ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರಕಾರದಿಂದ ಸಂಕ್ರಾಂತಿ ಗಿಫ್ಟ್ !

ವೇತನ ದುಪ್ಪಟ್ಟಿಗಿಂತಲೂ ಹೆಚ್ಚು, ಇಡೀ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ

ಮಾಸಿಕ 13 ಸಾವಿರ ರೂ. ಪಡೆಯುತ್ತಿದ್ದವರಿಗೆ 32 ಸಾವಿರ ರೂ.ಗೆ ಏರಿಕೆ

ತಿಂಗಳಿಗೆ 11 ಸಾವಿರ ರೂ. ಪಡೆಯುತ್ತಿದ್ದವರಿಗೆ 28 ಸಾವಿರ ರೂ.ಗೆ ಏರಿಕೆ

ಪ್ರತಿ ತಿಂಗಳ 10ನೇ ತಾರೀಖಿನೊಳಗೆ ವೇತನ ಪಾವತಿ ವ್ಯವಸ್ಥೆ

ಬೆಂಗಳೂರು 14, 01, 2022 (www.justkannada.in) : ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕಿಳಿದಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರಕಾರ ಸಂಕ್ರಾಂತಿಗೆ ಸಿಹಿಸುದ್ದಿ ಕೊಟ್ಟಿದ್ದು, ವೇತನವನ್ನು ದುಪ್ಪಟ್ಟಿಗಿಂತಲೂ ಹೆಚ್ಚು ಏರಿಸಿದೆ. ಜೊತೆಗೆ, ಸೆಮಿಸ್ಟರ್-ವಾರು ನೇಮಕಾತಿಯನ್ನು ನಿಲ್ಲಿಸಿ, ಇನ್ನು ಮುಂದೆ ಇಡೀ ಶೈಕ್ಷಣಿಕ ವರ್ಷಕ್ಕೆ ನೇಮಿಸಿ ಕೊಳ್ಳುವುದಾಗಿ ಘೋಷಿಸಿದೆ.

ಸರಕಾರದ ಪರವಾಗಿ ವಿಧಾನಸೌಧದಲ್ಲಿ ಶುಕ್ರವಾರ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ, ಇದಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ ಗೌರವಧನ ಪಡೆಯಲಿದ್ದಾರೆ ಎಂದು ಪ್ರಕಟಿಸಿದರು.

ಹಾಗೆಯೇ, ಯುಜಿಸಿ ಬಯಸುವ ಶೈಕ್ಷಣಿಕ ಅರ್ಹತೆ ಹೊಂದದೆ 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವವರಿಗೆ ಮಾಸಿಕ 28 ಸಾವಿರ ರೂ. ಮತ್ತು ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರಿಗೆ ಮಾಸಿಕ 26 ಸಾವಿರ ರೂ. ಗೌರವಧನ ನಿಗದಿಪಡಿಸಲಾಗಿದೆ. ಜತೆಗೆ, ಇವರು ನಿಗದಿತ ಶೈಕ್ಷಣಿಕ ಅರ್ಹತೆ ಗಳಿಸಿಕೊಳ್ಳಲು 3 ವರ್ಷಗಳ ಕಾಲಾವಕಾಶ ನೀಡಲಾಗಿದೆ. ಅತಿಥಿ ಉಪನ್ಯಾಸಕರಿಗೆಲ್ಲ ಇನ್ನು ಮುಂದೆ ಪ್ರತೀ ತಿಂಗಳು 10ರೊಳಗೆ ವೇತನ ಪಾವತಿಸಲಾಗುವುದು ಎಂದು ಅವರು ವಿವರಿಸಿದರು.

ಇದುವರೆಗೆ, ಯುಜಿಸಿ ನಿಗದಿತ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರು ತಿಂಗಳಿಗೆ 13 ಸಾವಿರ ರೂ. ಮತ್ತು ಮಿಕ್ಕವರು 11 ಸಾವಿರ ರೂ. ಗೌರವಧನ ಪಡೆಯುತ್ತಿದ್ದರು.

ಇದಲ್ಲದೆ, ಅತಿಥಿ ಉಪನ್ಯಾಸಕರ ಸುಗಮ ನೇಮಕಾತಿಗೆ ಆನ್-ಲೈನ್ ಪೋರ್ಟಲ್ಲನ್ನು ಸಹ ಅಭಿವೃದ್ಧಿ ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಇದರಲ್ಲಿ ಜ.17ರಿಂದ ಅರ್ಜಿ ಹಾಕಿಕೊಳ್ಳಬಹುದು. ಇದಕ್ಕೆ ಒಂದು ವಾರ ಕಾಲಾವಕಾಶವಿದ್ದು, ಅಭ್ಯರ್ಥಿಗಳು ತಮ್ಮ ಇಷ್ಟದ 5 ಸರಕಾರಿ ಕಾಲೇಜುಗಳನ್ನು ಸೂಚಿಸಲು ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಸೂಕ್ತ ಕಾರ್ಯಭಾರ ಇರುವಂತೆ ವ್ಯವಸ್ಥೆ ಮಾಡಲಾಗುವುದು  ಎಂದು ಅವರು ತಿಳಿಸಿದರು.

ಅತಿಥಿ ಉಪನ್ಯಾಸಕರ ಸಮಸ್ಯೆ/ಬೇಡಿಕೆಗಳ ಪರಿಹಾರಕ್ಕಾಗಿ ಸರ್ಕಾರವು ತಿಂಗಳ ಹಿಂದೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಿ, ವರದಿ ನೀಡಲು ಒಂದು ತಿನಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

`ಅತಿಥಿ ಉಪನ್ಯಾಸಕರ ಸಮಸ್ಯೆ 2002ರಿಂದಲೂ ಇತ್ತು. ಆದರೆ ಹಿಂದಿನ ಸರಕಾರಗಳು ಇದನ್ನು ಸರಿಯಾಗಿ ನಿಭಾಯಿಸದೆ ಇದ್ದುದರಿಂದ ಇದೊಂದು ಕಗ್ಗಂಟಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸಹಾನುಭೂತಿ ಮತ್ತು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ಕ್ಷಿಪ್ರ ಗತಿಯಲ್ಲಿ ಸ್ಪಂದಿಸಿದರು. ಇದರಿಂದಾಗಿ ಕೇವಲ ಒಂದು ತಿಂಗಳಲ್ಲಿ ಪರಿಹಾರ ರೂಪಿಸುವುದು ಸಾಧ್ಯವಾಯಿತು’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಉಪಸ್ಥಿತರಿದ್ದರು.

ಇದೊಂದು ಐತಿಹಾಸಿಕ ತೀರ್ಮಾನ. ಇದಕ್ಕೆ ಮಿಂಚಿನ ವೇಗದಲ್ಲಿ ಪರಿಹರ ಕೊಟ್ಟ ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ಬೋಧಕರು ಈ ಸಮಾಜದ ಸಂಪತ್ತು. ಅವರ ನೆಮ್ಮದಿಯೇ ಸಮಾಜದ ನೆಮ್ಮದಿ.

-ಡಾ.ಸಿ.ಎನ್. ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಸಚಿವ