ಬೆಂಗಳೂರು,ಆಗಸ್ಟ್,19,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಅವರನ್ನು ಮತ್ತೆ ಅಮಾನತು ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಶಿವಶಂಕರಪ್ಪ ಅವರ ವಿರುದ್ಧ ರಾಜ್ಯಪಾಲರು ಕೈಗೊಂಡಿದ್ದ ಅಮಾನತು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿ, ಅವರನ್ನು ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಮರು ನೇಮಕ ಮಾಡಿವಂತೆ ಆದೇಶಿಸಿದೆ. ಈ ಬೆನ್ನಲ್ಲೇ ಇದೀಗ, ರಾಜ್ಯ ಸರ್ಕಾರವು ಕಾನೂನು ಹೋರಾಟವನ್ನು ಮುಂದುವರಿಸಲು ನಿರ್ಧರಿಸಿದ್ದು, ಶಿವಶಂಕರಪ್ಪ ಅವರನ್ನು ಮತ್ತೆ ಅಮಾನತುಗೊಳಿಸಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಿದ್ಧತೆ ನಡೆಸಿದೆ.
ಈ ಹಿಂದಿನ ಅಮಾನತು ಪ್ರಕ್ರಿಯೆಯಲ್ಲಿ ಕಂಡುಬಂದಿದ್ದ ತಾಂತ್ರಿಕ ಲೋಪವೇ ಹೈಕೋರ್ಟ್ ಆದೇಶಕ್ಕೆ ಪ್ರಮುಖ ಕಾರಣವಾಗಿತ್ತು. ರಾಜ್ಯಪಾಲರು ಸಚಿವ ಸಂಪುಟದ ಸಲಹೆ ಶಿಫಾರಸ್ಸಿನ ಅನುಸಾರ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯಪಟ್ಟು ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ರದ್ದು ಮಾಡಿತ್ತು. ಅಲ್ಲದೆ 7 ದಿನದಲ್ಲಿ ಶಿವಶಂಕರಪ್ಪ ಅವರನ್ನು ಮತ್ತೆ ಕೆಪಿಎಸ್ ಸಿ ಅಧ್ಯಕ್ಷರನ್ನಾಗಿ ಮರು ನೇಮಿಸುವಂತೆ ಆದೇಶಿಸಿದೆ.
ಆದರೆ ಇದೀಗ ರಾಜ್ಯ ಸರ್ಕಾರ ಆಗಸ್ಟ್ 21 ರಂದು ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿ ಶಿವಶಂಕರಪ್ಪ ಅವರನ್ನು ಮತ್ತೆ ಅಮಾನತುಗೊಳಿಸಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
Key words: Government, recommend, Governor, suspension, KPSC, Shivashankarappa







