ಅಕ್ರಮ ಗಣಿಗಾರಿಕೆಗೆ ಯಡಿಯೂರಪ್ಪ ಕುಮ್ಮಕ್ಕು : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು,ಜನವರಿ,23,2021(www.justkannada.in) : ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.jk

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಯಡಿಯೂರಪ್ಪ ಅವರ ಕುಮ್ಮಕ್ಕು ಕಾರಣ ಎಂದು ದೂರಿದರು.

ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಯೇ ಅಪರಾಧ. ಅದಕ್ಕೆ ಏನು ಶಿಕ್ಷೆ ? ಅರ್ಜಿ ಹಾಕಿಕೊಂಡು ಅಕ್ರಮವನ್ನು ಸಕ್ರಮ ಮಾಡಿಕೊಳ್ಳಿ ಎಂದು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಹೇಳಬಹುದೇ ? ಎಂದು ಪ್ರಶ್ನಿಸಿದ್ದಾರೆ.

ಇದು ಅಕ್ರಮ ಮನೆ, ಜಮೀನು ಸಕ್ರಮ ಮಾಡುವುದಲ್ಲ. ಹಾಗಾದರೆ, ಗಣಿ ಇಲಾಖೆಯ ಕಾನೂನು ಇರುವುದೇಕೆ. ಮುಖ್ಯಮಂತ್ರಿಗಳ ಹೇಳಿಕೆ  ಖಂಡನೀಯ. ಬೇಜವಾಬ್ದಾರಿತನದ ಪರಮಾವಧಿ. ಮುಖ್ಯಮಂತ್ರಿಗಳೇ ಕಾನೂನು ಬಾಹಿರ ಕ್ರಮಗಳನ್ನು ಸಕ್ರಮ ಮಾಡುತ್ತೇವೆ ಎಂದು ಹೇಳುವುದು ಸರಿಯಲ್ಲ. ಅದು ಅಕ್ರಮಗಳಿಗೆ ಸಹಕರಿಸಿದಂತೆ ಆಗುತ್ತದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಯಾವುದೇ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರಲಿ, ಅದರಲ್ಲಿ ಯಾವುದೇ ಪಕ್ಷದವರು ಭಾಗಿಯಾಗಿರಲಿ. ಸರ್ಕಾರ ಕ್ರಮ ಜರುಗಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಸಿಎಂ, ಉಸ್ತುವಾರಿ ಸಚಿವರೇ ಹೊಣೆ 

ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿರುವ ದುರಂತ ಕುರಿತು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದೆ. ಆಂಧ್ರದಿಂದ ಪರವಾನಿಗೆ ಇಲ್ಲದೆ ಜಿಲಿಟಿನ್ ಮತ್ತು ಡೈನಮೇಟ್ ತರಲಾಗಿತ್ತು. ಇದು ಮೊದಲ ಅಪರಾಧ. ತಂದಿದ್ದನ್ನು ಸುರಕ್ಷಿತವಾದ ಜಾಗದಲ್ಲಿ ಇಡದೇ ಹೋಗಿದ್ದಿದು ಎರಡನೇ ಅಪರಾಧ. ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯ ಈ ದುರಂತದಲ್ಲಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ದೂರಿದ್ದಾರೆ.

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರೇ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಕಡೆ  ಅಕ್ರಮ ಗಣಿಗಾರಿಕೆಗಳು ನಡೆಯುತ್ತಿವೆ ಎಂದು ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಯವರ ತವರು ಜಿಲ್ಲೆಯಲ್ಲಿಯೇ ಪರವಾನಿಗೆ ಇಲ್ಲದೆ ಯದ್ವಾತದ್ವಾ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದರೆ ಇದು ಜಿಲ್ಲಾಡಳಿತರ ವೈಫಲ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರು ಇದರ ಹೊಣೆ ಹೊರಬೇಕು ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಈ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಈಶ್ವರಪ್ಪ ಅವರು ಮಾತನಾಡುತ್ತಾ, ಊರಿನ ಒಳ್ಳೆಯದಕ್ಕೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಕಣ್ಣು ಮುಚ್ಚಿಕೊಂಡಿರಿ ಎಂದು ಸಲಹೆ ನೀಡಿದ್ದಾರೆ. ಜನಪ್ರತಿನಿಧಿಯೇ ಹೀಗೇ ಹೇಳಿದ ಬಳಿಕ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕೆಲಸ ಮಾಡದೆ ಇನ್ನೇನು ಮಾಡಿಯಾರು? ಜಿಲ್ಲೆಯಲ್ಲಿ ಎಲ್ಲ ಕ್ವಾರಿಗಳು ಮತ್ತು ಕ್ರಷರ್‍ಗಳು ಸಕ್ರಮವಾಗಿ ನಡೆಯುತ್ತಿವೆ ಎಂದೂ ಈಶ್ವರಪ್ಪ ಅವರೇ ಹೇಳಿದ್ದಾರೆ. ಆದರೆ, ಆಯನೂರು ಮಂಜುನಾಥ್ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದಿದ್ದಾರೆ. ಮಂಜುನಾಥ್ ಅವರು ಬಿಜೆಪಿಯ ಹಿರಿಯ ನಾಯಕರು. ವಿಧಾನ ಪರಿಷತ್ತಿನ ಹಾಲಿ ಸದಸ್ಯರು. ಕ್ರಷರ್ ನಡೆಸುತ್ತಿದ್ದವರ ಬೇಜವಾಬ್ದಾರಿತನವೂ ಇದರಲ್ಲಿ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.illegal,mining,Yeddyurappa,Support,Former CM,Siddaramaiah,Accused

ಇದು ಗಂಭೀರವಾದ ವಿಷಯ. ಸ್ಫೋಟದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಹಾಗೂ ಆಯನೂರು ಮಂಜುನಾಥ್ ಮತ್ತು ಈಶ್ವರಪ್ಪ ಅವರ ಹೇಳಿಕೆ ಹಿನ್ನೆಲೆಯಲ್ಲಿ ಸತ್ಯ ಏನೆಂದು ಗೊತ್ತಾಗಬೇಕು. ಮೃತರ ಕುಟುಂಬದವರಿಗೆ ನ್ಯಾಯಯುತ ಪರಿಹಾರ ಘೋಷಣೆ ಮಾಡಬೇಕು. ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಬೇಕು. ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

key words : illegal-mining-Yeddyurappa-Support-Former CM-Siddaramaiah-Accused