ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ‘ ದಸರಾ ಬಂಪರ್’

 

ಬೆಂಗಳೂರು, ಅ.12, 2021 : (www.justkannada.in news ) ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ದಸರಾ ಹಬ್ಬದ ಬಂಪರ್ ಕೊಡುಗೆ ಘೋಷಿಸಿದೆ.

ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಪ್ ‌ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಹೇಳಿದಿಷ್ಟು..

ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ಅವರ ರಕ್ಷಣೆಗೆ ವಿನೂತನ ವಿಮೆ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5ನೇವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇವೇತನ ಆಯೋಗದ ವೇತನ ದೊರಕಿಸಿಕೊಡುವಂತೆ ಅರ್ಚಕರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತ್ವರಿತಗತಿಯಲ್ಲಿ ಅರ್ಚರಿಕರಿಗೆ 6ನೇ ವೇತನ ಆಯೋಗದ ವೇತನ ನೀಡಲು ತೀರ್ಮಾನಿಸಿದ್ದೇನೆ. ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ35%ರಷ್ಟು ಮೀರದಂತೆ ನೌಕರರನ್ನು 6ನೇ ವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ.
ಇದರಿಂದ ಮುಜರಾಯಿ ಇಲಾಖೆಯ ಸುಮಾರು 1034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಇದಕ್ಕೆ 20 ಕೋಟಿ ರೂ. ವೆಚ್ಚವಾಗಲಿದ್ದು, ಆಯಾ ದೇವಸ್ಥಾನಗಳ ನಿಧಿಯಿಂದ ಒದಗಿಸಲಾಗುವುದು. ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ.

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲ ದೇವಸ್ಥಾನಗಳ ಆಸ್ತಿ ಮಾರ್ಗನಕ್ಷೆ, ಅಲ್ಲಿನ ಸೇವೆಗಳ ಸಂಪೂರ್ಣ ಮಾಹಿತಿಯನ್ನು ಆನ್‌ಲೈನ್‌ ಮೂಲಕ ತಿಳಿದುಕೊಳ್ಳುವಂತೆ ಐಟಿಎಂಎಸ್ (ಇಂಟಿಗ್ರೆಟೆಡ್ ಡೆವೆಲಪ್ ಮೆಂಟ್ ಮ್ಯಾನೇಜ್ ಮೆಂಟ್ ಸಿಸ್ಟಮ್) ಜಾರಿಗೆ ತೀರ್ಮಾನಿಸಲಾಗಿದೆ.

ಇದೊಂದು ವಿನೂತನ ಯೋಜನೆಯಾಗಿದ್ದು, ರಾಜ್ಯದಲ್ಲಿ ಇದನ್ನು ಮೊದಲ ಬಾರಿಗೆ ಜಾರಿಗೆ ತರಲಾಗುತ್ತಿದೆ. ಇದರಿಂದ ರಾಜ್ಯದ ದೇವಾಲಯಗಳ ಮಾಹಿತಿ ಒಂದೆಡೆ ದೊರೆಯುವುದರಿಂದ ದೇಶ-ವಿದೇಶಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗಲಿದೆ. ದೇವಾಲಯಗಳ ಆದಾಯ ವೃದ್ಧಿಗೂ ಇದು ಪೂರಕವಾಗಲಿದೆ.

ವಿಜಯದಶಮಿ ದಿನ ವಿಶೇಷ ಪೂಜೆ:

ವಿಶ್ವದಲ್ಲಿ ಕೊರೊನಾ ಎರಡು ಅಲೆಗಳಿಂದ ಸಾಕಷ್ಟು ಜನರ ಜೀವ ಹಾನಿಯಾಗಿದೆ. ಈಗ ಮೂರನೆ ಅಲೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ನಾವು ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವರ್ಗದ ದೇವಸ್ಥಾನಗಳಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಅಕ್ಟೋಬರ್ 15 ರಂದು ಎಲ್ಲ ಜನರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲು ಎಲ್ಲ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಹಿಂದು ಧರ್ಮ ಶಾಸ್ತ್ರ ಪುರಾಣದಲ್ಲಿ ವಿಜಯದಶಮಿಯನ್ನು ವಿಶೇಷ ದಿನವೆಂದು ಪರಿಗಣಿಸಲಾಗುತ್ತದೆ. ಇದು ದುಷ್ಟ ಶಕ್ತಿಯನ್ನು ಸಂಹರಿಸಿ ವಿಜಯವನ್ನು ಆಚರಿಸುವ ದಿನ. ಆದ್ದರಿಂದ ಈ ದಿನ ಶ್ರೀ ಭಗವತಿ ಮತ್ತು ಭಗವಂತನನ್ನು ವಿಶೇಷವಾಗಿ ಪ್ರಾರ್ಥಿಸಿ ಪೂಜಿಸಿದರೆ. ವಿಶೇಷ ಫಲ ಹೊಂದ ಬಹುದೆಂದು ಶಾಸ್ತ್ರ ವಿಧಿತವಾಗಿದೆ. ಅಲ್ಲದೇ ಭಕ್ತರ ನಂಬಿಕೆಯೂ ಆಗಿರುವುದರಿಂದ ಪ್ರಾಕೃತಿಕವಾಗಿ ಯಾರಿಗೂ ದಷ್ಪರಿಣಾಮ ಆಗದಂತೆ ವಿಜಯ ದಶಮಿಯ ದಿನ ಅಕ್ಟೋಬರ 15 ರಂದು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕೊರೊನಾ ಸಂಕಟ ದೂರ ಮಾಡಿ ಜನತೆಯ ಆರೋಗ್ಯ ಕಾಯುವಂತೆ ವಿಶೇಷ ಪೂಜೆ ನೆರವೇರಿಸಲು ಸೂಚಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಹಾಗೂ ಮುಜರಾಯಿ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ, ಮುಜರಾಯಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ಉಪಸ್ಥಿತರಿದ್ದರು.

key words : Karnataka-endowment-department-temple-priest-get-dasara-bampur-shashikalla-jolley-Rohini Sindhuri