಿ ಅಂಕಣಕಾರರಾಗಿ ಅವರು ಜನಪ್ರಿಯರಾಗಿದ್ದರು ಎಂದು ನುಡಿದಿದ್ದಾರೆ.

ಕೇಂದ್ರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ 22 ವರ್ಷ ಸೇವೆ ಸಲ್ಲಿಸಿದ್ದ ಅವರು ನಂತರ ಸ್ವಯಂನಿವೃತ್ತಿ ಪಡೆದು  ಜೈನ್ ವಿಶ್ವವಿದ್ಯಾಲಯದಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಬರೆಯುವ ಕಲೆ ಅವರಿಗೆ ಕರಗತವಾಗಿತ್ತು. ಅವರ ನಿಧನದಿಂದ ಕನ್ನಡ ಅಕ್ಷರ ಲೋಕ ಒಬ್ಬ ಅತ್ಯುತ್ತಮ ಲೇಖಕರನ್ನು ಕಳೆದುಕೊಂಡಿದೆ. ಅವರ ಕುಟುಂಬಕ್ಕೆ ಈ ಆಘಾತವನ್ನು ತಡೆದುಕೊಳ್ಳುವ ಶಕ್ತಿ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Key words: Columnist – scientist – Sudheendra Haldoderi –death- Dr. Minister -Arvind Limbawali -condoles