Saturday, August 8, 2026

BDA Apartments

Home Front Page ಮಳೆ ಕೊರತೆ ಬೆಳೆ ಹಾನಿ: ರೈತರಿಗೆ ಅಗತ್ಯ ಪರಿಹಾರ ಕ್ರಮಗಳ ಕುರಿತು ಕ್ರಮ ವಹಿಸಿ- ಸಚಿವ...

ಮಳೆ ಕೊರತೆ ಬೆಳೆ ಹಾನಿ: ರೈತರಿಗೆ ಅಗತ್ಯ ಪರಿಹಾರ ಕ್ರಮಗಳ ಕುರಿತು ಕ್ರಮ ವಹಿಸಿ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಆಗಸ್ಟ್,8,2026 (www.justkannada.in):  ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಹೆಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕಕೆರೆಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಾಮನಹಳ್ಳಿಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಮಳೆ ಕೊರತೆಯಿಂದ ಹಾನಿಗೊಳಗಾದ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹಾನಿಗೊಳಗಾದ ಕೃಷಿ ಪ್ರದೇಶಗಳಿಗೆ ತೆರಳಿ ಬೆಳೆಗಳ ಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿದರು. ಬಳಿಕ ರೈತರೊಂದಿಗೆ ಸಂವಾದ ನಡೆಸಿ, ಮಳೆ ಕೊರತೆಯಿಂದ ಎದುರಾಗಿರುವ ಸಮಸ್ಯೆಗಳು ಹಾಗೂ ಬೆಳೆ ಹಾನಿಯ ಪ್ರಮಾಣದ ಕುರಿತು ಮಾಹಿತಿ ಪಡೆದುಕೊಂಡರು.

ಬೆಳೆ ಹಾನಿಯ ನಿಖರ ಪ್ರಮಾಣವನ್ನು ಸಮರ್ಪಕವಾಗಿ ದಾಖಲಿಸಿ, ವಸ್ತುನಿಷ್ಠ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ರೈತರಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳಂತೆ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

ಇದೇ ವೇಳೆ ಗ್ರಾಮದಲ್ಲಿ ಕುಡಿಯುವ ನೀರಿನ ಲಭ್ಯತೆ ಹಾಗೂ ಸಮರ್ಪಕ ನೀರು ಸರಬರಾಜು, ಜಾನುವಾರುಗಳಿಗೆ ಅಗತ್ಯವಿರುವ ಮೇವಿನ ಲಭ್ಯತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಡಿಯುವ ನೀರು ಮತ್ತು ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ರೈತರು ಹಾಗೂ ಗ್ರಾಮೀಣ ಜನತೆ ಎದುರಿಸುತ್ತಿರುವ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಅಗತ್ಯ ನೆರವು ಮತ್ತು ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Crop damage, Drought relief, farmers, Minister,  Dr. Yathindra Siddaramaiah