ಮೇಕೆದಾಟು ಯೋಜನೆ ಜಾರಿ ವಿಚಾರ: ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರುವಂತೆ ಮಾಜಿ ಸಿಎಂ ಹೆಚ್.ಡಿಕೆ ಆಗ್ರಹ.

ಬೆಂಗಳೂರು,ಜುಲೈ,30,2021(www.justkannada.in): ಕರ್ನಾಟದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು ಹಾಕುತ್ತಿದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರುವಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು? ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆ ಎನ್‌ಡಿಎ ಸರ್ಕಾರದ ಮೇಲೆ ಒತ್ತಡ ಹಾಕಿದೆ. ಆಡಳಿತ ಪಕ್ಷ ಡಿಎಂಕೆ ಕಾಂಗ್ರೆಸ್‌ ಮೇಲೆ ಒತ್ತಡ ಹಾಕಿದೆ. ಕರ್ನಾಟಕದಲ್ಲಿ ಮಾತ್ರ ಎರಡೂ ಪಕ್ಷಗಳು ಯೋಜನೆ ಜಾರಿಯಾಗಬೇಕು ಎನ್ನುತ್ತವೆ? ಯಾರು ಯಾರ ಪರ ಇದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಯಾಗದೆಂದು ಕೇಂದ್ರ ಜಲಸಂಪನ್ಮೂಲ ಸಚಿವರು ಭರವಸೆ ನೀಡಿರುವುದಾಗಿ ತಮಿಳುನಾಡಿನ ಆಡಳಿತ ಪಕ್ಷ, ವಿರೋಧ ಪಕ್ಷಗಳೆರಡೂ ನಿನ್ನೆಯಷ್ಟೇ ಪುನರುಚ್ಚರಿಸಿವೆ. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದ, ತಮಿಳುನಾಡು ಬಿಜೆಪಿ ಮುಖಂಡ, ಮಾಜಿ ಐಪಿಎಸ್‌ ಅಧಿಕಾರಿಯೊಬ್ಬರು ಮೇಕೆದಾಟು ಯೋಜನೆ ವಿರುದ್ಧ ಉಪವಾಸಕ್ಕೂ ಕೂರುತ್ತಿದ್ದಾರೆ.

ಮೇಕೆದಾಟು ಅಣೆಕಟ್ಟು ಯೋಜನೆ ತಮಿಳುನಾಡಿನಲ್ಲಿ ರಾಜಕೀಯ ಒಗ್ಗಟ್ಟು ಪ್ರದರ್ಶನಕ್ಕೆ ಕಾರಣವಾಗಿದ್ದರೆ, ಅದೇ ಮೇಕೆದಾಟು ಯೋಜನೆ ರಾಜ್ಯದಲ್ಲಿನ ಒಡಕುತನವನ್ನು ಸ್ಪಷ್ಟವಾಗಿ ತೋರಿಸುತ್ತಿದೆ. ‘ನಾವು ಯೋಜನೆ ಪರ ಇದ್ದೇವೆ’ ಎಂದು ರಾಜ್ಯದ ಮುಖ್ಯಮಂತ್ರಿಯೊಬ್ಬರೇ ಹೇಳಿದರೆ ಸಾಲದು. ಆಡಳಿತ ಪಕ್ಷ ಇದರ ಪರ ಇರುವುದಾಗಿ ಕೆಲಸದ ಮೂಲಕ ಸಾಬೀತು ಮಾಡಬೇಕು ಎಂದು ಹೆಚ್.ಡಿಕೆ ಸಲಹೆ ನೀಡಿದ್ದಾರೆ.

ಅಣೆಕಟ್ಟು ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಅನುಮತಿ ಪಡೆಯಲಿಲ್ಲ. ಈಗ ಬೊಮ್ಮಾಯಿ ಅವರೂ ಯೋಜನೆ ಜಾರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಇವೆಲ್ಲ ಮಾತಿನಲ್ಲೇ ಉಳಿಯಬಾರದು. ಕೇಂದ್ರದ ಬಳಿಗೆ ಹೋಗಿ ಅನುಮತಿ ಪಡೆಯಲು ಪ್ರಯತ್ನಿಸಬೇಕು. ಈ ಕಾರ್ಯವನ್ನು ಜೆಡಿಎಸ್‌ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೆಚ್.ಡಿಕೆ ತಿಳಿಸಿದ್ದಾರೆ.

ಮೇಕೆದಾಟು, ಕೃಷ್ಣಾ, ಮಹದಾಯಿ ಯೋಜನೆಗಳಿಗೆ ಅನುಮತಿ ನೀಡಲು ಆಗ್ರಹಿಸಿ ಜೆಡಿಎಸ್‌ ರಾಜ್ಯಪಾಲರ ಮೂಲಕ ರಾಷ್ಟ್ರಪತಿ, ಪ್ರಧಾನಿಗೆ ಮನವಿ ಸಲ್ಲಿಸಿದೆ. ಈ ವಿಚಾರವಾಗಿ ಪ್ರಧಾನಿಯನ್ನೂ ಭೇಟಿಯಾಗಲು ನಿರ್ಧರಿಸಿದ್ದೇವೆ. ರಾಜ್ಯವನ್ನು ಆಳುತ್ತಿರುವ ಬಿಜೆಪಿಗೆ ಈ ಯೋಜನೆಗಳ ವಿಚಾರದಲ್ಲಿ ಬದ್ಧತೆ ಇದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರಲಿ ಎಂದು ಟ್ವಿಟ್ಟರ್ ನಲ್ಲಿ ಒತ್ತಾಯಿಸಿದ್ದಾರೆ.

Key words: Former CM HD kumaraswamy-demands -pressure – Center-mekedatu plan