ರೈತರು, ಸ್ಥಳೀಯರು ಸ್ವಂತ ಬಳಕೆಗೆ ಮರಳು ಸಾಗಿಸಿದರೆ ಕೇಸ್ ಇಲ್ಲ: ಸಚಿವ ಮುರುಗೇಶ್ ನಿರಾಣಿ

ಮೈಸೂರು, ಮೇ 23, 2021 (www.justkannada.in):

ದ್ವಿಚಕ್ರ ವಾಹನ, ಎತ್ತಿನ ಗಾಡಿಯಲ್ಲಿ ರೈತರು ಮತ್ತು ಸ್ಥಳೀಯರು ತಮ್ಮ ಅಗತ್ಯಕ್ಕೆ ಮರಳು ಸಾಗಿಸಿಕೊಂಡರೆ ಕೇಸ್ ದಾಖಲಿಸುವಂತಿಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ, ಗಣಿ ಭೂ ವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಈ ಸಂಬಂಧ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಮರಳು ಮಾಫಿಯ ತಡೆಯಲು ಶೀಘ್ರದಲ್ಲೇ ಕಠಿಣವಾದ ಮರಳುನೀತಿ ಜಾರಿಗೆ ತರುತ್ತೇವೆ ಎಂದು ಮಾಹಿತಿ ನೀಡಿದರು.

ನನ್ನ ಜಿಲ್ಲೆಯ ಕೋವಿಡ್ ಕೇರ್ ಸೆಂಟರ್‌ಗಳು ಶೇ.80 ರಷ್ಟು ಖಾಲಿ

ನನ್ನ ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್‌ಗಳು ಶೇ.80 ರಷ್ಟು ಖಾಲಿ ಇವೆ. ಕೊರೊನಾ ಸವಾಲನ್ನು ಜಿಲ್ಲಾಡಳಿತಗಳು ಮತ್ತು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದ್ದೇವೆ. ಹಾಸಿಗೆಗಳಿಗೆ ಕೊರತೆ ಇಲ್ಲ. ಆಕ್ಸಿಜನ್ ಬೇಡಿಕೆ ಕಡಿಮೆ ಆಗಿದೆ.  ಬ್ಲಾಕ್ ಫಂಗಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸೋಂಕಲ್ಲ. ಆದರೂ ಜಾಗರೂಕತೆಯಿಂದ ಚಿಕಿತ್ಸೆ ನೀಡಲಾಗುತ್ತಿದೆ. ಬ್ಲಾಕ್ ಫಂಗಸ್ ಔಷಧಿ ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಹೇಳಿದರು.‌

ಪ್ರತಿ ತಾಲೂಕಿನಲ್ಲೂ ಆಕ್ಸಿಜನ್ ಜನರೇಟರ್ ಸ್ಥಾಪಿಸಲು ಚಿಂತನೆ ನಡೆಸಲಾಗಿದೆ. ಹೊಸ ನರ್ಸಿಂಗ್ ಕಾಲೇಜು ಬೇಡ ಅನ್ನುವ ತೀರ್ಮಾನಕ್ಕೆ ಬರಲಾಗಿತ್ತು. ಈಗ ನರ್ಸ್‌ಗಳ ಕೊರತೆ ಉಂಟಾಗಿದೆ. ನರ್ಸಿಂಗ್ ಕಾಲೇಜು ತೆರೆಯಲು ಶೈಕ್ಷಣಿಕ ಸಂಸ್ಥೆಗಳು ಮುಂದೆ ಬಂದರೆ ಅನುಮತಿ ನೀಡಲಾಗುವುದು‌. ಕೋವಿಡ್‌ನಲ್ಲಿ ಕೆಲಸ ಮಾಡುವವರಿಗೆ ಗ್ರೇಸ್ ಮಾರ್ಕ್ ನೀಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.