Thursday, August 6, 2026

BDA Apartments

Home Crime ಲೋಕಾಯುಕ್ತ ಪೊಲೀಸರಿಂದ ಮುಡಾದ 18 ಅಧಿಕಾರಿಗಳಿಗೆ ನೋಟಿಸ್ ಜಾರಿ

ಲೋಕಾಯುಕ್ತ ಪೊಲೀಸರಿಂದ ಮುಡಾದ 18 ಅಧಿಕಾರಿಗಳಿಗೆ ನೋಟಿಸ್ ಜಾರಿ

ಮೈಸೂರು,ಸೆಪ್ಟಂಬರ್,10,2024 (www.justkannada.in): ಉಳ್ಳವರಿಗೆ ಹಂಚಿಕೆ ಮಾಡಿದ್ದ ನಿವೇಶನಗಳನ್ನ, ಪ್ರಾಧಿಕಾರದ ಆಸ್ತಿಯನ್ನು ವಶಕ್ಕೆ ಪಡೆಯುವಂತೆ  2017ರಲ್ಲಿ ಆರ್ ಟಿಐ ಕಾರ್ಯಕರ್ತ ಗಂಗರಾಜು ದೂರು ನೀಡಿದ್ದ ಕುರಿತು ದಾಖಲಾಗಿರುವ ಎಫ್ ಐಆರ್  ಸಂಬಂಧ ಇದೀಗ  ವಿಚಾರಣೆಗೆ ಹಾಜರಾಗುವಂತೆ ಮುಡಾದ 18 ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಮೂರು ದಿನಗಳ‌ ಒಳಗೆ ವಿಚಾರಣೆಗೆ ಹಾಜರಾಗುವಂತೆ ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.

ಸರ್ವೆ ನಂ.89 ಹಿನಕಲ್, ವಿಜಯ ನಗರ 2 ನೇ ಹಂತ, ಮೈಸೂರು ಇಲ್ಲಿ ಪ್ರಾಧಿಕಾರದ 7 ಎಕರೆ 18 ಗುಂಟೆ ಜಮೀನನ್ನ  ವಿಜಯ ನಗರ 2 ನೇ ಹಂತದ ಬಡಾವಣೆ ನಿರ್ಮಿಸಲು ಭೂ ಸ್ವಾದೀನಪಡಿಸಿಕೊಳ್ಳಲಾಗಿತ್ತು. 1996-97 ರಲ್ಲಿ ಹಿನಕಲ್ ಪಂಚಾಯತಿಯ ಅಂದಿನ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಮತ್ತು ಅಂದಿನ ಸದಸ್ಯರುಗಳು ಹಿನಕಲ್ ಬಡ ಜನರಿಗೆ ಆಶ್ರಯ ನಿವೇಶನ ರಚಿಸಿ ಹಂಚುತ್ತೇವೆ ಎಂದು ಪ್ರಾಧಿಕಾರದ ಆಸ್ತಿಗೆ ಅತಿಕ್ರಮ ಪ್ರವೇಶ ಮಾಡಿ ಪ್ರಾಧಿಕಾರದ ಅನುಮತಿ ಪಡೆಯದೇ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಪ್ರಾಧಿಕಾರದ ಆಸ್ತಿಯಲ್ಲಿ ಸುಮಾರು 350 ಕ್ಕೂ ಹೆಚ್ಚು 25*25 ಅಳತೆಯ ನಿವೇಶನಗಳನ್ನು ರಚಿಸಿದ್ದರು.

ಈ ನಿವೇಶನಗಳನ್ನ ಬಿಎಂಎಲ್ ನೌಕರರಿಗೆ, ಶಾಲಾ ಶಿಕ್ಷಕರಿಗೆ, ಪಂಚಾಯತ್ PDOಗಳಿಗೆ, ಪೋಸ್ಟ್ ಆಫೀಸ್ ನೌಕರರಿಗೆ, ಸರ್ಕಾರಿ ನೌಕರರಿಗೆ, ಪಂಚಾಯತ್ ಅಧ್ಯಕ್ಷರುಗಳಿಗೆ, ಉಪಾಧ್ಯಕ್ಷರುಗಳಿಗೆ, ಮೆಂಬರ್ ಗಳಿಗೆ ಇನ್ನಿತರೇ ಉಳ್ಳವರಿಗೆ ಹಂಚಿಕೆ ಮಾಡಿದ್ದರು.

ಈ ಸಂಬಂಧ 2017ರಲ್ಲಿ ಗಂಗರಾಜು ಎಂಬುವವರು  ಪ್ರಾಧಿಕಾರದ ಆಸ್ತಿಯನ್ನು ವಶಕ್ಕೆ ಪಡೆಯಲು ಪ್ರಾಧಿಕಾರಕ್ಕೆ ಹಾಗೂ ಎಸಿಬಿಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಎಫ್ಐಆರ್ ದಾಖಲು ಮಾಡಲು ಸರ್ಕಾರದಿಂದ ಅನುಮತಿ ನೀಡಲಾಗಿತ್ತು. ಅಂತೆಯೇ 2022ರಲ್ಲಿ ಎಸಿಬಿ ಎಫ್ಐಆರ್ ದಾಖಲು ಮಾಡಿದ್ದು ಇದು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿತ್ತು.

ಇದೀಗ ಲೋಕಾಯುಕ್ತ ಪೊಲೀಸರು  ಪ್ರಾಧಿಕಾರದ 18 ಅಧಿಕಾರಿಗಳಿಗೆ ವಿಚಾರಣೆಗೆ 3 ದಿನದೊಳಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ. ಮುಡಾ ಸೂಪರಿಂಟೆಂಡೆಂಟ್,  ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Lokayukta Police, issued, notice, Muda,18 officials