ಮೂಗೂರು ತ್ರಿಪುರ ಸುಂದರಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿದ ಸಚಿವ ಎಸ್.ಟಿ ಸೋಮಶೇಖರ್.

ಟಿ.ನರಸೀಪುರ, ಆಗಸ್ಟ್ 10,2022(www.justkannada.in): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದ ತ್ರಿಪುರ ಸುಂದರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿದರು.

ಆಗಸ್ಟ್ 21ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಕಳಶ ಪ್ರತಿಷ್ಠಾಪನ, ಗೋಪುರ ಉದ್ಘಾಟನೆ ಸೇರಿದಂತೆ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ರೂಪುರೇಷೆ ಕುರಿತ ಪೂರ್ವಸಿದ್ಧತಾ ಸಭೆ ಕೂಡ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಬಹುತೇಕ ಮುಕ್ತಾಯವಾಗಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಈ ಕಾರ್ಯಕ್ರಮದ ಬಗ್ಗೆ ಸ್ಥಳೀಯ ಶಾಸಕರು ವಿಶೇಷ ಆಸಕ್ತಿ ವಹಿಸಿದ್ದಾರೆ ಎಂದರು. ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ. ಕಾರ್ಯಕ್ರಮ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ ಎಂದು ಹೇಳಿದರು.

ಹೈಟೆಕ್ ಶೌಚಾಲಯ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸೇರಿದಂತೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು. ಮನವಿ ಆಲಿಸಿದ ಸಚಿವರು, ಜಿಲ್ಲಾಧಿಕಾರಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ ಅವರು ಮಾತನಾಡಿ, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಉತ್ತಮ ರೀತಿಯಲ್ಲಿ ಸ್ಪಂದಿಸಿದೆ. ಸಚಿವ ಸೋಮಶೇಖರ್ ಅವರ ಸಂಪೂರ್ಣ ಸಹಕಾರ ಮತ್ತು ಬೆಂಬಲದಿಂದ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ತ್ವರಿತವಾಗಿ ನೆರವೇರಿದಂತಾಯಿತು ಎಂದು ಸರ್ಕಾರ ಮತ್ತು ಸಚಿವರಿಗೆ ಅಭಿನಂದನೆ ಸಲ್ಲಿಸಿದರು.

ಸಭೆಯಲ್ಲಿ ಶಾಸಕರಾದ ಅಶ್ವಿನ್ ಕುಮಾರ್, ಉಪವಿಭಾಗಾಧಿಕಾರಿ ಕಮಲಾ ಬಾಯಿ, ತಹಸೀಲ್ದಾರ್ ಗೀತಾ ಸೇರಿದಂತೆ ಹಲವು ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

Key words: Minister -ST Somasekhar- development works – Muguru-Tripura Sundaramma temple