#SealDown ಕುರಿತು ಸರಕಾರ ಜನರ ಭಯ, ಗೊಂದಲ ನಿವಾರಿಸಲಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಮೈಸೂರು, ಏಪ್ರಿಲ್ 11, 2020 (justkannada.in):# SealDown ಗೆ ಸಂಬಂಧಿಸಿದಂತೆ ಬಗೆಬಗೆಯ ಸುದ್ದಿಗಳು ಹರಿದಾಡುತ್ತಿವೆ. ಜನರಲ್ಲಿ ಭೀತಿ ಆವರಿಸಿದ್ದು, ಸಮೂಹ ಸನ್ನಿಗೆ ಸಿಲುಕಿದ್ದಾರೆ. ಆಹಾರ, ಔಷಧ, ಅಗತ್ಯ ವಸ್ತುಗಳ ಲಭ್ಯತೆ ಬಗ್ಗೆ ಜನರಲ್ಲಿ ಅನುಮಾನಗಳು ಮೂಡಿದ್ದು, ಅವುಗಳ ದಾಸ್ತಾನಿಗೆ ಮುಂದಾಗಿದ್ದಾರೆ. ಇದು ಮತ್ತೊಂದು ಸಮಸ್ಯೆ ಸೃಷ್ಟಿಸುವ ಮುನ್ನ ಸರ್ಕಾರ ಅನುಮಾನಗಳನ್ನು ನೀಗಿಸಬೇಕು‌ ಎಂದು ಟ್ವಿಟ್ಟರ್ ನಲ್ಲಿ ಒತ್ತಾಯಿಸಿದ್ದಾರೆ.

#SealDown ಭೀತಿ ಜನರನ್ನು ಸಮೂಹಸನ್ನಿಗೆ ದೂಡಿರುವಾಗಲೇ, ದಿನಸಿ ಅಂಗಡಿ, ಔಷಧಾಲಯಗಳು ತೆರೆಯಬೇಕೋ ಬೇಡವೋ ಎಂಬ ಅನುಮಾನ ಮಾರಾಟಗಾರರಲ್ಲಿ ಮೂಡಿದೆ. ಹಾಗೇನಾದರೂ ದಿನಸಿ ಅಂಗಡಿಗಳು, ಔಷಧಾಲಯಗಳು ಭೀತಿಯಿಂದ ಮುಚ್ಚಿದರೆ, ಜನರಿಗೆ ಆಹಾರ, ಔಷಧಗಳ ಲಭ್ಯತೆಯಲ್ಲಿ ಸಮಸ್ಯೆ ಸೃಷ್ಟಿಯಾಗಲಿದೆ. ಈ ಬಗ್ಗೆ ಸರ್ಕಾರ ಎಚ್ಚರ ವಹಿಸುವ ತುರ್ತು ಎದುರಾಗಿದೆ ಎಂದು ಸಲಹೆ ನೀಡಿದ್ದಾರೆ.

#SealDown ಮಾಡಲು ಸರ್ಕಾರ ನಿರ್ಧರಿಸಿದೆಯೇ? ಮಾಡುವುದಿದ್ದರೆ ಯಾವ್ಯಾವ ಜಿಲ್ಲೆಗಳಿಗೆ ಇದು ಅನ್ವಯ? #SealDown ಅವಧಿಯಲ್ಲಿ ಏನೆಲ್ಲ ಲಭ್ಯ, ಏನು ಲಭ್ಯವಿರದು ಎಂಬುದರ ಬಗ್ಗೆ ಸರ್ಕಾರ ಕೂಡಲೇ ಅಧಿಕೃತವಾಗಿ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಗಾಳಿ ಸುದ್ದಿಗಳು, ಸುಳ್ಳು ಮಾಹಿತಿಗಳು ಜನರ ದಿಕ್ಕು ತಪ್ಪಿಸಲಿವೆ ಎಂದು‌ ಆತಂಕ ವ್ಯಕ್ತಪಡಿಸಿದ್ದಾರೆ.