ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ಸಿದ್ಧತೆ; ಶಾಂತಿಯುತ ನಡವಳಿಕೆಗೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು, ಅಕ್ಟೋಬರ್,30,2021(www.justkannada.in): ನಟ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಿರುವ ನಗರದ ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರ ಇಂದು ಅವರ ಮಗಳು ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಕುಟುಂಬದವರು ಮತ್ತು ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಇದನ್ನು ಸುಗಮವಾಗಿ ನಡೆಸಲು ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿಯವರು ಕ್ರಮ ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಪುನೀತ್ ರಾಜ್‌ ಕುಮಾರ್ ಜನಪ್ರಿಯ ನಟ. ಅವರ ಅಗಲಿಕೆ ನಮಗೆಲ್ಲರಿಗೂ ದುಃಖ ತಂದಿದೆ. ಅವರನ್ನು ಗೌರವದಿಂದ ಶಾಂತಿಯುತವಾಗಿ ನಾವು ಬೀಳ್ಕೊಡಬೇಕು. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ  ಮನವಿ ಮಾಡಿದರು.

ಈ ಸಮಯ ಈ ಸಂದರ್ಭದಲ್ಲಿ ನಾವು ಸಂಯಮ, ಜವಾಬ್ದಾರಿಯಿಂದ ವರ್ತಿಸಬೇಕಾಗಿದೆ. ಜನರು ಈವರೆಗೆ ಅತ್ಯುತ್ತಮವಾಗಿ ಸಹಕರಿಸಿದ್ದಾರೆ. ನಮ್ಮ ಜವಾಬ್ದಾರಿಯುತ ನಡವಳಿಕೆ ಡಾ. ರಾಜ್ ಕುಮಾರ್ ಹಾಗೂ ಪುನೀತ್ ಅವರಿಗೆ ಗೌರವ ಸಲ್ಲಿಸಿದಂತೆ. ಶಾಂತಿ, ಸ್ನೇಹದಿಂದ ಇರುವುದು ಕನ್ನಡಿಗರ ಸಂಸ್ಕೃತಿ. ಇದನ್ನು ನಾವು ಇಂದು ಮೆರೆಯಬೇಕಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Key words: Puneet Raj Kumar -preparing –funeral- CM-basavaraj Bommai- appeals-peaceful -behavior