ವಿಮ್ಸ್ ಪ್ರಕರಣ ತನಿಖೆಗೆ ತಂಡ ರಚನೆ: ವರದಿ ಆಧರಿಸಿ ಕ್ರಮ: ಸಿಎಂ ಬೊಮ್ಮಾಯಿ

ಕಲಬುರಗಿ, ಸೆಪ್ಟೆಂಬರ್ 17,2022(www.justkannada.in): ಬಳ್ಳಾರಿ ವಿಜಯನಗರ ವೈದ್ಯಕೀಯ ಕಾಲೇಜಿನಲ್ಲಿ ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ರಚಿಸಿರುವ ತಂಡ ನಿನ್ನೆ ಭೇಟಿ ನೀಡಿದ್ದು, ತನಿಖಾ ವರದಿಯನ್ವಯ ಕ್ರಮ ಕೈಗೊಳ್ಳಲಾಗುವುದು. ಈ ಘಟನೆಯಿಂದ ತಮಗೂ ಅತ್ಯಂತ ನೋವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಭೇಟಿ ನೀಡಿಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗರಂ ಆಗಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬೊಮ್ಮಾಯಿ,  ಅವರು ಗರಂ ಆಗಿದ್ದಾರೋ ಇಲ್ಲವೋ ಎನ್ನುವುದು ಅವರಿಗೆ ಬಿಟ್ಟಿದ್ದು. ನಮ್ಮ ಕರ್ತವ್ಯ ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಹಿಂದಿನ ಎಲ್ಲ ಪ್ರಕರಣಗಳು ವಿಫಲವಾಗಿವೆ ಎಂದು ನುಡಿದರು.

Key words: Team -formed – investigate- ballari-Wims case- CM Bommai