ಬೆಂಗಳೂರು, ಆಗಸ್ಟ್, 16,2025 (www.justkannada.in): ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮೀಜಿ ಪ್ರತಿಕ್ರಿಯಿಸಿದ್ದು ಮತ್ತೆ ರಾಜಣ್ಣರನ್ನ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ಧಗಂಗಾ ಶ್ರೀಗಳು, ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದು ತೀವ್ರ ಆಘಾತ ಉಂಟು ಮಾಡಿದೆ. ತುಮಕೂರು ಜಿಲ್ಲೆಯಿಂದ ಕೆ.ಎನ್. ರಾಜಣ್ಣ ಮತ್ತು ಡಾ. ಜಿ.ಪರಮೇಶ್ವರ್ ಸಚಿವ ಸಂಪುಟದಲ್ಲಿದ್ದರು. ಇಬ್ಬರು ಉತ್ತಮ ಕೆಲಸ ಮಾಡುತ್ತಿದ್ದರು. ಸಹಕಾರಿ ಕ್ಷೇತ್ರದಿಂದಲೇ ಮೇಲೆ ಬಂದ ರಾಜಣ್ಣ ರೈತರಿಗೆ, ಜನಸಾಮಾನ್ಯರಿಗೆ ಹಾಗೂ ಸಂಘಟನೆಗಳಿಗೆ ಹೆಚ್ಚು ಸಹಾಯ ಮಾಡಬಹುದು ಎಂಬ ಕಾರಣಕ್ಕಾಗಿ ಸಹಕಾರ ಖಾತೆ ಪಡೆದು ಕೆಲಸ ಮಾಡುತ್ತಿದ್ದರು. ಇದ್ದಕ್ಕಿದ್ದ ಹಾಗೆ ಅವರನ್ನು ಸಂಪುಟದಿಂದ ವಜಾ ಮಾಡಿರುವುದನ್ನ ಕೇಳಿ ಆಘಾತವಾಯಿತು ಎಂದು ಬೇಸರ ವ್ಯಕ್ತಪಡಿಸಿದರು.
ರಾಜಣ್ಣ ನೇರ, ನಿಷ್ಟೂರವಾದಿ ಸ್ವಭಾವದವರು. ರಾಜಣ್ಣ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಶೀಘ್ರದಲ್ಲೇ ಕಗ್ಗಂಟು ಬಗೆ ಹರಿಯಲಿದೆ. ರಾಜಣ್ಣ ಮತ್ತೆ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಾರೆ ಎಂದು ಸಿದ್ದಲಿಂಗ ಸ್ವಾಮೀಜಿ ಅವರು ತಿಳಿಸಿದರು.
Key words: KN Rajanna, cabinet, Siddaganga Shri