ಕೋವಿಡ್ 2ನೇ ಅಲೆ ನಿಯಂತ್ರಿಸಲು ಪೂರ್ವಸಿದ್ಧತೆ : ಇಂದಿನಿಂದ ಕನಿಷ್ಠ 50 ದಿನಗಳ ಕಾಲ ಶ್ರಮ- ಸಚಿವ ಡಾ.ಕೆ.ಸುಧಾಕರ್…

ಬೆಂಗಳೂರು, ಮಾರ್ಚ್ 18,2021(www.justkannada.in): ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಬಗೆಯ ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಕನಿಷ್ಠ 50 ದಿನಗಳ ಕಾಲ ವೈದ್ಯ ಸಿಬ್ಬಂದಿ, ಅಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.jk

ಕೋವಿಡ್ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಈ ಸಮಯದಲ್ಲಿ ಲಸಿಕೆ ಮುಖ್ಯ. ಕೆಲ ದಿನಗಳ ಹಿಂದೆ ಒಂದೇ ದಿನ ಎರಡೂವರೆ ಲಕ್ಷ ಲಸಿಕೆ ನೀಡಲಾಗಿದೆ. ಪ್ರತಿ ದಿನ ಮೂರು ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ನಿಗದಿಪಡಿಸಲಾಗಿದೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, 45 ವರ್ಷ ಮೇಲ್ಪಟ್ಟು ಆಹಾ-ಅಸ್ವಸ್ಥತೆ ಹೊಂದಿರುವವರಿಗೆ ಲಸಿಕೆ ಹಾಕಿಸಬೇಕು. ಈ ಮೂಲಕ 2 ನೇ ಅಲೆ ತಡೆಯಬೇಕು ಎಂದರು.

ಆಂಬ್ಯುಲೆನ್ಸ್ ಕೊರತೆ ಆಗಬಾರದೆಂದು ಬೆಂಗಳೂರಿನಲ್ಲಿ 200 ಆಂಬ್ಯುಲೆನ್ಸ್ ನಿಯೋಜಿಸಲಾಗಿದೆ. ಎಲ್ಲ ಮಾಹಿತಿ ತಕ್ಷಣ ದೊರೆಯಲು ರಿಯಲ್ ಟೈಮ್ ವ್ಯವಸ್ಥೆ ಮಾಡಲಾಗುತ್ತಿದೆ. ಗೃಹ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಯ ನೇಮಕವನ್ನು ತಾತ್ಕಾಲಿಕವಾಗಿ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಇದೇ ವಾರದಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗುವುದು. ಎರಡನೇ ಅಲೆಯ ವೇಳೆ ರೋಗಿಗಳ ಸಂಖ್ಯೆ ಹೆಚ್ಚಾದರೆ ಖಾಸಗಿ ಆಸ್ಪತ್ರೆಗಳ ವ್ಯವಸ್ಥೆ ಬೇಕಾಗುತ್ತದೆ. ಯಾವುದೇ ಸಂಸ್ಥೆಯಲ್ಲಿ ಲೋಪ ಕಂಡುಬಂದರೆ ಆಯಾ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು ಎಂದರು.preparations-control-covid-minister-dr-k-sudhakar

ಮೊದಲ ಬಾರಿ ಕೊರೊನಾ ಬಂದಾಗ ಸರಿಯಾದ ಮಾಹಿತಿ, ಜ್ಞಾನ ಇರಲಿಲ್ಲ. ಅದನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತರಲಾಗಿದೆ. ಎರಡನೇ ಅಲೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗ ನಮ್ಮ ಬಳಿ ಲಸಿಕೆಯೂ ಇದೆ. ಹಾಗಾಗಿ ಹೆಚ್ಚು ಜನರು ಲಸಿಕೆ ಹಾಕಿಸಿಕೊಳ್ಳಬೇಕು ಹಾಗೂ ತಪ್ಪದೇ ಸುರಕ್ಷತಾ ಕ್ರಮ ಪಾಲಿಸಬೇಕು ಎಂದು ಸಚಿವ ಸುಧಾಕರ್ ತಿಳಿಸಿದರು.

ಕೋವಿಡ್ ಕೇರ್ ಸೆಂಟರ್

ಬೆಂಗಳೂರಿನಲ್ಲಿ ಒಟ್ಟು 1,000 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ನಿರ್ಮಿಸಿದ್ದು, ಸೋಮವಾರದಿಂದ ಕಾರ್ಯನಿರ್ವಹಿಸಲಿದೆ. ಕೋವಿಡ್ ಲಸಿಕೆ ವ್ಯರ್ಥವಾಗುವುದಕ್ಕೆ ಸಂಬಂಧಿಸಿದಂತೆ ಸರಿಯಾದ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ. ಪ್ರತಿ ದಿನ ವರದಿ ನೀಡಲು ಸೂಚಿಸಲಾಗಿದೆ  ಎಂದು ಸಚಿವ ಸುಧಾಕರ್ ತಿಳಿಸಿದರು.

Key words: Preparations – control –covid-Minister- Dr. K. Sudhakar.