ಆನ್‌ ಲೈನ್ ತರಗತಿ ಮೂಲಕ ಶಿಕ್ಷಣ ಮುಂದುವರಿಯಬೇಕು- ಅಧಿಕಾರಿಗಳಿಗೆ ಸಚಿವ ಎಸ್.ಟಿ ಸೋಮಶೇಖರ್ ಸೂಚನೆ.

ಮೈಸೂರು,ಜನವರಿ,12,2022(www.justkannada.in): ಕೋವಿಡ್ ಪ್ರಕರಣಗಳು ದಿನೇ ದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತೆಯ ಕ್ರಮವಾಗಿ ಮೈಸೂರು ನಗರ ಮತ್ತು ಇದಕ್ಕೆ ಹೊಂದಿಕೊಂಡಿರುವ ಪ್ರದೇಶಗಳು ಇರುವುದರಿಂದ ಮೈಸೂರು ತಾಲ್ಲೂಕನ್ನೂ ಒಳಗೊಂಡಂತೆ ಎಲ್ಲಾ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

ಆದರೆ ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಪರ್ಯಾಯವಾಗಿ ಆನ್‌ ಲೈನ್‌ ತರಗತಿಗಳು ಮತ್ತಿತರ ವ್ಯವಸ್ಥೆಗಳ ಮೂಲಕ ಶಿಕ್ಷಣ ಮುಂದುವರಿಸಬೇಕು ಎಂದು ಸಹಕಾರ ಮತ್ತು ಮೈಸೂರು-ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ  ಎಸ್‌.ಟಿ.ಸೋಮಶೇಖರ್ ಅವರು ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಹಾಗು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಮಕ್ಕಳ‌ ಆರೋಗ್ಯದ ಕಡೆಗೆ ಗಮನ ಹರಿಸಿದಂತೆ ಅವರ ಶಿಕ್ಷಣದ ಕಡೆಗೂ ಗಮನ ಹರಿಸಬೇಕಾಗದದ್ದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಲಾಕ್‌ ಡೌನ್ ಸಂದರ್ಭದಲ್ಲಿ ವಿದ್ಯಾಗಮ ಪದ್ಧತಿ ಮೂಲಕ ಕಲಿಸುವ ಪ್ರಯತ್ನ ಮಾಡಲಾಗಿತ್ತು‌. ದೂರದರ್ಶನ ವಾಹಿನಿಯಲ್ಲಿ ಸಂವೇದ ಕಾರ್ಯಕ್ರಮ ಪ್ರಸಾರ ಮಾಡಿ, ಕಲಿಕೆಗೆ ಪ್ರೋತ್ಸಾಹಿಸಲಾಗಿತ್ತು. ಹಾಗೆಯೇ ಯೂಟ್ಯೂಬ್ ಚಾನೆಲ್ ಮೂಲಕ ತರಗತಿಗಳನ್ನು ಪ್ರಸಾರ ಮಾಡಲಾಗಿತ್ತು. ವಾಟ್ಸಾಪ್ ಮೂಲಕ ಅಭ್ಯಾಸದ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗಿತ್ತು. ಆ ಕ್ರಮಗಳ ಮೂಲಕವೂ ವಿದ್ಯಾರ್ಥಿಗಳ ಶಿಕ್ಷಣದ ಕೊರತೆಯನ್ನು ನೀಗಿಸಬಹುದು. ಈ ಪ್ರಯತ್ನಗಳನ್ನು ಅಧಿಕಾರಿಗಳು ಹಾಗೂ ಶಿಕ್ಷಕರು ಮಾಡಬೇಕು ಎಂದು ತಿಳಿಸಿದ್ದಾರೆ.mysore-requests-additional-oxygen-based-positive-case-minister-st-somashekhar

10ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷಾ ಮಂಡಳಿ ನಡೆಸುವ ವಾರ್ಷಿಕ ಪರೀಕ್ಷೆ ಎದುರಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಅಭ್ಯಾಸಕ್ಕೆ ವಿಶೇಷ ಗಮನಕೊಡಬೇಕು ಎಂದು ಅವರು ಸೂಚಿಸಿದ್ದಾರೆ.

Key words: continue – online- classroom-Minister- ST Somashekhar