ರಾಜ್ಯಗಳಿಗೆ ಒಬಿಸಿ ಪಟ್ಟಿ ಅಧಿಕಾರ ಮರುಸ್ಥಾಪನೆ: ಸಚಿವ ಬಿ.ಶ್ರೀರಾಮುಲು ಧನ್ಯವಾದ.

ಬೆಂಗಳೂರು,ಆಗಸ್ಟ್,11,2021(www.justkannada.in):  ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನದ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಸರಕಾರವು ಅಂಗೀಕರಿಸಿದ್ದು ಸ್ವಾಗತಾರ್ಹ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮವಾಗಿದ್ದು, ಇದಕ್ಕಾಗಿ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಧನ್ಯವಾದ ಸಮರ್ಪಿಸುವುದಾಗಿ ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಅವರು ತಿಳಿಸಿದರು.

ಕಾರ್ಯಕರ್ತರ ಭೇಟಿ, ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ಕೊಡುವ ದೃಷ್ಟಿಯಿಂದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು ಭೇಟಿ ನೀಡಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ನಿಗದಿತ ದಿನದಂದು ರಾಜ್ಯ ಕಾರ್ಯಾಲಯಕ್ಕೆ ಭೇಟಿ ಕೊಡಲಿದ್ದೇನೆ ಎಂದು ಸಚಿವ ಶ್ರೀರಾಮುಲು ಹೇಳಿದರು.

ಮೀಸಲಾತಿ ಮುಂದುವರಿಕೆ ಅಗತ್ಯದ ಕುರಿತಂತೆ ಆರ್ ಎಸ್ ಎಸ್ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸ್ವಾಗತಾರ್ಹ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರಗಳು ಮತ್ತು ಆರ್ ಎಸ್ ಎಸ್ ಸಂಘಟನೆ ನಿರಂತರವಾಗಿ ದಲಿತರ ಪರವಾಗಿ ಕೆಲಸ ಮಾಡುತ್ತಿವೆ. ಆದರೆ, ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಕಾಂಗ್ರೆಸ್ ಮುಖಂಡರು ಬಿಜೆಪಿ ಹಾಗೂ ಆರ್ ಎಸ್ ಎಸ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದವು. ಈಗ ಈ ಸತ್ಯ ಜನರಿಗೂ ಅರಿವಾಗಿದೆ ಎಂದು ತಿಳಿಸಿದರು.

ಈಗ ದಲಿತರು, ಶೋಷಿತರು ಮತ್ತು ಹಿಂದುಳಿದ ವರ್ಗದವರು ಕಾಂಗ್ರೆಸ್‍ ನ ಪೊಳ್ಳು ಭರವಸೆಯನ್ನು ಅರ್ಥೈಸಿಕೊಂಡಿದ್ದಾರೆ. ಇನ್ನೊಂದೆಡೆ  ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಕಾರ್ಯವೈಖರಿ, ದಲಿತರ ಪರ ಕಾರ್ಯಗಳನ್ನು ಗಮನಿಸಿ ಬಿಜೆಪಿಗೆ ಪೂರ್ಣ ಪ್ರಮಾಣದಿಂದ ಬೆಂಬಲ ನೀಡುತ್ತಿದ್ದಾರೆ. ಇದರಿಂದ ಎಲ್ಲ ಕಡೆಗಳಲ್ಲಿ ಬಿಜೆಪಿ ಗೆಲ್ಲುತ್ತಿದೆ ಹಾಗೂ ಕಾಂಗ್ರೆಸ್ ಪಕ್ಷ ಸೋಲುತ್ತಿದೆ ಎಂದು ತಿಳಿಸಿದರು.

ಕೇಂದ್ರದ ಸಚಿವ ಸಂಪುಟ, ರಾಜ್ಯಪಾಲರ ನೇಮಕಾತಿ ವಿಚಾರದಲ್ಲೂ ಕೇಂದ್ರ ಸರಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರಿಗೆ ಗರಿಷ್ಠ ಆದ್ಯತೆ ನೀಡಿದೆ. ಇದು ಕೇಂದ್ರದ  ನರೇಂದ್ರ ಮೋದಿ ಅವರ ಬಿಜೆಪಿ ಸರಕಾರದ ದಲಿತ- ಹಿಂದುಳಿದ ಪರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುವಂತಿದೆ ಎಂದು ಅವರು ಮೆಚ್ಚುಗೆ ಸೂಚಿಸಿದರು.

Key words: Restoring –OBC- List -Authorization – States-Minister -B. Sriramulu- Thanks