ಸಾಹಿತಿ,‌ ರಂಗಕರ್ಮಿ, ಕಲಾವಿದರ ಜತೆ ಸಭೆ: ಕನ್ನಡ ಕಲಿಕಾ‌‌ ಕೇಂದ್ರ‌ ಸ್ಥಾಪನೆಗೆ ಶೀಘ್ರ ಕ್ರಮ-ಸಚಿವ ಶಿವರಾಜ್ ತಂಗಡಗಿ.

ಮೈಸೂರು,ಸೆಪ್ಟಂಬರ್,4,2023(www.justkannada.in): ಹೊರ ರಾಜ್ಯದವರ ಕನ್ನಡ‌ ಭಾಷಾ ಕಲಿಕೆಗಾಗಿ ಕನ್ನಡ ಕಲಿಕಾ ಕೇಂದ್ರ ಸ್ಥಾಪನೆ ಮಾಡುವ ಸಂಬಂಧ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ಕರ್ನಾಟಕ‌ ಸುವರ್ಣ ಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ‌‌ ಸಹಯೋಗದಲ್ಲಿ ಮೈಸೂರಿನ ಕಿರುಕಲಾ ರಂಗ ಮಂದಿರದಲ್ಲಿ ಸೋಮವಾರ ಕರೆದಿದ್ದ ಸಾಹಿತಿ,‌ ರಂಗಕರ್ಮಿ‌ ಹಾಗೂ ಕಲಾವಿದರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಶಿವರಾಜ ತಂಗಡಗಿ, ಹೊರ ರಾಜ್ಯದಿಂದ‌ ಬಂದು ಕರ್ನಾಟಕದಲ್ಲಿ‌ ನೆಲೆಸುವ ಹೊರ ರಾಜ್ಯದವರಿಗೆ ಕನ್ನಡ ಭಾಷೆ ಕಲಿಸಬೇಕು ಎಂಬ ಬಗ್ಗೆ ಅಧಿಕಾರಿಗಳ‌ ಜತೆ‌ ಒಂದೆರೆಡು ಸುತ್ತಿ‌ನ ಸಭೆ ನಡೆಸಲಾಗಿದೆ. ಕನ್ನಡ ಕಲಿಕೆಗೆ ತಂತ್ರಾಂಶ ‌ಪರಿಚಯಿಸುವ ಸಂಬಂಧ ಕೂಡ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿಸಿದರು.

ನ.1ಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ನಡೆಸುವ ಬಗ್ಗೆ ಆಯವ್ಯಯದಲ್ಲಿ ಈಗಾಗಲೇ ಘೋಷಣೆ ಮಾಡಲಾಗಿದೆ. ರಾಜ್ಯದ ನಾಲ್ಕು ಕಂದಾಯ ವಿಭಾಗವಾರು ಸಾಹಿತಿಗಳ ಸಭೆ ಆಯೋಜನೆ ಮಾಡಿ ಸಲಹೆ ಪಡೆದುಕೊಳ್ಳಲಾಗಿದೆ.

ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ ಪರಂಪರೆ, ಕನ್ನಡದ ಇತಿಹಾಸ ಹಾಗೂ ಸಂಸ್ಕೃತಿ ಬಿಂಬಿಸುವ ಹಿನ್ನೆಲೆಯಲ್ಲಿ ಕನ್ನಡರಥ ರಾಜ್ಯವಿಡೀ ಸಂಚಾರ ಮಾಡುವುದು, 31 ಜಿಲ್ಲೆಗಳಲ್ಲಿ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಪ್ರತಿಮೆ‌ ನಿರ್ಮಾಣ, ಕುವೆಂಪು ಅವರ ಸಾಹಿತ್ಯವನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯಕ್ರಮ ಆಯೋಜನೆ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಭಾಗಿಯಾಗಿದ್ದ ಗಣ್ಯರ ಸನ್ಮಾನ,‌ ಗಡಿನಾಡಿನಲ್ಲಿ ಕನ್ನಡ ಬಿತ್ತುವುದು ಸೇರಿದಂತೆ ಹೀಗೆ ಹಲವು ಸಲಹೆಗಳು ಬಂದಿವೆ. ಈ ಸಲಹೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಚರ್ಚೆ ನಡೆಸಿ ಕಾರ್ಯಕ್ರಮದ ರೂಪುರೇಷೆಯನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.‌

ಮಾಜಿ ಮುಖ್ಯಮಂತ್ರಿ ‌ದಿ.ದೇವರಾಜ ಅರಸು ಅವರ ಅವಧಿಯಲ್ಲಿ‌ ಕರ್ನಾಟಕ‌ ಎಂದು ಹೆಸರು ನಾಮಕರಣ ಮಾಡಲಾಗಿತ್ತು. ಇದೀಗ ಮೈಸೂರು ಭಾಗದವರೇ ಆದ‌ ಸಿದ್ದರಾಮಯ್ಯ ಅವರ ಅವಧಿಯಲ್ಲಿ 50ರ ಸಂಭ್ರಮದಲ್ಲಿರುವುದು ಹೆಮ್ಮೆಯ ಸಂಗತಿ. ವರ್ಷವಿಡೀ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದರು.

ಶೀಘ್ರ ನೇಮಕ:

ಅಕಾಡೆಮಿ‌ ಹಾಗೂ ಪ್ರಾಧಿಕಾರಗಳಿಗೆ ಶೀಘ್ರವೇ ಅಧ್ಯಕ್ಷರ ನೇಮಕ ಮಾಡಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು  ಉತ್ತರಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿಗಳು  247 ಕೋಟಿ ರೂ. ಅನುದಾನ ನೀಡಿದ್ದಾರೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಸಭೆಯಲ್ಲಿ ಸಾಹಿತಿಗಳಾದ ಸಿ.ಪಿ.ಕೃಷ್ಣಕುಮಾರ್, ಹಿ.ಶಿ.ರಾಮಚಂದ್ರೇಗೌಡ, ಪ್ರಸನ್ನ, ಚನ್ನಿ‌ ಜನಾರ್ಧನ್,‌  ಮಂಡ್ಯ ರಮೇಶ್, ಪ್ರೊ. ಕೆ.ಎಸ್.ಭಗವಾನ್, ಬಿ.ಎಂ.ರಾಮಚಂದ್ರ, ಲತಾ ರಾಜಶೇಖರ್, ತುಳಸಿ ರಾಮಚಂದ್ರ, ಕಾಳೇಗೌಡ ನಾಗವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶ್ವನಾಥ್ ಹಿರೇಮಠ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್, ಅಧಿಕಾರಿಗಳಾದ ಮಧುಸೂದನ್ ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು.

ಈಶ್ವರಪ್ಪ ನಾಲಿಗೆ‌ ಬಿಗಿ ಹಿಡಿದು ಮಾತನಾಡಲಿ

ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವಾಗ ಮಾಜಿ‌ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ ಎಂದು ಸಚಿವ‌ ಶಿವರಾಜ್ ತಂಗಡಗಿ ಅವರು ಎಚ್ಚರಿಕೆ ನೀಡಿದರು.

ಸಿದ್ದರಾಮಯ್ಯ ಅವರು ಲಾಟರಿ ಮುಖ್ಯಮಂತ್ರಿ ಎಂಬ ಈಶ್ವರಪ್ಪ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಕೆ.ಎಸ್.ಈಶ್ವರಪ್ಪ ಅವರಿಗೆ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಮೊದಲು ಈಶ್ವರಪ್ಪ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ಸಂಬಂಧ ಅವರ ಪಕ್ಷದ ‌ವರಿಷ್ಠರಿಗೆ‌ ಸಲಹೆ ನೀಡಲಿ ಎಂದು ತೀಕ್ಷ್ಣವಾಗಿ ಹೇಳಿದರು.

ಕಾಂಗ್ರೆಸ್ ಗೆ ಶಾಸಕರ ಅಪರೇಷನ್ ಮಾಡುವ ಸ್ಥಿತಿ ಬಂದಿಲ್ಲ. 136 ಮಂದಿ ಶಾಸಕರಿದ್ದೇವೆ. ಅಪರೇಷನ್ ಹಸ್ತ ಮಾಡುವ ಅಗತ್ಯ ನಮಗೆ ಇಲ್ಲ. ನಮ್ಮ ಗ್ಯಾರಂಟಿಗಳಿಗೆ ಸಂಪೂರ್ಣ ಹೆದರಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ‌ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ. ನಾಲ್ಕು ವರ್ಷ ಬಿಜೆಪಿಯ ದುರಾಡಳಿತವನ್ನು ಜನತೆ ನೋಡಿದ್ದಾರೆ. ಬಿಜೆಪಿ‌ ಅವರು ಯಾವುದೇ‌ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಕೇವಲ‌ ಸುಳ್ಳು ಆಶ್ವಾಸನೆ ನೀಡುತ್ತಾ ಕಾಲ‌‌ ಕಳೆದಿದ್ದರು. ಹೀಗಾಗಿ ಜನತೆ ಬಿಜೆಪಿಯನ್ನು ವಿಪಕ್ಷ ಸ್ಥಾನದಲ್ಲಿ‌ ಕೂರಿಸಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ಛೇಡಿಸಿದರು.

Key words: Meeting -Minister -Shivraj Tandagi- – Kannada- learning -center.