777 ಚಾರ್ಲಿ ಸಿನಿಮಾ ವೀಕ್ಷಿಸಿ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

Karnataka-cm-bommai-watch-charlie-Kannada-film-emotional

 

ಬೆಂಗಳೂರು, ಜೂನ್ 14,2022: (www.justkannada.in news ) ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರ ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ‘ ಸನ್ನಿ’ ಯನ್ನು ನೆನಪಿಸಿಕೊಂಡು ಭಾವುಕರಾದರು. ದುಃಖ ತಡೆಯಲಾಗದೇ ಕಣ್ಣೀರು ಹಾಕಿದರು.

ಮನುಷ್ಯ ಮತ್ತು ನಾಯಿಯ ನಡುವಿನ ಪ್ರೀತಿ, ಯಾವುದೇ ಕಟ್ಟುಪಾಡಿಲ್ಲದ (unconditional) ಪ್ರೀತಿಗೆ ಉತ್ತಮ ಉದಾಹರಣೆ. ಅತ್ಯಂತ ಪರಿಶುದ್ಧ ಪ್ರೀತಿ ಇದು ಎಂದು ಮುಖ್ಯಮಂತ್ರಿಗಳು ಗದ್ಗದಿತರಾಗಿ ನುಡಿದರು. ನಾಯಕನಟ ರಕ್ಷಿತ ಶೆಟ್ಟಿ ಮನೋಜ್ಞ ವಾಗಿ ನಟಿಸಿದ್ದಾರೆ ಎಂದ ಸಿಎಂ ಬೊಮ್ಮಾಯಿ ಅವರು ಹೇಳಿದಿಷ್ಟು…

ಈಗ ನಾನು ಮನೆಯಲ್ಲಿ ಹೆಣ್ಣುನಾಯಿ ಟಿಯಾ’ಳನ್ನು ಸಾಕುತ್ತಿರುವೆ. ಈ ಸಿನಿಮಾ ನೋಡಲು ಜನರ ದಟ್ಟಣೆ ನೋಡಿದಾಗ ಪ್ರಾಣಿ ಮತ್ತು ಮನುಷ್ಯ ನ ಸಂಬಂಧ ವಿರುವ ಚಿತ್ರ ನೋಡಬೇಕು ಎಂದೆನಿಸಿತ್ತು. ರಕ್ಷಿತ್ ಅವರೂ ಚಿತ್ರ ವೀಕ್ಷಿಸಬೇಕೆಂದು ಕರೆದಿದ್ದರು. ಹಾಗಾಗಿ ಚಿತ್ರ ನೋಡಿದಂತಾಯಿತು.
ಮನುಷ್ಯ ಮತ್ತು ಪ್ರಾಣಿಗಳ ಸಂಬಂಧ ಅದರಲ್ಲಿಯೂ ನಾಯಿ , ಮನುಷ್ಯನನ್ನು ಅತ್ಯಂತ ಪ್ರೀತಿಸುವ ಪ್ರಾಣಿ. ಮನುಷ್ಯನೂ ನಾಯಿಯನ್ನು ಪ್ರೀತಿಸುತ್ತಾನೆ. ಸಂಬಂಧಗಳನ್ನು ಮಾರ್ಮಿಕ ಮತ್ತು ಸೂಕ್ಷ್ಮವಾಗಿ ಭಾವನಾತ್ಮಕವಾಗಿ ತೆಗೆದಿದ್ದಾರೆಚಿತ್ರದ ನಿರ್ದೇಶಕರು.

ತಜ್ಞರೊಂದಿಗೆ ಚರ್ಚೆ

ಬೀದಿನಾಯಿಗಳನ್ನು ಸೂಕ್ತ ರೀತಿಯಲ್ಲಿ ನೋಡಿಕೊಳ್ಳಲು ತಜ್ಞರೊಂದಿಗೆ ಚರ್ಚಿಸಿ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಾಯಿಗಳ ತರಬೇತಿ ನೀಡುವವರಿಗೆ ಪ್ರೋತ್ಸಾಹ ನೀಡುವ ವಿಶೇಷ ಕಾರ್ಯಕ್ರಮ ರೂಪಿಸುವ ಚಿಂತನೆ ಇದೆ. ಬೀದಿನಾಯಿಗಳನ್ನು ದತ್ತು ತೆಗೆದುಕೊಳ್ಳಬೇಕು. ಪ್ರಾಣಿಗಳನ್ನು ಹಿಂಸಿಸಬಾರರು. ಬೀದಿನಾಯಿಗಳನ್ನು ಹಾಗೂ ಇತರೆ ಪ್ರಾಣಿಗಳನ್ನು ರಕ್ಷಿಸಬೇಕು ಹಾಗೂ ಸಾಧ್ಯವಾದರೆ ದತ್ತು ಪಡೆಯಬೇಕು. ಯಾರೂ ಇಲ್ಲದ ಪ್ರಾಣಿಗಳನ್ನು ದತ್ತು ಪಡೆದು ಸಾಕಿದರೆ ಉಪಕಾರವಾಗುತ್ತದೆ. ಅವುಗಳಿಂದ ಹೆಚ್ಚಿನ ಪ್ರೀತಿ, ಸಂತೋಷ ಹಾಗೂ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಮನೋಜ್ಞ ಕಥೆಯನ್ನು ನಿರ್ದೇಶಕ ಕಿರಣ್ ಚಿತ್ರಿಸಿದ್ದಾರೆ. ನಾಯಿ ಜೊತೆಗೆ ಪಾತ್ರ ಮಾಡುವುದು ಸುಲಭದ ಮಾತಲ್ಲ. ಅದರ ಭಾವನೆಯ ಮಟ್ಟಕ್ಕೆ ಹೋಗಿ ಪಾತ್ರ ನಿಭಾಯಿಸಬೇಕಾಗುತ್ತದೆ. ರಕ್ಷಿತ್ ಶೆಟ್ಟಿ ಅವರ ಪಾತ್ರವನ್ನು ಅದ್ಭುತವಾಗಿ ಅಭಿನಯಿಸಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ನಿರ್ದೇಶಕ ಕಿರಣ್ ಅದ್ಭುತ ಸಿನಿಮಾ ಮಾಡಿದ್ದಾರೆ.

ಎಲ್ಲರೂ ಪ್ರಾಣಿಪ್ರೇಮಿಗಳಾಗಲು ಸಿಎಂ ಕರೆ

ಕನ್ನಡ ಚಿತ್ರರಂಗ ಅಂತರರಾಷ್ಟ್ರೀಯ ಮಟ್ಟದ ಸಾಧನೆಯನ್ನು ಮಾಡುತ್ತಿದೆ. ಈ ಬಗ್ಗೆ ನಮಗೆ ಹೆಮ್ಮೆ ಇದೆ. ಕೆ.ಜಿ.ಎಫ್ 2 ಹಿನ್ನೆಲೆಯಲ್ಲಿ ಒಂದು ಅರ್ಥಪೂರ್ಣ, ಮನೋಜ್ಞವಾಗಿ ರುವ ಚಿತ್ರವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾಡಬಹುದು ಎಂದು ನಿರೂಪಿಸಿದ್ದಾರೆ. ಚಿತ್ರ ಅಂತರರಾಷ್ಟ್ರೀಯ ಮನ್ನಣೆಯನ್ನು ಪಡೆದಿದೆ. ಚಿತ್ರವನ್ನು ಎಲ್ಲರೂ ವೀಕ್ಷಿಸಿ ಪ್ರಾಣಿಗಳ ಪ್ರೇಮಿಗಳಾಗಬೇಕು ಎಂದು ಕರೆ ನೀಡಿದರು.

ಕನ್ನಡಕ್ಕೆ ಚಿತ್ರರಂಗ ಅಂತರರಾಷ್ಟ್ರೀಯ ಸ್ಥಾನವನ್ನು ಕಲ್ಪಿಸಿಕೊಟ್ಟಿದೆ. ಕನ್ನಡ ಸಿನಿಮಾಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯುವಂಥ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಬರುವ ದಿನಗಳಲ್ಲಿ ಕನ್ನಡ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹಳ ದೊಡ್ಡ ಹೆಸರು ಮಾಡಲಿದೆ. ಕನ್ನಡಕ್ಕೆ ಚಿತ್ರರಂಗ ಅಂತರರಾಷ್ಟ್ರೀಯ ಸ್ಥಾನವನ್ನು ಕಲ್ಪಿಸಿಕೊಟ್ಟಿದೆ.

ಚಿತ್ರನಗರ

ಮೈಸೂರಿನಲ್ಲಿ ಈಗಾಗಲೇ ಚಿತ್ರನಗರ ನಿರ್ಮಾಣಕ್ಕೆ ಸ್ಥಳ ಮೀಸಲಿರಿಸಿದೆ. ಇಂದಿನ ಹಾಗೂ ಭವಿಷ್ಯದ ತಂತ್ರಜ್ಞಾನವನ್ನು ಬಳಕೆ ಮಾಡಿ ಯಾವ ರೀತಿ ಸ್ಟುಡಿಯೋ ಮಾಡಬಹುದು , ಆಸಕ್ತರೊಂದಿಗೆ ಮಾತನಾಡಿ ಅಂತರರಾಷ್ಟ್ರೀಯ ಮಟ್ಟದ ಜಂಟಿ ಉದ್ಯಮವನ್ನು ಕೈಗೊಳ್ಳಲಾಗುವುದು ಎಂದರು.

key words : Karnataka-cm-bommai-watch-charlie-Kannada-film-emotional