ಬ್ಯಾಡಗಿ ಮೆಣಸಿನ ಗುಣಮಟ್ಟ ಪರೀಕ್ಷೆಗೆ ಲ್ಯಾಬ್; ರಾಜ್ಯಾದ್ಯಂತ ಶೀಘ್ರವೇ ಎಪಿಎಂಸಿಗೆ ಸಿಬ್ಬಂದಿ ನೇಮಕ – ಸಚಿವ ಎಸ್ ಟಿ ಸೋಮಶೇಖರ್…

ಹಾವೇರಿ,ಜು,15,2020(www.justkannada.in):  ರಾಜ್ಯವಷ್ಟೇ ಅಲ್ಲದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಬ್ಯಾಡಗಿ ಮೆಣಸಿನಕಾಯಿಗೆ ಅದರದ್ದೇ ಆದ ವಿಶೇಷತೆ ಇದೆ. ಇದಕ್ಕೆ ಇನ್ನಷ್ಟು ಮನ್ನಣೆ ಸಿಗುವುದರ ಜೊತೆಗೆ ರೈತರಿಗೂ ಅನುಕೂಲವಾಗಬೇಕು ಎಂಬ ನಿಟ್ಟಿನಲ್ಲಿ ಬ್ಯಾಡಗಿಯ ಮೆಣಸಿನ ಕಾಯಿ ಮಾರುಕಟ್ಟೆಗೆ ಒಂದು ಪ್ರಯೋಗಾಲಯ (ಲ್ಯಾಬೋರೇಟರಿ) ವನ್ನು ಮಂಜೂರು ಮಾಡಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.jk-logo-justkannada-logo

ಹಾವೇರಿ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ  ನಂತರ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಬ್ಯಾಡಗಿ ಮೆಣಸಿನಕಾಯಿ ಪರೀಕ್ಷೆಗೆಂದು ಲ್ಯಾಬೋರೇಟರಿಯನ್ನು ಮಾಡುವುದರಿಂದ ಮೆಣಸಿನ ಕಾಯಿ ಗುಣಮಟ್ಟವನ್ನು ಇಲ್ಲಿಯೇ ಪರೀಕ್ಷಿಸಲು ಅನುಕೂಲವಾಗಲಿದೆ. ಇದು ರೈತರ ಹಿತದೃಷ್ಟಿಯಿಂದ ಸಹಕಾರಿ. ಇನ್ನು ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯ ಮೂಲಸೌಲಭ್ಯಕ್ಕೆ ಈಗಾಗಲೇ 10 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದು, ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ ಎಂದು ತಿಳಿಸಿದರು.

ಎಪಿಎಂಸಿಗೆ 800 ಸಿಬ್ಬಂದಿ ನೇಮಕ…

ರಾಜ್ಯದಲ್ಲಿ ಎಪಿಎಂಸಿ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ಇದಕ್ಕಾಗಿ ರಾಜ್ಯಾದ್ಯಂತ ಸುಮಾರು 800 ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ರೈತರಿಗೆ ನಮ್ಮ ಬೆಳೆ ನಮ್ಮ ಹಕ್ಕು ಅಧಿಕಾರ…

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೇ ಅನುಕೂಲವಾಗಿದೆ. ಇದು ಕೇಂದ್ರ ಸರ್ಕಾರ ಉತ್ತಮ ಯೋಜನೆಯಾಗಿದೆ. ರೈತ ತಾನು ಬೆಳೆದ ಬೆಳೆಯನ್ನು ಮುಕ್ತವಾಗಿ ಎಲ್ಲಿ ಬೇಕಾದರೂ ಮಾರಾಟ ಮಾಡುವ ಮುಕ್ತ ಹಕ್ಕನ್ನು ಹೊಂದಿದ್ದು, ಸ್ಪರ್ಧಾತ್ಮಕ ಬೆಲೆಗೆ ಮಾರಾಟ ಮಾಡಬಹುದಾಗಿದೆ. ಈ ಮೂಲಕ ನಮ್ಮ ಬೆಳೆ ನಮ್ಮ ಹಕ್ಕು ಎಂಬುದು ರೈತರ ಮಂತ್ರವಾಗಿದೆ. ಅವರ ಬೆಳೆಗಳಿಗೆ ಅವರೇ ಬೆಲೆಯನ್ನು ನಿರ್ಧರಿಸುವ ಕಾಲ ಈಗ ಬಂದಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಸಿದ್ದರಾಮಯ್ಯ, ಶಿವಕುಮಾರ್ ಅವರಿಗೇ ಹೊಂದಾಣಿಕೆ ಇಲ್ಲ…

ಇದೇ ವೇಳೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ದ ವಾಗ್ದಾಳಿ ನಡೆಸಿದ ಸಚಿವ ಎಸ್.ಟಿ ಸೋಮಶೇಖರ್, ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಹೊಂದಾಣಿಕೆ ಇಲ್ಲ ಎಂದಿದ್ದಾರೆ. ಮೊದಲು ಅವರಿಬ್ಬರ ನಡುವೆಯೇ ಹೊಂದಾಣಿಕೆ ಇಲ್ಲ. ನಮ್ಮ ಪಕ್ಷದ ಬಗ್ಗೆ ಸುಮ್ಮನೆ ಮಾತನಾಡುತ್ತಾರೆ. ನಾವೆಲ್ಲರೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಕೇವಲ ಪ್ರಚಾರಕ್ಕಾಗಿ ಅವರು ಜನರ ದಿಕ್ಕನ್ನು ಬೇರೆ ಕಡೆ ಸೆಳೆಯಲು ಈ ಕೊರೋನಾದ ಸಂಕಷ್ಟದ ಕಾಲದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.lab-badagi-pepper-quality-test-minister-st-somashekhar

ಹೊಸಬರ ವಿಚಾರ ಮುಖ್ಯಮಂತ್ರಿಗಳ ವಿವೇಚನೆ

ಹೊಸಬರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವ ವಿಚಾರ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದೆ. ಈ ನಿಟ್ಟಿನಲ್ಲಿ ಯಾರನ್ನು ಸೇರಿಸಿಕೊಳ್ಳಬೇಕು ಹಾಗೂ ಬಿಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿಗಳೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

Key words: Lab – Badagi pepper -quality test-Minister -ST Somashekhar.