ಎಸಿಬಿ ವಿಚಾರದಲ್ಲಿ ಕೋರ್ಟ್‌ ನಲ್ಲಿ ಒಂದು, ಹೊರಗಡೆ ಒಂದು ಭಿನ್ನ ನಿಲುವು ಯಾಕೆ? ಸರ್ಕಾರಕ್ಕೆ ಸಿದ್ಧರಾಮಯ್ಯ ಚಾಟಿ.

ಬೆಂಗಳೂರು,ಫೆಬ್ರವರಿ,21,2023(www.justkannada.in): ಎಸಿಬಿ ರಚನೆ ಮಾಡಿ ಲೋಕಾಯುಕ್ತದ ಅಧಿಕಾರ ಕಸಿಯಲಾಗಿದೆ ಎಂದು ಹೇಳುವುದು ಸರಿಯಲ್ಲ, ಅಡ್ವೊಕೇಟ್‌ ಜನರಲ್‌ ಅವರು ಎಸಿಬಿ ರಚನೆ ಮಾಡಿರುವುದು ಸರಿ ಎಂದು ಕೋರ್ಟ್‌ ನಲ್ಲಿ ಹೇಳಿದ್ದಾರೆ, ಇದಕ್ಕೆ ವಿರುದ್ಧವಾಗಿ ಸರಕಾರ ಯಾಕೆ ಹೇಳಿಕೆ ಕೊಡಬೇಕು? ಕೋರ್ಟ್‌ ನಲ್ಲಿ ಒಂದು ಹೊರಗಡೆ ಒಂದು ಭಿನ್ನ ನಿಲುವು ಯಾಕೆ? ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಚಾಟಿ ಬೀಸಿದರು.

ರಾಜ್ಯ ಬಿಜೆಪಿ ಸರ್ಕಾರದ ಬಜೆಟ್‌ ಕುರಿತು  ಇಂದಿನ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಿಷ್ಟು…

ಎಸಿಬಿ ಕರ್ನಾಟಕದಲ್ಲಿ ಮಾತ್ರವಲ್ಲ, ದೇಶದ ಒಟ್ಟು 16 ರಾಜ್ಯಗಳಲ್ಲಿ ಇದೆ. ಸಿದ್ದರಾಮಯ್ಯ ಅವರು ತಮ್ಮ ಮೇಲಿನ ಆರೋಪಗಳಿಂದ ರಕ್ಷಣೆ ಪಡೆಯಲು ಉದ್ದೇಶಪೂರ್ವಕವಾಗಿ ಎಸಿಬಿ ರಚನೆ ಮಾಡಿ ಲೋಕಾಯುಕ್ತದ ಅಧಿಕಾರವನ್ನು ಕಿತ್ತುಕೊಂಡರು ಎಂದು ಜನರಿಗೆ ತಪ್ಪು ಮಾಹಿತಿ ನೀಡುವುದು ಯಾಕೆ? ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಯಾಕೆ ಇನ್ನು ಎಸಿಬಿಯನ್ನು ರದ್ದು ಮಾಡಿಲ್ಲ? ನನ್ನ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ್ದ ಅನೇಕ ದೂರುಗಳು ಆಧಾರ ರಹಿತವಾದವು ಎಂದು ಲೋಕಾಯುಕ್ತದವರೇ ರದ್ದು ಮಾಡಿದ್ದಾರೆ ಎಂದರು.

ರಾಜ್ಯ ಸರ್ಕಾರದ ವಿರುದ್ಧ ಅನೇಕ ಆರೋಪಗಳು ಬಂದ ಹೊರತಾಗಿಯೂ ಸರ್ಕಾರ ಯಾವುದೇ ತನಿಖೆ ಮಾಡಿಸಲಿಲ್ಲ. ಸರ್ಕಾರ ಈಗಲಾದರೂ ಸುಪ್ರೀಂ ಕೋರ್ಟ್‌ ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಒಂದು ತನಿಖಾ ಸಮಿತಿ ರಚನೆ ಮಾಡಿ ನಮ್ಮ ವಿರುದ್ಧ ಮತ್ತು ಈಗಿನ ಸರ್ಕಾರದ ವಿರುದ್ಧ ಇರುವ ಎಲ್ಲಾ ಆರೋಪಗಳನ್ನು ತನಿಖೆ ಮಾಡಿಸಲಿ. ಸುಮ್ಮನೆ ಆರೋಪ ಮಾಡುವುದರಿಂದ ಸತ್ಯ ಹೊರಬರುವುದಿಲ್ಲ ಎಂದು ಕಿಡಿಕಾರಿದರು.

ಧಮ್‌, ತಾಕತ್ ಇದ್ದರೆ ಹೊಡೆದುಹಾಕಲಿ ನೋಡೋಣ. ..

ಅಬ್ಬಕ್ಕ ವರ್ಸಸ್‌ ಟಿಪ್ಪು ಸುಲ್ತಾನ್‌, ಗಾಂಧಿ ವರ್ಸಸ್‌ ಗೋಡ್ಸೆ ಇಂಥ ಭಾವನಾತ್ಮಕ ವಿಚಾರಗಳನ್ನು ಬಿಟ್ಟುಬಿಡಿ, ಅಭಿವೃದ್ಧಿ ವಿಚಾರಗಳ ಮೇಲೆ ಚರ್ಚೆ ಮಾಡೋಣ ಬನ್ನಿ ಎಂದು ಆಹ್ವಾನ ನೀಡಿದ ಸಿದ್ಧರಾಮಯ್ಯ, ಸಾರ್ವಜನಿಕವಾಗಿ ಅಭಿವೃದ್ಧಿ ವಿಷಯ ಚರ್ಚೆಯಾಗಲಿ. ಸಚಿವರೊಬ್ಬರು ಟಿಪ್ಪು ಸುಲ್ತಾನ್ ನನ್ನು ಮೇಲೆ ಕಳಿಸಿದಂತೆ ಸಿದ್ದರಾಮಯ್ಯ ಅವರನ್ನು ಮೇಲೆ ಕಳಿಸಿ ಎಂದಿದ್ದಾರೆ. ಕೊಲೆ ಮಾಡು ಎಂದು ಯಾವುದಾದರೂ ಧರ್ಮ ಹೇಳುತ್ತದಾ? ಟಿಪ್ಪು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಿ ಎಂದರೆ ಇದು ಅವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಇಂಥಾ ಬೆದರಿಕೆಗಳಿಗೆ ಹೆದರಿಕೊಂಡು ನನ್ನ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳುವವನು ನಾನಲ್ಲ. ನಾನು ನನ್ನ ಜೀವನದ ಕೊನೆಯವರೆಗೆ ಸಮಾಜದ ದುರ್ಬಲರು, ಅವಕಾಶ ವಂಚಿತರು, ಬಡವರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ಸಮುದಾಯದ ಜನರ ಪರವಾಗಿಯೇ ಇರುತ್ತೇನೆ. ಧಮ್‌, ತಾಕತ್ ಇದ್ದರೆ ಹೊಡೆದುಹಾಕಲಿ ನೋಡೋಣ ಎಂದು ಸಿದ್ಧರಾಮಯ್ಯ ಗುಡುಗಿದರು.

ಹಣಕಾಸಿನ ಪರಿಸ್ಥಿತಿ ಬಹಳಾ ಸದೃಢವಾಗಿದೆ ಎಂದು ಬಜೆಟ್‌ ನಲ್ಲಿ ಹೇಳಿದ್ದಾರೆ. ಆದರೆ ಇನ್ನೊಂದು ಕಡೆ ಆರ್ಥಿಕ ಇಲಾಖೆಯವರು, ನಾವು ಈಗಾಗಲೇ ವಿತ್ತೀಯ ಕೊರತೆ ಎದುರಿಸುತ್ತಿದ್ದೇವೆ, ಆ ಕಾರಣದಿಂದ ಗ್ರಾಂಟ್‌ ಇನ್‌ ಏಡ್‌ ಗೆ ಸೇರಿಸೋಕೆ ಆಗಲ್ಲ, ಹಣಕಾಸಿನ ಪರಿಸ್ಥಿತಿ ಬಹಳ ಕೆಟ್ಟು ಹೋಗಿದೆ ಎಂದು ಫೈಲ್‌ ಮೇಲೆ ಬರೆದ್ದಿದ್ದಾರೆ. ಕೊರೊನಾ, ಪ್ರವಾಹ ಬಂದ ಕಾರಣಕ್ಕೆ ನಮ್ಮ ಆರ್ಥಿಕ ಪರಿಸ್ಥಿತಿ ಹಾಳಾಗಿದೆ ಎಂದು ಕಾರಣ ಕೊಟ್ಟಿದ್ದಾರೆ. ಇಡೀ ಕೊರೊನಾ ನಿರ್ವಹಣೆಗೆ ಖರ್ಚು ಮಾಡಿರುವುದು 15 ರಿಂದ 16 ಸಾವಿರ ಕೋಟಿ ರೂ. ಪ್ರವಾಹಕ್ಕೆ ಖರ್ಚು ಮಾಡಿರುವುದು 6000 ಕೋಟಿ. ಪ್ರವಾಹದಿಂದ ಒಂದು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ, ಸುಮಾರು 3 ಲಕ್ಷ ಮನೆಗಳು ಹಾನಿಗೊಳಗಾಗಿತ್ತು, ಇದಕ್ಕೆ ಒಂದು ಕಂತು ಪರಿಹಾರ ಕೊಟ್ಟರು, ನಂತರದ ಕಂತು ಕೊಟ್ಟೆ ಇಲ್ಲ. 2022ರಲ್ಲಿ ಪ್ರವಾಹ ಬಂದಾಗ 1944 ಕೋಟಿ ಪರಿಹಾರ ಕೇಳಿ ಕೇಂದ್ರ ಸರ್ಕಾರಕ್ಕೆ ಮನವಿ ಕೊಟ್ಟಿದ್ದಾರೆ, ಇವತ್ತಿನವರೆಗೆ ಒಂದು ರೂಪಾಯಿ ಪರಿಹಾರ ಬಂದಿಲ್ಲ. ಈ ಸರ್ಕಾರವನ್ನು ಅತ್ಯಂತ ದುರ್ಬಲ ಸರ್ಕಾರ ಎನ್ನದೆ ಏನನ್ನಬೇಕು? ಎಂದು ಸಿದ್ಧರಾಮಯ್ಯ ಟೀಕಿಸಿದರು.

ಮೋದಿ ಮೋದಿ ಎಂದು ಕೂಗುವುದು, ಮೇಜು ತಟ್ಟುವುದು ಮಾತ್ರ ಅವರು ಮಾಡುತ್ತಿರುವ ಕೆಲಸ.

15ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5495 ಕೋಟಿ ವಿಶೇಷ ಅನುದಾನ ಶಿಫಾರಸು ಮಾಡಲಾಗಿತ್ತು, ರಾಜ್ಯದಿಂದ ಆಯ್ಕೆಯಾಗಿ ಕೇಂದ್ರ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್‌ ಅವರು ಇದನ್ನು ತಿರಸ್ಕಾರ ಮಾಡಿದರು. ರಾಜ್ಯದಿಂದ ಆಯ್ಕೆಯಾಗಿರುವ 25 ಜನ ಸಂಸದರು ಈ ಬಗ್ಗೆ ಒಂದು ದಿನ ಮಾತನಾಡಿಲ್ಲ, ಒತ್ತಡ ಹಾಕಿಲ್ಲ. ಸದನದಲ್ಲಿ ಮೋದಿ ಮೋದಿ ಎಂದು ಕೂಗುವುದು, ಮೇಜು ತಟ್ಟುವುದು ಮಾತ್ರ ಅವರು ಮಾಡುತ್ತಿರುವ ಕೆಲಸ ಎಂದು ಸಿದ್ಧರಾಮಯ್ಯ ವ್ಯಂಗ್ಯವಾಡಿದರು.

ನಾನು ಮುಖ್ಯಮಂತ್ರಿಯಾಗಿ ಮಂಡಿಸಿರುವ 6 ಬಜೆಟ್‌ ಗಳು ಪಾರದರ್ಶಕತೆ ಮತ್ತು ಉತ್ತರದಾಯಿತ್ವದಿಂದ ಕೂಡಿತ್ತು. ನಮ್ಮ ಸರ್ಕಾರದ ಕೊನೆಯ ಬಜೆಟ್‌ ನಲ್ಲಿ ನಾವು 5 ವರ್ಷಗಳಲ್ಲಿ ಏನು ಕೆಲಸ ಮಾಡಿದ್ದೇವೆ, ಯಾವೆಲ್ಲ ಭರವಸೆ ನೀಡಿದ್ದೆವು, ಎಷ್ಟು ಈಡೇರಿಸಿದ್ದೇವೆ, ಮುಂದೆ ಅಧಿಕಾರಕ್ಕೆ ಬಂದರೆ ಏನೆಲ್ಲ ಮಾಡುತ್ತೇವೆ ಎಂದು ಹೇಳಿದ್ದೆ. ಈ ಬಜೆಟ್‌ ನಲ್ಲಿ ಇಂಥಾ ಪಾರದರ್ಶಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿರುವಾಗ ಅನ್ನಭಾಗ್ಯ ಯೋಜನೆಯಡಿ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆ, ಈ ಸರಕಾರ ಅದನ್ನು 5 ಕೆ.ಜಿ ಗೆ ಇಳಿಸಿತು, ಯಾಕೆ ಎಂದು ಪ್ರಶ್ನೆ ಮಾಡಿದರೆ ದುಡ್ಡಿಲ್ಲ ಎಂದರು. ಈ ಅನ್ನಭಾಗ್ಯ ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದರೆ ಗುಜರಾತ್‌, ಮಧ್ಯಪ್ರದೇಶ, ಅಸ್ಸಾಂನಲ್ಲಿ ಯಾಕಿಲ್ಲ? 3 ರೂ. ಗೆ ಅಕ್ಕಿ ನೀಡುವಂತೆ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿದ್ದು ಮನಮೋಹನ್‌ ಸಿಂಗ್‌ ಅವರ ಸರ್ಕಾರ. ಮೋದಿ ಅಥವಾ ವಾಜಪೇಯಿ ಅವರಲ್ಲ.

ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ 15 ಲಕ್ಷದ 54 ಸಾವಿರ ಮನೆಗಳನ್ನು ನಿರ್ಮಾಣ ಮಾಡಿ, ಅನುದಾನ ನೀಡಿದ್ದೆವು. ನಮ್ಮ ಸರ್ಕಾರದ ಕೊನೆಯ ಬಜೆಟ್‌ ನಲ್ಲಿ 15 ಲಕ್ಷ ಮನೆಗಳ ಘೋಷಣೆ ಮಾಡಿ, ದುಡ್ಡು ಕೊಟ್ಟಿಲ್ಲ ಎಂದು ಸುಳ್ಳು ಹೇಳುವುದು ಯಾಕೆ? ಈ ಸರ್ಕಾರ 4 ಲಕ್ಷದ 93 ಸಾವಿರ ಮನೆಗಳನ್ನು ಕಟ್ಟಿದ್ದರೆ ಅದು ನಮ್ಮ ಸರ್ಕಾರ ಮಂಜೂರು ಮಾಡಿದ ಮನೆಗಳು. ಈ ಸರ್ಕಾರ ಹೊಸದಾಗಿ ಮನೆಗಳನ್ನು ಮಂಜೂರು ಮಾಡಿಲ್ಲ. ಬೆಂಗಳೂರು ನಗರದಲ್ಲಿ ಒಂದು ಲಕ್ಷ ಮನೆಗಳನ್ನು ಕಟ್ಟಲು ಈ ಸರ್ಕಾರದಿಂದ ಆಗಿಲ್ಲ ಎಂದು ಕಿಡಿಕಾರಿದರು.

ಇದು ತೆರಿಗೆ ಸುಲಿಗೆಯ ಕತ್ತಲ ಕಾಲದ ಬಜೆಟ್‌.

ಸುನಿಲ್‌ ಕುಮಾರ್‌ ಅವರು ಈ ಬಜೆಟ್‌ ಅನ್ನು ತೆರಿಗೆ ಸಂಗ್ರಹದ ಅಮೃತ ಕಾಲದ ಬಜೆಟ್‌ ಎಂದು ಕರೆದಿದ್ದಾರೆ. ನನ್ನ ಪ್ರಕಾರ ಇದು ತೆರಿಗೆ ಸುಲಿಗೆಯ ಕತ್ತಲ ಕಾಲದ ಬಜೆಟ್‌. ಈ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಮೇಲೆ ಸೆಸ್‌ ಜಾಸ್ತಿಮಾಡಿದೆ. ಅಕ್ಕಿ, ರಾಗಿ, ಗೋಧಿ, ಪೆನ್ನು, ಪೆನ್ಸಿಲ್‌, ಮಂಡಕ್ಕಿ, ಹಾಲು, ಮೊಸರು, ಹಸುಗಳು ತಿನ್ನುವ ಹಿಂಡಿ, ಬೂಸಾಗಳ ಮೇಲೆ 5 ರಿಂದ 18% ತೆರಿಗೆ ವಿಧಿಸಿದ್ದಾರೆ. 80% ತೆರಿಗೆಯನ್ನು ರಾಜ್ಯದ ಬಡವರು, ಕಾರ್ಮಿಕರು ಕಟ್ಟುತ್ತಿದ್ದಾರೆ.

ಬೆಲೆಯೇರಿಕೆ, ಕೆಟ್ಟ ಕೃಷಿ ನೀತಿಯಿಂದಾಗಿ ರಾಜ್ಯದ ರೈತರನ್ನು ಸಾಲಗಾರನನ್ನಾಗಿ ಮಾಡಿದೆ. ಸ್ವಾತಂತ್ರ್ಯ ಬಂದ ನಂತರದಿಂದ ನಾನು ಅಧಿಕಾರದಿಂದ ಇಳಿಯುವವರೆಗೆ ರಾಜ್ಯದ ಮೇಲಿದ್ದ ಒಟ್ಟು ಸಾಲ 2 ಲಕ್ಷದ 42 ಸಾವಿರ ಕೋಟಿ. ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ ಮಾಡಿದ್ದ ಒಟ್ಟು ಸಾಲ 1 ಲಕ್ಷದ 16 ಸಾವಿರ ಕೋಟಿ. ನಾನು ಮುಖ್ಯಮಂತ್ರಿಯಾಗಿರುವಾಗ ಸಿದ್ದರಾಮಯ್ಯ ಸರ್ಕಾರ ಬಹಳಾ ಸಾಲ ಮಾಡಿದೆ, ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ ಎಂದು ಹೇಳುತ್ತಿದ್ದರು. ಈಗ ಬಿಜೆಪಿ ಸರ್ಕಾರ ಮಾಡುತ್ತಿರುವುದು ಏನು? ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಅವರು 41,916 ಕೋಟಿ ಸಾಲ ಮಾಡಿದ್ದರು. ಇದನ್ನು ಬಿಟ್ಟರೆ ಉಳಿದ 4 ವರ್ಷಗಳಲ್ಲಿ ಬಿಜೆಪಿ ಮಾಡಿರುವ ಸಾಲ 2 ಲಕ್ಷದ 54 ಸಾವಿರ ಕೋಟಿ. ಮುಂದಿನ ವರ್ಷ 77,750 ಕೋಟಿ ರೂ. ಸಾಲ ಮಾಡುವುದಾಗಿ ಸರ್ಕಾರ ಹೇಳಿದೆ. ಇದು ಸೇರಿ 3 ಲಕ್ಷದ 32 ಸಾವಿರ ಕೋಟಿ ಸಾಲ ಆಗುತ್ತದೆ. 2024ರ ಅಂತ್ಯಕ್ಕೆ 5 ಲಕ್ಷದ 64 ಸಾವಿರ ಕೋಟಿ ರೂ. ಸಾಲ ಆಗುತ್ತದೆ ಎಂದು ಮುಖ್ಯಮಂತ್ರಿಗಳು ಬಜೆಟ್‌ ನಲ್ಲಿ ಹೇಳಿದ್ದಾರೆ.

ಬಡ್ಡಿ ರೂಪದಲ್ಲಿ 34,000 ಕೋಟಿ ಹಾಗೂ ಅಸಲು 22 ಸಾವಿರ ಕೋಟಿ ಕಟ್ಟಬೇಕು ಅಂದರೆ ವರ್ಷಕ್ಕೆ 56 ಸಾವಿರ ಕೋಟಿಯಷ್ಟು ಸಾಲ ಮರುಪಾವತಿ ಮಾಡಬೇಕು. ಇದು ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗದ, ಲಾಭದಾಯಕವಲ್ಲದ ಖರ್ಚು. ಇದರಿಂದ ಅಭಿವೃದ್ಧಿ ಯೋಜನೆಗಳಿಗೆ ಹಣ ಸಿಗುತ್ತಿಲ್ಲ. ದೀಪೆಂದ್ರ ಸಿಂಗ್‌ ಹೂಡ ಎನ್ನುವವರು ಕೇಳಿದ ಪ್ರಶ್ನೆಗೆ ಪಂಕಜ್‌ ಚೌದರಿ ಎಂಬ ರಾಜ್ಯ ಖಾತೆಯ ಕೇಂದ್ರ ಹಣಕಾಸು ಸಚಿವರು ನೀಡಿದ ಉತ್ತರದಲ್ಲಿ 2018ರಲ್ಲಿ 2 ಲಕ್ಷದ 45 ಸಾವಿರ ಕೋಟಿ ಕರ್ನಾಟಕದ ಮೇಲೆ ಸಾಲ ಇತ್ತು, 2019 ರಲ್ಲಿ 2 ಲಕ್ಷದ 86 ಸಾವಿರ ಕೋಟಿ, 2020ರಲ್ಲಿ 3 ಲಕ್ಷದ 38 ಸಾವಿರ ಕೋಟಿ, 2021ರಲ್ಲಿ 4 ಲಕ್ಷದ 21 ಸಾವಿರ ಕೋಟಿ, 2022ರ ಮಾರ್ಚ್‌ ನಲ್ಲಿ 4 ಲಕ್ಷದ 73 ಸಾವಿರ ಕೋಟಿ ಸಾಲ ಇತ್ತು, 2023ರ ಮಾರ್ಚ್‌ ಗೆ 5 ಲಕ್ಷದ 40 ಸಾವಿರ ಕೋಟಿ, 2024ರ ಮಾರ್ಚ್‌ ಗೆ 6 ಲಕ್ಷದ 18 ಸಾವಿರ ಕೋಟಿ ಒಟ್ಟು ಸಾಲ ಆಗಲಿದೆ ಎಂದು ಹೇಳಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ಲೆಕ್ಕದ ವ್ಯತ್ಯಾಸ 53,472 ಕೋಟಿ ರೂ. ಇದೆ. ಹಾಗಾದರೆ ಈ ವ್ಯತ್ಯಾಸ ಸೃಷ್ಟಿ ಮಾಡಿರುವುದು ಯಾರು? ನನ್ನ ಪ್ರಕಾರ ರಾಜ್ಯ ಸರ್ಕಾರ ಸಾಲ ಕಡಿಮೆ ಇದೆ ಎಂದು ತೋರಿಸಲು ಸುಳ್ಳು ಲೆಕ್ಕ ನೀಡಿದಂತಿದೆ ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.

Key words: session-former CM-Siddaramaiah –Critisize- government.