ಆತ ಬಂದಿರೋದು ದುಡ್ಡು ವಸೂಲಿ ಮಾಡೋದಿಕ್ಕೆ- ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೆಂಡಾಮಂಡಲ.

ಮೈಸೂರು,ಸೆಪ್ಟಂಬರ್,1,2021(www.justkannada.in): ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಹೇಳಿಕೆ ನೀಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರಣ್‌ಸಿಂಗ್ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ  ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕರ್ನಾಟಕ ಹಾಗೂ ಇಲ್ಲಿನ ಸ್ಥಳೀಯ ಪಕ್ಷದ ಬಗ್ಗೆ ಆತನಿಗೆ ಮಾಹಿತಿ ಇಲ್ಲ. ಪಾಪ ಅವರಿಗೆ ಏನ್ ಗೊತ್ತು.? ಆತ ಬಂದಿರೋದು ದುಡ್ ವಸೂಲಿ ಮಾಡೋದಿಕ್ಕೆ. ಕಲೆಕ್ಷನ್ ಮಾಡೊದಕ್ಕೆ ಬಂದಿರೋ ವ್ಯಕ್ತಿ ಜೆಡಿಎಸ್ ಬಗ್ಗೆ ಮಾತನಾಡಿದ್ದಾರೆ. ನಾವೇನು ಅವರ ಮನೆ ಬಾಗಿಲಿಗೆ ಹೋಗಿದ್ವಾ.? ಎಂದು ಕೆಂಡಾಮಂಡಲರಾದರು.

ಮೈಸೂರು ಮೇಯರ್ ಆಯ್ಕೆ ಚುನಾವಣೆಯಲ್ಲಿ ಬೆಂಬಲ ಕೋರಿ ಶಾಸಕ ಸಾ ರಾ ಮಹೇಶ್ ಕಚೇರಿಗೆ ಬಿಜೆಪಿ ನಾಯಕರು ಏಕೆ‌ ಬಂದಿದ್ರು? ನಾವೇನು ಬೆಂಬಲ ಕೋರಿ ಅವರ ಬಳಿಗೆ ಹೋಗಿಲ್ಲ. ಅರುಣ್ ಸಿಂಗ್ ರಾಜ್ಯದ ವಾಸ್ತವ ಪರಿಸ್ಥಿತಿ ಗೊತ್ತಿಲ್ಲ. ಇಲ್ಲಿ ಬಿಜೆಪಿ ಸರ್ಕಾರ ಇರೋದ್ರಿಂದ ವಸೂಲಿಗಾಗಿ ಆಗಾಗ್ಗೆ ಭೇಟಿ ನೀಡುತ್ತಾರೆ. ಜೆಡಿಎಸ್ ಬಗ್ಗೆ ಯಾರೂ ಕೂಡ ಹಗುರವಾಗಿ ಮಾತನಾಡಬಾರದು ಎಂದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಆದೇಶ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಇದೇ ಕಾರಣಕ್ಕೆ ನಾವು ಮೇಕೆದಾಟು ಯೋಜನೆ ಆರಂಭಿಸಬೇಕು ಅನ್ನುತ್ತಿರೋದು. ಸಮುದ್ರಕ್ಕೆ ಹರಿದುಹೋಗುವ ಹೆಚ್ಚುವರಿ ನೀರನ್ನ ಸಂಗ್ರಹಿಸಬಹುದು. ಇದನ್ನ ಕೇಂದ್ರ ಮತ್ತು ತಮಿಳುನಾಡು ಅರ್ಥ ಮಾಡಿಕೊಳ್ಳಬೇಕು. ಸೆಪ್ಟೆಂಬರ್ ನಲ್ಲಿ ಮಳೆ ಆಗದಿದ್ರೆ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಇದನ್ನ ಕೇಂದ್ರ ಸರ್ಕಾರ ಹಾಗೂ ನಿಗಮ ಮಂಡಳಿಯೂ ಅರ್ಥ ಮಾಡಿಕೊಳ್ಳಬೇಕು. ಇದನ್ನ ಕೇಂದ್ರಕ್ಕೆ ಅರ್ಥ ಮಾಡಿಸಲು ರಾಜ್ಯ ನಾಯಕರು ವಿಫಲರಾಗಿದ್ದಾರೆ.  ಸರ್ಕಾರದ ಮಂತ್ರಿಗಳಿಗೆ ಮೂಳೆನೂ ಇಲ್ಲ, ಎಲುಬೂ ಇಲ್ಲ ಎಂದು ಟೀಕಿಸಿದರು.

Key words:   Former CM- HD Kumaraswamy – against – in charge – state BJP­ -Arun Singh