ಮೇ3ರ ವರೆಗೆ ಲಾಕ್ ಡೌನ್ ಯಥಾ ಸ್ಥಿತಿಯಲ್ಲಿ ಮುಂದುವರಿಕೆ : ಸಚಿವ‌ ಜೆ.ಸಿ.ಮಾಧುಸ್ವಾಮಿ

ಬೆಂಗಳೂರು, 20 ಏಪ್ರಿಲ್, 2020 (www.justkannada.in): ಕರ್ನಾಟಕದಲ್ಲಿ ಕೊರೊನಾ ವೈರಾಣು-19 ವ್ಯಾಪಿಸುವುದನ್ನು ತಡೆಗಟ್ಟಲು ಲಾಕ್‍ಡೌನ್ ಅವಧಿಯನ್ನು ಮೇ 3 ರವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧು ಸ್ವಾಮಿ ಪ್ರಕಟಿಸಿದರು.

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೂರನೇ ಬಾರಿಗೆ ನಡೆದ ಹ್ಯಾಟ್ರಿಕ್ ಸಚಿವ ಸಂಪುಟ ಸಭೆಯ ನಂತರ ಅದೇ ಸ್ಥಳದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಲಾಕ್ ಡೌನ್ ಅನುಷ್ಠಾನದಲ್ಲಿ ಸಧ್ಯಕ್ಕೆ ಯಾವುದೇ ಸಡಿಲಿಕೆ ಇಲ್ಲ. ಆದರೆ, ಕೇಂದ್ರ ಸರ್ಕಾರದ ಮಾರ್ಗಸೂಚಿ ಏನಾದರೂ ಬಂದಲ್ಲಿ ಮುಖ್ಯಮಂತ್ರಿಯವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯಪಡೆಯ ಸದಸ್ಯರೊಂದಿಗೆ ಚರ್ಚಿಸಿ ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೊರೊನಾಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ಉತ್ತರ ಪ್ರದೇಶದ ಸರ್ಕಾರಗಳು ಕೈಗೊಂಡಿರುವ ಮಾದರಿಯಲ್ಲಿಯೇ ರಾಜ್ಯದಲ್ಲಿಯೂ ಕೂಡಾ ಕ್ರಮ ವಹಿಸಲು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ಸಚಿವ ಸಂಪುಟದಲ್ಲಿ ತೀರ್ಮಾನಿ¸ಲಾಗಿದೆ.

ಉದ್ದೇಶಿತ ತಿದ್ದುಪಡಿಯಂತೆ ಸರ್ಕಾರದ ಸೂಚನೆಯಂತೆ ಯಾರು ಕಾರ್ಯ ನಿರ್ವಹಿಸುವುದಿಲ್ಲವೋ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ. ಅಲ್ಲದೆ, ಉದ್ದೇಶ ಪೂರ್ವಕವಾಗಿ ಈ ರೋಗವನ್ನು ಹರಡಿಸಲು ಪ್ರಯತ್ನ ಪಟ್ಟರೆ ಅದೂ ಕೂಡಾ ಶಿಕ್ಷಾರ್ಹ ಅಪರಾಧವೇ ಎಂದು ಪರಿಗಣ ಸಲಾಗುತ್ತದೆ. ಅಂತೆಯೇ, ವದಂತಿ ಸೃಷ್ಠಿಸುವುದು ಹಾಗೂ ಸುಳ್ಳು ಸುದ್ದಿ ಹಬ್ಬಿಸುವವರನ್ನೂ ಅಪರಾಧಿಗಳೆಂದು ಪರಿಗಣ ಸಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಅವಕಾಶವಿದೆ ಎಂದು ಸಚಿವರು ತಿಳಿಸಿದರು.

*ಮೈಸೂರು ಮಿನರಲ್ಸ್‍ನ ಜಾಗ ಕಂದಾಯ ಇಲಾಖೆಯದ್ದು*

ಮೈಸೂರು ಮಿನರಲ್ಸ್ ಲಿಮಿಟೆಡ್‍ಗೆ ಸೇರಿದ ಜಾಗವು ಕಂದಾಯ ಇಲಾಖೆಗೆ ಸೇರಿದ್ದೋ ಅಥವಾ ಅರಣ್ಯ ಇಲಾಖೆಗೆ ಸೇರಿದ್ದೋ ಎಂಬ ಬಗ್ಗೆ ಭಾರತದ ಸವೋಚ್ಚ ನ್ಯಾಯಾಲಯದಲ್ಲಿ ಹೂಡಲಾದ ದಾವೆಯು ಇತ್ಯರ್ಥವಾಗಿ, ಈ ಜಾಗವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಅಂತಿಮವಾಗಿ ತೀರ್ಪು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ನ್ಯಾಯಾಲಯದ ತೀರ್ಪನ್ನು ಅಂಗೀಕರಿಸಿದೆ.

*ನಿಗಮ-ಮಂಡಳಿ ನೌಕರರು ಸರ್ಕಾರಿ ನೌಕರರಲ್ಲ !*

ನಿಗಮ ಹಾಗೂ ಮಂಡಳಿಗಳಲ್ಲಿ ನಿಯೋಜನೆಯ ಮೇರೆಗೆ ತೆರಳುತ್ತಿದ್ದ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ನೌಕರರು ತಮ್ಮನ್ನು ಅಲ್ಲಿಯೇ ಖಾಯಂಗೊಳಿಸುವಂತೆ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳನ್ನು ದಾಖಲಿಸುವ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳ ನಿಯಮಾವಳಿಗಳಿಗೆ ತಿದ್ದುಪಡಿ ತರಲು ಸಂಪುಟ ತೀರ್ಮಾನಿಸಿದೆ. ಅದರಂತೆ, ಇನ್ನು ಮುಂದೆ ನಿಗಮ-ಮಂಡಳಿ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣ ಸಲಾಗುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ತರಲು ಸಂಪುಟ ಸಮ್ಮತಿಸಿದೆ.

*ಪ್ರತಿಭಟನಾಕಾರರ ವಿರುದ್ಧ ದಾಖಲಾದ ಪ್ರಕರಣಗಳು ಹಿಂದಕ್ಕೆ*

ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರೈತರ ಮೇಲೆ ಹೂಡಲಾದ ಮೊಕದ್ದಮೆಗಳು ಟಿಪ್ಪು ಜಂಯಂತಿ ಸಂದರ್ಭದಲ್ಲಿ ಉಂಟಾದ ಗಲಭೆಯ ಸಂದರ್ಭದಲ್ಲಿ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿದ ಪ್ರಕರಣಗಳು, ಗಣೇಶೋತ್ಸವದಂತಹ ಸಾರ್ವಜನಿಕ ಸಮಾರಂಭದ ಸಂದರ್ಭದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಾವೆಗಳೂ ಒಳಗೊಂಡಂತೆ ರಾಜ್ಯದ ವಿವಿಧೆಡೆಗಳಲ್ಲಿ ಹೂಡಿದ್ದ 46 ಪ್ರಕರಣಗಳನ್ನು ಹಿಂಪಡೆಯಲಾಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಘಟನೋತ್ತರ ಅನುಮೋದನೆ ನೀಡಿದೆ. ಜೊತೆಗೆ, ಇಂತಹ ಸಾರ್ವಜನಿಕ ವಿಷಯಗಳಲ್ಲಿ ಹೋರಾಟ ಮಾಡಿದವರ ವಿರುದ್ಧ ದಾಖಲಾದ 152 ಪ್ರPರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ.

*ಸನ್ನಡತೆ ಖೈದಿಗಳ ಅವಧಿ ಪೂರ್ವ ಬಿಡುಗಡೆ : ಶಿಕ್ಷಾ ಅವಧಿ ಕಡಿಮೆ*

ಜೀವಾವಧಿ ಶಿಕ್ಷೆಗೊಳಗಾಗಿ 14 ವರ್ಷ ಶಿಕ್ಷೆ ಪೂರ್ಣಗೊಳಿಸಿದ ಅಥವಾ 10 ವರ್ಷ ಶಿಕ್ಷೆ ಅನುಭವಿಸಿದ ಖೈದಿಗಳಿಗೆ ಸನ್ನಡತೆ ಆಧಾರದ ಮೇರೆಗೆ ಅವಧಿ ಪೂರ್ವ ಬಿಡುಗಡೆ ಮಾಡಲು ನಿಯಮಗಳ ಕರಡನ್ನು ರಾಜ್ಯ ಸಚಿವ ಸಂಪುಟದ ಅನುಮೋದಿಸಿದೆ. ಈ ಮುನ್ನ, ದಂಡ ಪ್ರಕ್ರಿಯಾ ಸಂಹಿತೆಯ ಪರಿಚ್ಛೇಧ 167 ( 1 ) ವ್ಯಾಪ್ತಿಗೊಳಪಡುವ ಪ್ರಕರಣಗಳನ್ನು ರಾಜ್ಯಪಾಲರಿಗೆ ಕಳುಹಿಸಿ ಬಿಡುಗಡೆಗೆ ಶಿಫಾರಸ್ಸು ಮಾಡಲಾಡಲಾಗುತ್ತಿತ್ತು. ಇದೀಗ ಸನ್ನಡತೆ ಆಧಾರದ ಮೇರೆಗೆ ಶಿಕ್ಷಾ ಅವಧಿಯನ್ನು ಕಡಿಮೆ ಮಾಡಲು ಸೂಕ್ತ ನಿಯಮ ರೂಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕು ದಾರೋಜಿ ಗ್ರಾಮಕ್ಕೆ 23.40 ಕೋಟಿ ರೂ ವೆಚ್ಚದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೆಯ ಹಂತದಲ್ಲಿ ಕೇರಳ-ಕರ್ನಾಟಕದ ಗಡಿಯಲ್ಲಿ ರಸ್ತೆ ಅಭಿವೃದ್ಧಿಗೆ ಕೇಂದ್ರದ ಪಾಲು 1274 ಕೋಟಿ ರೂ ಒಳಗೊಂಡಂತೆ 2729.66 ಕೋಟಿ ರೂ ವೆಚ್ದದಲ್ಲಿ ಅಭಿವೃದ್ಧಿ ಪಡಿಸಲು ಸಚಿವ ಸಂಪುಟ ಸಮ್ಮತಿಸಿದೆ.

ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆಯಡಿ ಬ್ಯಾಂಕುಗಳಲ್ಲಿ ರೈತರ ಫಸಲುಗಳಿಗೆ ಮಾಡಿಸಲಾದ ವಿಮೆಯ ರಾಜ್ಯ ಸರ್ಕಾರದ ಪಾಲಿನ 2016 ಸಾಲಿನ ವಿಮಾ ಮೊತ್ತ 18.59 ಕೋಟಿಗಳನ್ನು ಭರಿಸಲು ಸಂಪುಟ ಒಪ್ಪಿಗೆ ನೀಡಿದೆ.

*ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಅಡುಗೆ ಅನಿಲದ ಉಚಿತ ಸಿಲಿಂಡರ್*

ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಅಡುಗೆ ಅನಿಲದ ಉಚಿತ ಸಿಲೆಂಡರ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಅದೇ ಮಾದರಿಯಲ್ಲಿಯೇ ರಾಜ್ಯ ಸರ್ಕಾರವೂ ಕೂಡಾ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಮುಂದಿನ ಮೂರು ತಿಂಗಳ ಅವಧಿಗೆ ಅಡುಗೆ ಅನಿಲದ ಉಚಿತ ಸಿಲೆಂಡರ್ ವಿತರಿಸಲು ಹಾಗೂ ಇದಕ್ಕಾಗಿ 27.52 ಕೋಟಿ ವೆಚ್ಚ ಭರಿಸಲು ಸಚಿವ ಸಂಪುಟವು ಅನುಮೋದನೆ ನೀಡಿದೆ. ಈ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಹೊಂದಿರುವ 98,521 ಫಲಾನುಭವಿಗಳಿಗೆ ಇದರ ಲಾಭ ದೊರೆಯಲಿದೆ.

*ಚಿಕ್ಕಮಗಳೂರಿಗೆ ಹೊಸ ವೈದ್ಯಕೀಯ ಕಾಲೇಜು ಮಂಜೂರು*

ಕೇಂದ್ರ ಪುರಸ್ಕøತ ಯೋಜನೆಯ ಅಡಿಯಲ್ಲಿ ಕೇಂದ್ರದ ಪಾಲು ಹಾಗೂ ರಾಜ್ಯದ ಪಾಲೂ ಎರಡೂ ಸೇರಿದಂತೆ 438.75 ಕೋಟಿ ರೂ ವೆಚ್ಚದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸದಾಗಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸಚಿವ ಸಂಪುಟ ಆಡಳಿತಾತ್ಮಕ ಮಂಜೂರಾತಿ ನೀಡಿದೆ. ಇದರಲ್ಲಿ ಕಟ್ಟಡ ಕಾಮಗಾರಿಗಳಿಗೆ 325 ಕೋಟಿ ರೂ ಹಾಗೂ ಉಪಕರಣ ಮತ್ತು ಪೀಠೋಪಕರಣ ಖರೀದಿಗಾಗಿ 71 ಕೋಟಿ ರೂ ಒಳಗೊಂಡಿದೆ. ಅಂತೆಯೆ, ಈ ಮಹಾ ವಿದ್ಯಾಲಯಕ್ಕೆ ಎಂಬಿಬಿಸ್ ಪ್ರವೇಶಕ್ಕೆ 150 ಸ್ಥಾನ ( ಇನ್‍ಟೇಕ್ ಸೀಟ್ ) ನಿಗದಿಪಡಿಸಲಾಗಿದೆ..

*ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಏಳನೇ ವೇತನ ಆಯೋಗದ ಶಿಫಾರಸ್ಸು ಜಾರಿ*

ಏಳನೇ ವೇತನ ಆಯೋಗದ ಶಿಫಾರಸ್ಸಿನಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ವಿಸ್ತರಿಸಲು ಸಂಪುಟ ಸಹಮತಿ ನೀಡಿದೆ. ಇದರಿಂದ ರಾಜ್ಯ ಬೊಕ್ಕಸಕ್ಕೆ 137 ಕೋಟಿ ರೂ ಹೊರೆಯಾಗಲಿದೆ. ಅಲ್ಲದೆ, ಇದರ ಲಾಭ 2800 ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ದೊರೆಯಲಿದೆ ಎಂದು ಸಚಿವರು ವಿವರಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್, ಕನ್ನಡ ಮತ್ತು ಸಂಸ್ಕøತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ ಟಿ ರವಿ. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ಹಾಗೂ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರೂ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.