ಅರ್ಥಪೂರ್ಣವಾದ ದಸರಾ ಯಶಸ್ವಿಗೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ-ಸಚಿವ ಎಸ್. ಟಿ. ಸೋಮಶೇಖರ್.

ಮೈಸೂರು,ಆಗಸ್ಟ್,18,2022(www.justkannada.in): ಈ ಬಾರಿ ಸಾಂಪ್ರದಾಯಿಕವಾಗಿ ಹಾಗೂ ಅದ್ದೂರಿಯಾಗಿ ಮೈಸೂರು ದಸರಾವನ್ನು ಆಚರಣೆ ಮಾಡುತ್ತಿದ್ದು, ಈ ಸಂಬಂಧ ಉಪಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಸಮಿತಿಯ ಸದಸ್ಯರು ಯಾವುದೇ ಲೋಪ ಉಂಟಾಗದಂತೆ  ವ್ಯವಸ್ಧಿತವಾಗಿ ಕಾರ್ಯನಿರ್ವಹಿಸಿ ದಸರಾ ಯಶಸ್ವಿಗೆ ಶ್ರಮಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ, ದಸರಾ ಉಪಸಮಿತಿಗಳ ಸಿದ್ದತೆಯ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಈ ಬಾರಿ ನವೀನ ರೀತಿಯ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಸರಾಗೆ ಮೆರುಗು ತರಬೇಕು. ವಿದ್ಯುತ್ ದೀಪಾಲಂಕಾರ ಆಕರ್ಷಕವಾಗಿ ಇರಬೇಕು. ಶಿಷ್ಠಾಚಾರದಲ್ಲಿ ಯಾವುದೇ ರೀತಿಯ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ದಸರಾ ಉಪ ಸಮಿತಿಗಳು ಆಯೋಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾವಿದರು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸಬೇಕು. ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿ. ಈ ಬಾರಿಯು  ರೈತ ದಸರಾ, ಯೋಗದಸರಾ, ಚಲನಚಿತ್ರೋತ್ಸವ, ದಸರಾ ಕುಸ್ತಿ, ಯುವದಸರಾ, ಯುವಸಂಭ್ರಮ, ಮಹಿಳಾ ದಸರಾ, ಮತ್ಸ ಪ್ರದರ್ಶನ ಮತ್ತು ಮಾರಾಟ, ಆಹಾರ ಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ  ನಡೆಸಬೇಕು ಎಂದು ಸಮಿತಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್, ಮೈಸೂರು ನಗರ ಆಯುಕ್ತರಾದ ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಆರ್.ಚೇತನ್, ಅಪರ ಜಿಲ್ಲಾಧಿಕಾರಿಗಳಾದ ಡಾ.ಮಂಜುನಾಥಸ್ವಾಮಿ ಸೇರಿದಂತೆ ವಿವಿಧ ಸಮಿತಿಗಳ ಕಾರ್ಯಾದ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Key words: mysore dasara- Officer- work – Minister -S. T. Somashekhar