ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ

ಮಂಡ್ಯ, ಜೂನ್,26,2026 (www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಐವರು ಒಂದೇ ಕುಟುಂಬದ ಸದಸ್ಯರು ನೀರುಪಾಲಾಗಿ ಮೃತಪಟ್ಟ ಘಟನೆ ಇನ್ನೂ ಜನಮನದಿಂದ ಮಾಸುವ ಮುನ್ನವೇ, ಇದೀಗ ವೈದ್ಯರೊಬ್ಬರ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ನಿವಾಸಿ ಹಾಗೂ ವೈದ್ಯರಾಗಿದ್ದ ಡಾ. ರಕ್ಷಿತ್ ಗೌಡ ಅವರ ಮೃತದೇಹ ಇಂದು ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚೆಗೆ ಮುತ್ತತ್ತಿ ಕಾವೇರಿ ನದಿಯಲ್ಲಿ ಸೆಲ್ಫಿ ಹಾಗೂ ಫೋಟೋ ತೆಗೆಯುವ ವೇಳೆ ಒಂದೇ ಕುಟುಂಬದ ಐವರು ನೀರುಪಾಲಾಗಿದ್ದ ದುರಂತ ಸಂಭವಿಸಿತ್ತು. ಆ ಘಟನೆಗೆ ಸಂಬಂಧಿಸಿದಂತೆ ಪ್ರವಾಸಿಗರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಂದು ಜೀವಹಾನಿ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

Key words: Mutatti, Kaveri river, doctor, Body, found