ಮುಂದಿನ 45 ದಿನಗಳು ನಿರ್ಣಾಯಕ : ಡಿ. 20 ರಿಂದ ಜ.2 ರವರೆಗೆ ತೀವ್ರ ಎಚ್ಚರ ವಹಿಸಿ- ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಡಿಸೆಂಬರ್ 4,2020(www.justkannada.in): ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಕೋವಿಡ್ ಎರಡನೇ ಅಲೆ ಬರುವ ಸಾಧ್ಯತೆ ಇದ್ದು, ಡಿಸೆಂಬರ್ 20 ರಿಂದ ಜನವರಿ 2 ರವರೆಗೆ 15 ದಿನಗಳ ಕಾಲ ತೀವ್ರ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಕೋವಿಡ್ 2 ನೇ ಅಲೆಗೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಚಿವ ಸುಧಾಕರ್ ವಿಧಾನಸೌಧದಲ್ಲಿ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಡಿಸೆಂಬರ್, ಜನವರಿ, ಫೆಬ್ರವರಿ ತಿಂಗಳು ಚಳಿಗಾಲದ ಅವಧಿಯಾಗಿದ್ದು, ಮುಂದಿನ 45 ದಿನ ನಿರ್ಣಾಯಕ ಹಂತವಾಗಿದೆ. ಬೇರೆ ದೇಶಗಳಲ್ಲಾಗಿರುವ ಪರಿಸ್ಥಿತಿಯನ್ನು ಅವಲೋಕಿಸಿದಾಗ 45 ರಿಂದ 90 ದಿನದೊಳಗೆ ಎರಡನೇ ಅಲೆ ಬರುತ್ತದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲೂ ಕೋವಿಡ್ 2 ನೇ ಅಲೆ ಬರುವ ಸಾಧ್ಯತೆ ಇದೆ ಎಂದು ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ್ದು, ಈ ಕುರಿತು ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಈ 15 ದಿನಗಳ ಅವಧಿಯಲ್ಲಿ ಸಭೆ, ಸಮಾರಂಭಗಳಲ್ಲಿ ತೀವ್ರ ಎಚ್ಚರಿಕೆ ವಹಿಸಬೇಕು. ಮದುವೆ ಸಮಾರಂಭಕ್ಕೆ 100, ರಾಜಕೀಯ ಹಾಗೂ ಧಾರ್ಮಿಕ ಸಮಾರಂಭಕ್ಕೆ 200, ಅಂತ್ಯಕ್ರಿಯೆಯಲ್ಲಿ 50 ಕ್ಕಿಂತ ಹೆಚ್ಚು ಜನರ ಸೇರುವಂತಿಲ್ಲ ಎಂಬ ನಿಯಮ ಜಾರಿಯಲ್ಲಿದೆ. ಈ ನಿಯಮದೊಂದಿಗೆ ಮಾಸ್ಕ್ ಧರಿಸುವ, ಭೌತಿಕ ಅಂತರ ಕಾಯ್ದುಕೊಳ್ಳುವ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮುಖ್ಯವಾಗಿ ಜನರು ಗುಂಪುಗೂಡುವುದನ್ನು ನಿಯಂತ್ರಣಕ್ಕೆ ತರಬೇಕಿದೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಹೆಚ್ಚಿನ ಚರ್ಚೆ ನಡೆಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹೊಸ ವರ್ಷಾಚರಣೆ ಅರ್ಥಹೀನ

ಹೊಸ ವರ್ಷ ಭಾರತೀಯರಿಗೆ ಹಬ್ಬವಲ್ಲ. ಜನರು ಪ್ರಾಣ ಕಳೆದುಕೊಂಡಿದ್ದಾರೆ, ಉದ್ಯೋಗ ನಷ್ಟವಾಗಿದೆ, ಆರ್ಥಿಕ ಅಸ್ಥಿರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಹೊಸ ವರ್ಷಾಚರಣೆ ಮಾಡುವುದು ಅರ್ಥಹೀನ. ಜನರು ಜವಾಬ್ದಾರಿಯುತರಾಗಿ ನಿಯಮಗಳನ್ನು ಪಾಲಿಸಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

Key words:  next 45 days – critical-cautious – Minister – Dr. K. Sudhakar.