ರಾಜವಂಶಸ್ಥೆ ಪ್ರಮೋದಾದೇವಿ ಓಡೆಯರ್ ಅವರಿಂದ ಶ್ರೀರಂಗಪಟ್ಟಣ ದಸರಾ ಉದ್ಘಾಟನೆ

ಮಂಡ್ಯ, ಅಕ್ಟೋಬರ್ 05, 2023 ( www.justkannada.in); ಈ ಬಾರಿ ಅಕ್ಟೋಬರ್ 16 ರಂದು ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಶ್ರೀರಂಗಪಟ್ಟಣ ದಸರಾ-2023 ರ ಲೋಗೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು .

ಅಕ್ಟೋಬರ್ 16 ರಂದು ಮಧ್ಯಾಹ್ನ 3 ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ. ಮೂರು ದಿನಗಳ ಕಾರ್ಯಕ್ರಮ ನಡೆಯಲಿದ್ದು, ನಾಡಿನ ಪರಂಪರೆ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದರು‌.

ಈ ಹಿಂದೆ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಜನಪ್ರತಿನಿಧಿಗಳು, ಸಾಹಿತಿಗಳು, ಪ್ರಗತಿಪರರು ಉದ್ಘಾಟಿಸಿದ್ದು, ಈ ಬಾರಿ ಮೈಸೂರು ಮಹಾರಾಜ ವಂಶಸ್ಥರಾದ ಪ್ರಮೋದಾದೇವಿ ಓಡೆಯರ್ ಅವರಿಗೆ ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಅವಕಾಶ ನೀಡಿದ್ದೇವೆ ಎಂದರು.

ಬರ ಪರಿಸ್ಥಿತಿಯ ಹಿನ್ನಲೆ ಈ ಬಾರಿ ದಸರಾವನ್ನು ಸರಳ ಹಾಗೂ ಸಂಪ್ರದಾಯವಾಗಿ ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.

ಬರ ಅಧ್ಯಯನ ತಂಡವು ಇಂದು ರಾಜ್ಯಕ್ಕೆ ಆಗಮಿಸಿದ್ದು, ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಲಿದೆ ಎಂದರು‌.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವಿರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.