ಜನ ಕಾಂಗ್ರೆಸ್‌ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್…

ಬೆಂಗಳೂರು,ಮೇ,20,2021(www.justkannada.in): ಕಾಂಗ್ರೆಸ್‌ ನ ಅಪಪ್ರಚಾರದಿಂದ ಜನ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ ಎಂದು ನಾನು ಹೇಳಿಲ್ಲ. ಲಸಿಕೆಗಾಗಿ ಜನರು ಸಿದ್ದರಾಗಿಯೇ ಇದ್ದಾರೆ. ಕಾಂಗ್ರೆಸ್‌ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ. ಜನ ಕಾಂಗ್ರೆಸ್‌ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕುಟುಕಿದ್ದಾರೆ.jk

ಲಸಿಕೆ ವಿಚಾರ ಕುರಿತು ಕಾಂಗ್ರೆಸ್ ಗೆ ಟ್ವಿಟ್ಟರ್ ನಲ್ಲಿ ಟಾಂಗ್ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‌ನ ಜಾಡ್ಯ. ಈ ಅಂಟುರೋಗಕ್ಕೆ ಒಳಗಾದವರು ಸಿದ್ದರಾಮಯ್ಯ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್‌ನ ಆತ್ಮವಂಚನೆ ನೆನಪಿಸಿದ್ದಕ್ಕೆ ಸಿದ್ದರಾಮಯ್ಯ ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದಾರೆ. ಅವರ ಪ್ರತಿ ಎಸೆತಕ್ಕೆ ಸಿಕ್ಸರ್‌ ಕೊಡಬೇಕೆನಿಸಿದೆ!

ಕೋವಿಡ್‌ ಲಸಿಕೆ ವಿಚಾರದಲ್ಲಿನ ಕಾಂಗ್ರೆಸ್‌ ನ ಆತ್ಮವಂಚನೆಯನ್ನು ಪ್ರಸ್ತಾಪಿಸಿದ್ದಕ್ಕೆ ನಾನು ಸ್ವಯಂ ಗೋಲು ಹೊಡೆದುಕೊಂಡಿರುವುದಾಗಿ ನೀವು ಹೇಳಿದ್ದೀರಿ. ಸಿದ್ದರಾಮಯ್ಯನವರೇ ಲಸಿಕೆ ವಿಚಾರದಲ್ಲಿ ರಾಷ್ಟ್ರದ ಎದುರು ಬೆತ್ತಲಾಗಿ, ನಿಂತಿರುವುದು ಕಾಂಗ್ರೆಸ್‌. ಈ ವಿಚಾರದಲ್ಲಿ ನನ್ನನ್ನು ಟೀಕಿಸಲು ಬಂದು ನೀವು ಹಿಟ್‌ ವಿಕೆಟ್‌ ಆಗಿದ್ದೀರಿ ಎಂದು ಕಿಡಿಕಾರಿದ್ದಾರೆ.

ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ. ಇದನ್ನೇ ಅಲ್ಲವೇ ನಾನು ಹೇಳಿದ್ದು? ಎಂದು ಸಿದ್ಧರಾಮಯ್ಯಗೆ ಪ್ರಶ್ನಿಸಿರುವ ಹೆಚ್.ಡಿಕೆ, ಕಾಂಗ್ರೆಸ್‌ನ ಲಸಿಕೆ ರಾಜಕಾರಣವನ್ನು ನಾನು ವಿವರಿಸಿದ್ದೇನೆ. ಕಾಂಗ್ರೆಸ್‌ನ ಅಪಪ್ರಚಾರದಿಂದ ಜನ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ ಎಂದು ನಾನು ಹೇಳಿಲ್ಲ. ಲಸಿಕೆಗಾಗಿ ಜನರು ಸಿದ್ದರಾಗಿಯೇ ಇದ್ದಾರೆ. ಕಾಂಗ್ರೆಸ್‌ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ. ಜನ ಕಾಂಗ್ರೆಸ್‌ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಮಾತನ್ನು 50 ವರ್ಷದಿಂದಲೂ ಕೇಳದ ಕುಟುಂಬ ನಮ್ಮದು!

ಲಸಿಕೆಯೊಂದು ಸಿಕ್ಕಾಗ ಅದನ್ನು ಮೊದಲಿಗೆ ಮುಂಚೂಣಿ ಹೋರಾಟಗಾರರಿಗೆ ನೀಡಲಾಗುತ್ತದೆ. ಇದು ನಿಮಗೆ ತಿಳಿದಿರಲಿ. ದೇಶದಲ್ಲಿ ಮೊದಲು ಕೋವಿಡ್‌ ವಾರಿಯರ್‌ಗಳಿಗೆ ಲಸಿಕೆ ನೀಡಲಾಯಿತು. ನನ್ನ ಸರದಿ ಬಂದಾಗ ನಾನು ಲಸಿಕೆ ಪಡೆದೆ. ಇಲ್ಲಿ ಕಾಂಗ್ರೆಸ್‌ ಮಾತು ನಂಬಿ ಕೂರುವಂಥದ್ದೇನಿತ್ತು. ಕಾಂಗ್ರೆಸ್‌ ಮಾತನ್ನು 50 ವರ್ಷದಿಂದಲೂ ಕೇಳದ ಕುಟುಂಬ ನಮ್ಮದು!

ದೇಶದಲ್ಲಿ ಸರ್ವರಿಗೂ ಉಚಿತ ಲಸಿಕೆ ಹಾಕುವಂತೆ ಸೋನಿಯಾ ಗಾಂಧಿ ಅವರ ಜೊತೆಗೂಡಿ ಎಚ್‌.ಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯನವರೇ, ದೇಶದ ಹಲವು ವಿರೋಧಪಕ್ಷಗಳ ನಾಯಕರ ಜೊತೆಗೂಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರೇ ಹೊರತು, ಸೋನಿಯಾ ಗಾಂಧಿ ಅವರ ಜೊತೆಗೂಡಿ ಪತ್ರ ಬರೆಯಲಿಲ್ಲ ನೆನಪಿರಲಿ.

ಅಷ್ಟಕ್ಕೂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡುವಂತೆ ದೇವೇಗೌಡರಿಗೆ ಯಾರೆಲ್ಲ ವಿನಂತಿಸಿದ್ದರು, ಎಷ್ಟು ಬೇಡಾಡಿದರು ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆಯೇ? ದೆಹಲಿಗೆ ಹೋಗಿ ಈ ವಿಚಾರವಾಗಿ ಸಿದ್ದರಾಮಯ್ಯನವರು ಮಾಹಿತಿ ಪಡೆದು ಬರಲಿ. ಮಾಹಿತಿ ಇಲ್ಲದೇ ಮಾತಾಡುವುದು ಸಿದ್ದರಾಮಯ್ಯನವರಿಗಿರುವ ದೊಡ್ಡ ಸಮಸ್ಯೆ ಎಂದು ಹೆಚ್ಡಿಕೆ ವ್ಯಂಗ್ಯವಾಡಿದ್ದಾರೆ.siddaramaiah-does-not-want-people-congress-former-cm-hd-kumaraswamy-tong

ಅಸಮರ್ಪಕ ಲಸಿಕೆ ಅಭಿಯಾನ ವಿರುದ್ಧ ನಮ್ಮದೂ ಆಕ್ಷೇಪಣೆಗಳಿವೆ. ಆದರೆ, ಲಸಿಕೆ ವಿರುದ್ಧ ನಮ್ಮ ನಿಲುವು ಇಲ್ಲ. ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯಬೇಕೆಂದು ಒತ್ತಾಯಿಸಿ ನಾನು ಸರ್ಕಾರಗಳಿಗೆ ಹಲವು ಸಲಹೆ ನೀಡಿದ್ದೇನೆ. ಆದರೆ, ಕಾಂಗ್ರೆಸ್‌ ಲಸಿಕೆ ವಿರುದ್ಧವೇ ಮಾತಾಡಿತು. ಈಗ ಲಸಿಕೆ, ಲಸಿಕೆ ಎನ್ನುತ್ತಿದೆ. ಇದು ಕಾಂಗ್ರೆಸ್‌ ನ ಇಬ್ಬಗೆ ನೀತಿ. ಸೋಂಕು ಹೆಚ್ಚುತ್ತಿದ್ದರೂ, ಲಾಕ್‌ಡೌನ್‌ ಜಾರಿಯಲ್ಲಿ ಇದ್ದರೂ ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರು ಬೀದಿಗೆ ಬಿದ್ದಿದ್ದಾರೆ. ಜನರಿಗೆ ನೆರವಾಗುವುದು ಇವರ ಉದ್ದೇಶವಲ್ಲ. ರಾಜಕೀಯ ಮೈಲೇಜ್‌ ಪಡೆಯುವುದು ಇವರ ಉದ್ದೇಶ. ಜೊತೆಗೆ ಸಿಎಂ ಆಗುವ ಕನಸುಗಳು. ಶಾಂತಿ ಕಾಲದಲ್ಲಿ ಕಾಂಗ್ರೆಸ್‌ ಕಲಹಕ್ಕೆ ಇಳಿದು ಲಾಭ ಪಡೆಯುತ್ತದೆ ಎಂಬುದಕ್ಕೆ ಇದು ಸಾಕ್ಷಿ ಎಂಧು ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಕಾಂಗ್ರೆಸ್‌, ಲಸಿಕೆಗಾಗಿ ಕೈಯಿಂದ 100 ಕೋಟಿ ಕೊಟ್ಟಂತೆ ಹೇಳಿದೆ. ಎಂಥ ವಂಚಕ ನಡೆ…?

ಲಸಿಕೆಗಾಗಿ ರೂ, 100 ಕೋಟಿ ಕೊಟ್ಟಿದ್ದಾಗಿ ಕಾಂಗ್ರೆಸ್‌ ಹೇಳುತ್ತಿದೆ. ಇದೇನು ಸಿದ್ದರಾಮಯ್ಯನವರ ಮನೆ ಗಂಟೇ? ಕಾಂಗ್ರೆಸ್‌ ಜನಪ್ರತಿನಿಧಿಗಳ ಕ್ಷೇತ್ರಾಭಿವೃದ್ಧಿ ನಿಧಿಯಲ್ಲವೇ? ಕ್ಷೇತ್ರಾಭಿವೃದ್ಧಿ ನಿಧಿಯನ್ನು ಸರ್ಕಾರಕ್ಕೇ ನೀಡಿರುವುದಾಗಿ ಹೇಳಬೇಕಿದ್ದ ಕಾಂಗ್ರೆಸ್‌, ಲಸಿಕೆಗಾಗಿ ಕೈಯಿಂದ 100 ಕೋಟಿ ಕೊಟ್ಟಂತೆ ಹೇಳಿದೆ. ಎಂಥ ವಂಚಕ ನಡೆ? ಎಂದು ಹೆಚ್.ಡಿಕೆ ವಾಗ್ದಾಳಿ ನಡೆಸಿದ್ದಾರೆ.

Key words: Siddaramaiah -does not want – people –Congress-Former CM -HD Kumaraswamy -Tong.