ಐದು ವರ್ಷಗಳ ಕಾಲ ಅಭಿವೃದ್ಧಿ ಕಡೆಗೆ ಗಮನ ಹರಿಸಿ, ಜನರ ನಿರೀಕ್ಷೆ ಈಡೇರಿಸಿ- ಸಿಎಂ ಸಿದ್ಧರಾಮಯ್ಯ ಸೂಚನೆ.

ಬೆಂಗಳೂರು,ಮೇ,24,2023(www.justkannada.in): ರಾಜ್ಯದ ಜನತೆ ಅಪಾರ ನಿರೀಕ್ಷೆಗಳ ಜತೆಗೆ ನಮಗೆ ಅಪಾರ ಬಹುಮತದ ಮೂಲಕ ಜವಾಬ್ದಾರಿ ವಹಿಸಿದ್ದಾರೆ. 5 ವರ್ಷಗಳ ಕಾಲ ಅಭಿವೃದ್ಧಿ ಕಡೆಗೆ ಗಮನ ಹರಿಸಿ.  ನಿಮ್ಮ ಕ್ಷೇತ್ರಗಳ ಜನರ ನಿರೀಕ್ಷೆ ಈಡೇರಿಸಿ ಎಂದು ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದರು.

ನೂತನ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.

ಬಳಿಕ ಶಾಸಕರಿಗೆ ಕೆಲ ಸೂಚನೆಗಳನ್ನ ನೀಡಿದ ಸಿಎಂ ಸಿದ್ಧರಾಮಯ್ಯ, ವಿಧಾನಸಭೆ ಅಧಿವೇಶನದಲ್ಲಿ ಕಡ್ಡಾಯವಾಗಿ ಹೆಚ್ಚು ಕ್ರಿಯಾಶೀಲತೆಯಿಂದ ಭಾಗವಹಿಸಿ.  ಬಿಜೆಪಿಯವರು ಮಾಡುವ ಸುಳ್ಳು ಅಪಾದನೆಗಳನ್ನು ಯಶಸ್ವಿಯಾಗಿ ಎದುರಿಸಲು ಎಲ್ಲಾ ಶಾಸಕರು ಕಡ್ಡಾಯವಾಗಿ ಅಧಿವೇಶನದಲ್ಲಿ ಭಾಗವಹಿಸಬೇಕು.  ಕೇಂದ್ರದ ತಾರತಮ್ಯ ನೀತಿಯಿಂದ ರಾಜ್ಯದ ಜನತೆಗೆ ಅಪಾರ ನಷ್ಟವಾಗಿದೆ. ಹಣಕಾಸು ಆಯೋಗದಲ್ಲೂ ನಮಗೆ ಅನ್ಯಾಯವಾಗಿದೆ. ತೆರಿಗೆ ಪಾಲಿನಲ್ಲೂ ಅನ್ಯಾಯವಾಗಿದೆ. ನಮ್ಮ ನಾಡಿನ‌ ಜನತೆ ಕಟ್ಡುವ ತೆರಿಗೆಯಲ್ಲಿ ನಮ್ಮ ಪಾಲು ಸಮರ್ಪಕವಾಗಿ ಬರುತ್ತಿಲ್ಲ. ನಾವು ಕ್ರಿಯಾಶೀಲ ಒತ್ತಡ ಮತ್ತು ಬೇಡಿಕೆ ಮೂಲಕ ನಮ್ಮ ಪಾಲನ್ನು ನಾವು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕೇಂದ್ರದಿಂದ ರಾಜ್ಯಕ್ಕೆ, ನಾಡಿನ ಜನತೆಗೆ ಅನ್ಯಾಯ ಆಗುತ್ತಿದ್ದರೂ ರಾಜ್ಯದಿಂದ ಆಯ್ಕೆ ಆದ ಸಂಸದರು ನಾಲ್ಕೂವರೆ ವರ್ಷಗಳ ಕಾಲ ನಾಡಿನ ಜನತೆಯ ಪರವಾಗಿ ಬಾಯಿ ಬಿಡಲಿಲ್ಲ. ಇದನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಕೋವಿಡ್, ಪ್ರವಾಹದ ಸಂದರ್ಭದಲ್ಲೂ ಈ ಸಂಸದರು ರಾಜ್ಯದ ಪರವಾಗಿ ಕೇಂದ್ರದ ಮುಂದೆ ಬಾಯಿ ಬಿಡಲಿಲ್ಲ. ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಇವರಿಗೆ ಸರಿಯಾದ ಉತ್ತರ ಕೊಡಬೇಕು. ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಜನಪರವಾಗಿ ಕೆಲಸ ಮಾಡಿ ಎಂದು ಶಾಸಕರಿಗೆ ಸಿಎಂ ಸಿದ್ಧರಾಮಯ್ಯ ಸೂಚಿಸಿದರು.

Key words: Focus – development – five years-  CM Siddaramaiah -MLAs