ಕನ್ನಡಿಗರಿಂದ, ಕನ್ನಡಿಗರಿಗಾಗಿ, ಕನ್ನಡಿಗರದ್ದೇ ಆದ ಸರಕಾರ ಅಧಿಕಾರಕ್ಕೆ ಬರಬೇಕು: ಎಚ್ಡಿಕೆ

ಬೆಂಗಳೂರು, ಜುಲೈ 03, 2022 (www.justkannada.in): ರಾಜ್ಯದಲ್ಲಿ ಕನ್ನಡಿಗರಿಂದ, ಕನ್ನಡಿಗರಿಗಾಗಿ, ಕನ್ನಡಿಗರದ್ದೇ ಆದ ಸರಕಾರ ಅಧಿಕಾರಕ್ಕೆ ಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಹೇಳಿದರು.

ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಜನತಾಮಿತ್ರ ಅಭಿಯಾನದ ಮೊದಲ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ವಿಧಾಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನ್ನಡಿಗರಿಂದ, ಕನ್ನಡಿಗರಿಗಾಗಿ, ಕನ್ನಡಿಗರದ್ದೇ ಆದ ಸರಕಾರ ಅಧಿಕಾರಕ್ಕೆ ಬರಬೇಕು. ಇದಕ್ಕಾಗಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರಲಿದೆ. ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೇನೆ ಎಂದು ಹೇಳಿದರು.

ಮುಂದಿನ ಚುನಾವಣೆಯಲ್ಲಿ ಒಮ್ಮೆ ಅಧಿಕಾರ ಕೊಟ್ಟು ನೋಡಿ. ಪ್ರಾಮಾಣಿಕ ಆಡಳಿತ ನೀಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸಿ, ಸ್ವಚ್ಛ, ಸುಂದರ ಬೆಂಗಳೂರು ನಗರವನ್ನು ನಿರ್ಮಾಣ ಮಾಡುತ್ತೇನೆ ಎಂದರು.

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಚುನಾವಣೆ ಹತ್ತಿರ ಬಂದಾಗ ನಿದ್ದೆಯಿಂದ ಎದ್ದು ಕೂತಿವೆ. ವಿಧಾನಸೌಧ ಮತ್ತು ಬಿಬಿಎಂಪಿಯಲ್ಲಿ ಆಡಳಿತ ನಡೆಸಿವೆ. ಬಿಜೆಪಿ ಪಕ್ಷದವರು ಹಿಂದುತ್ವ ಎಂದು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ದೂರಿದರು.