ಪವರ್ ಗ್ರಿಡ್ ಮಾರ್ಗ ಬದಲಾಯಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ: ನಾಳೆಯಿಂದ ಹೋರಾಟ ತೀವ್ರ-ಎಚ್ಚರಿಕೆ ಕೊಟ್ಟ ಬಡಗಲಪುರ ನಾಗೇಂದ್ರ…

ಮೈಸೂರು,ಜ,2,2020(www.justkannada.in): ಮೈಸೂರು ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ ಪವರ್ ಗ್ರಿಡ್ ಮಾರ್ಗ ಬದಲಾಯಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆ ನಡೆಯುತ್ತಿದೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಪ್ರತಿಭಟನೆ ನಡೆಯುತ್ತಿದ್ದರೂ ಯಾರೊಬ್ಬರು ಇದಕ್ಕೆ ಸ್ಪಂದಿಸುತ್ತಿಲ್ಲ. ಹಾಗಾಗಿ ನಾಳೆಯಿಂದ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಮೈಸೂರು ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ ಪವರ್ ಗ್ರಿಡ್ ಮಾರ್ಗ ಬದಲಾಯಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆ ನಡೆಯುತ್ತಿದೆ.  ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಪ್ರತಿಭಟನೆ ನಡೆಯುತ್ತಿದ್ದರೂ ಯಾರೊಬ್ಬರು ಇದಕ್ಕೆ ಸ್ಪಂದಿಸುತ್ತಿಲ್ಲ. ಹಾಗಾಗಿ ನಾಳೆಯಿಂದ ಹೋರಾಟವನ್ನು ತೀವ್ರಗೊಳಿಸುತ್ತೇವೆ. ನಾಳೆ ಮೈಸೂರಿಗೆ ಆಗಮಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಭಟನಾ ಸ್ಥಳಕ್ಕೆ ಬಂದು ಸ್ಪಂದಿಸದೇ ಇದ್ದಲ್ಲಿ ನಾಳೆ ಜಿಲ್ಲಾ ಪಂಚಾಯ್ತಿಯಲ್ಲಿ ನಡೆಯುವ ಸಭೆಗೆ ಹೋಗಿ ಮುತ್ತಿಗೆ ಹಾಕುತ್ತೇವೆ. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಲಿರುವ ರೈತರು ನಾಳೆ ನಡೆಯುವ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸುವ ಸಲುವಾಗಿ ತುಮಕೂರಿಗೆ ತೆರಳುತ್ತಿದ್ದ ರೈತರನ್ನು ಬಂಧಿಸಿರುವುದು ಖಂಡನೀಯ. ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಹೋಗುತ್ತಿದ್ದ ರೈತರನ್ನು ಬಂಧಿಸಿದ್ದು ಸರಿಯಲ್ಲ. ಈ ಮೂಲಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಸರ್ಕಾರ ಹೊರಟಿದೆ. ಇಂತಹ ಬೆಳವಣಿಗೆ ಹೆಚ್ಚು ದಿನಗಳ ಕಾಲ ನಡೆಯುವುದಿಲ್ಲ ಎಂದು ಬಡಗಲಪುರ ನಾಗೇಂದ್ರ  ಕಿಡಿಕಾರಿದರು.

Key words: mysore- power grid – change-protest-tomorrow-Badalepura Nagendra